ಮಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅಶೋಕ ನಮನ 2025 ಕಾರ್ಯಕ್ರಮವನ್ನ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿದ್ದು, ಜನ ಅಸ್ವಸ್ಥಗೊಂಡಿದ್ದಾರೆ. ಸದ್ಯ ಅಸ್ವಸ್ಥಗೊಂಡವರನ್ನ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ.
ಪುತ್ತೂರು ತಾಲೂಕು ಕ್ರೀಡಾಂಗಣದಲ್ಲಿ ಹೆಚ್ಚಿನ ಜನಸಂಖ್ಯೆ ಸೇರುವುದಕ್ಕೆ ಅವಕಾಶವಿರಲಿಲ್ಲ. ಆದರೆ ಕ್ರೀಡಾಂಗಣದ ಅಗತ್ಯಕ್ಕಿಂತ ಹೆಚ್ಚಿನ ಜನ ಸೇರಿದ್ದರಿಂದ ನೂಕು ನುಗ್ಗಲು ಉಂಟಾಗಿದೆ. ನೂಕು ನುಗ್ಗಲಾಗಿದ್ದ ಕಾರಣ ಆಕ್ಸಿಜನ್ ಕೊರತೆ ಉಂಟಾಗಿದೆ. ಸೇರಿದ್ದ ಜನತೆಗೆ ಉಸಿರಾಟದ ಸಮಸ್ಯೆ ಉಂಟಾಗಿ ಅಸ್ವಸ್ಥರಾಗಿದ್ದಾರೆ.
ಸಿದ್ದರಾಮಯ್ಯ ಅವರ ಕಾರ್ಯಕ್ರಮಕ್ಕೆ ಸಣ್ಣ ಸಣ್ಣ ಮಕ್ಕಳನ್ನು ಕರೆದುಕೊಂಡು ಬಂದಿದ್ದರು. ಕುಡಿಯಲು ನೀರು ಇಲ್ಲದೆ, ಉಸಿರಾಡಲು ಗಾಳಿಯೂ ಆಡದೆ, ಕಷ್ಟಕರ ವಾತಾವರಣ ನಿರ್ಮಾಣವಾಗಿತ್ತು. ದೀಪಾವಳಿ ಹಬ್ಬದ ಹಿನ್ನೆಲೆ ಜನರಿಗೆ ತಟ್ಟೆ, ವಸ್ತ್ರ ಹಂಚಲು ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಇದನ್ನ ರೈ ಮಾಲಿಕತ್ವ ಎಸ್ಟೇಟ್ ಹಾಗೂ ಚಾರಿಟಬಲ್ ಟ್ರಸ್ಟ್ ವತಿಯಿಂದ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.
ಈ ಕಾರ್ಯಕ್ರಮದಲ್ಲಿ 11 ಜನ ಅಸ್ವಸ್ಥಗೊಂಡಿದ್ದು, ಯೋಗಿತ(20), ಸಭಾ ಮಾಡಾವು(20), ಆಮೀನಾ ಪಾಟ್ರಕೋಡಿ(56), ನೇತ್ರಾವತಿ ಇರ್ದೆ(37), ಲೀಲಾವತಿ ಕಡಬ(50), ವಸಂತಿ ಬಲ್ನಾಡ್ (53), ಕುಸುಮ( 62), ರತ್ನವತಿ ಪೆರಿಗೇರಿ (67), ಅಫೀಲಾ ಪಾಟ್ರಕೋಡಿ (20), ಸ್ನೇಹಪ್ರಭಾ (41) ಹಾಗೂ ಜಸೀಲಾ(30) ಎಂದು ಗುರುತಿಸಲಾಗಿದೆ. ಸದ್ಯ ಪುತ್ತೂರಿನ ಆಸ್ಪತ್ರೆಯಲ್ಲಿ ಎಲ್ಲರಿಗೂ ಚಿಕಿತ್ಸೆ ನೀಡಲಾಗುತ್ತಿದೆ.


