ಸಂತ ಸೇವಾಲಾಲರ 287 ನೇ ಜಯಂತಿ : ಕರಪತ್ರ ಬಿಡುಗಡೆ

1 Min Read

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 11 : ಸಮಾಜಕ್ಕೆ ಶಾಂತಿಯ ಸಂದೇಶವನ್ನು ಸಾರಿದ ಸಂತ ಸೇವಾಲಾಲರು ಮೂಢನಂಬಿಕೆ, ಕಂದಾಚಾರಗಳ ವಿರುದ್ದ ಹೋರಾಡಿದವರು ಎಂದು ಕರ್ನಾಟಕ ಬಂಜಾರ ಜನಜಾಗೃತಿ ಅಭಿಯಾನ ಸಮಿತಿಯ ಪ್ರಧಾನ ಕಾರ್ಯದರ್ಶಿ ಆರ್.ನಿಂಗಾನಾಯ್ಕ ಹೇಳಿದರು.

ನಾಳೆಯಿಂದ 15 ರವರೆಗೆ ಮೂರು ದಿನಗಳ ಕಾಲ ಸೂರಗೊಂಡನಕೊಪ್ಪದಲ್ಲಿ ನಡೆಯುವ ಸಂತ ಸೇವಾಲಾಲರ 287 ನೇ ಜಯಂತಿ ಪ್ರಯುಕ್ತ ಪ್ರವಾಸಿ ಮಂದಿರದಲ್ಲಿ ಬುಧವಾರ ಕರ ಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.

ಕರ್ನಾಟಕವಲ್ಲದೆ ನೆರೆಯ ಆಂಧ್ರ, ತೆಲಂಗಾಣ, ಗೋವಾ, ಮಹಾರಾಷ್ಟ್ರ, ತಮಿಳುನಾಡು ರಾಜ್ಯಗಳಿಂದ ಲಕ್ಷಾಂತರ ಭಕ್ತರು ಜಯಂತಿಯಲ್ಲಿ ಪಾಲ್ಗೊಳ್ಳುವರು. ಬಿಳಿ ವಸ್ತ್ರ ಧರಿಸಿ ಪಾದಯಾತ್ರೆ ಮೂಲಕ ಜಯಂತಿಗೆ ಆಗಮಿಸುತ್ತಿರುವ ಭಕ್ತರು ಸೇವಾಲಾಲ್‍ರವರ ಹೆಸರಿನಲ್ಲಿ ಪ್ರತಿ ಮನೆ ಮನೆಗೆ ಪ್ರಸಾದ ಹಂಚಲಿದ್ದಾರೆ. ಚಿತ್ರದುರ್ಗ ಜಿಲ್ಲೆಯಿಂದಲೂ ಲಕ್ಷಾಂತರ ಭಕ್ತರು ಸೇವಾಲಾಲರ ಜಯಂತಿಯಲ್ಲಿ ಭಾಗವಹಿಸಲಿದ್ದಾರೆಂದರು.
ಸಂತಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ ಪ್ರಧಾನ ಕಾರ್ಯದರ್ಶಿ ನರೇನಹಳ್ಳಿ ಅರುಣ್‍ಕುಮಾರ್ ಮಾತನಾಡಿ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲ್ಲೂಕು ಸೂರಗೊಂಡನಕೊಪ್ಪದಲ್ಲಿ ನಡೆಯುವ ಸಂತ ಸೇವಾಲಾಲರ 287 ನೇ ಜಯಂತಿಯನ್ನು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫೆ.14 ರಂದು ಮಧ್ಯಾಹ್ನ 2.30 ಕ್ಕೆ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಕೇಂದ್ರ ರೈಲ್ವೆ ಮಂತ್ರಿ ವಿ.ಸೋಮಣ್ಣ, ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಸಮಾಜ ಕಲ್ಯಾಣ ಸಚಿವ ಕೆ.ಹೆಚ್.ಮುನಿಯಪ್ಪ ಇನ್ನು ಅನೇಕರು ಆಗಮಿಸಲಿದ್ದಾರೆ. ಚಿತ್ರದುರ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಬಂಜಾರು ಸಮುದಾಯದವರು ಪಾಲ್ಗೊಳ್ಲುವಂತೆ ಮನವಿ ಮಾಡಿದರು.

ಕನ್ನಡ ಸೇನೆ ಜಿಲ್ಲಾಧ್ಯಕ್ಷ ರಮೇಶ್ ದೇವಪುರದಹಟ್ಟಿ, ಕರ್ನಾಟಕ ತಾಂಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಅನಿಲ್ ಭೀಮಸಮುದ್ರ, ಪ್ರಧಾನ ಕಾರ್ಯದರ್ಶಿ ನವೀನ್‍ನಾಯ್ಕ
ಉಪಾಧ್ಯಕ್ಷ ಜಿ.ಎಸ್.ಟಿ.ಚಂದ್ರನಾಯ್ಕ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

Share This Article
Enable Notifications OK No thanks