ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜೂನ್. 06 : ಸರ್ಕಾರಿ ಶಾಲೆಯಲ್ಲಿ ಓದಿದ ವಿದ್ಯಾರ್ಥಿಗಳಿಗೆ ಉದ್ಯೋಗದಲ್ಲಿ ಶೇ.5 ರಷ್ಟು ಮೀಸಲಾತಿ ನೀಡಬೇಕೆಂದು ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಗೌರವಾಧ್ಯಕ್ಷರು ಹಾಗೂ ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್ವುಲ್ಲಾ ಸರ್ಕಾರವನ್ನು ಒತ್ತಾಯಿಸಿದರು.

ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿಯಿಂದ ಪತ್ರಕರ್ತರ ಭವನದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಕೊಳಗೇರಿಯ ಬಡ ಮಕ್ಕಳಿಗೆ ನೋಟ್ಬುಕ್ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಓದುವ ಮಕ್ಕಳಿಗೆ ರಾಜ್ಯ ಸರ್ಕಾರ ಮೀಸಲಾತಿ ನೀಡಿದಂತೆ ನಗರ ಪ್ರದೇಶಗಳ ಸರ್ಕಾರಿ ಶಾಲೆಯಲ್ಲಿ ಓದುವ ಬಡ ಮಕ್ಕಳಿಗೂ ಶೇ.5 ರಷ್ಟು ಮೀಸಲಾತಿ ನೀಡಬೇಕು. ಇದರಿಂದ ಸರ್ಕಾರಿ ಉದ್ಯೋಗಕ್ಕೆ ಅನುಕೂಲವಾಗಲಿದೆ. ಕೊಳಗೇರಿ ಪ್ರದೇಶದ ಮಕ್ಕಳಿಗೆ ಸರ್ಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಬೇಕು. ಒಂದು ವೇಳೆ ಶೇ.5 ರಷ್ಟು ಮೀಸಲಾತಿ ಕೊಡದಿದ್ದರೆ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆಯಿಂದ ಹೋರಾಟ ಮಾಡಲಾಗುವುದೆಂದು ಎಚ್ಚರಿಸಿದರು.
ಕೊಳಗೇರಿ ನಿವಾಸಿಗಳು ಬಡತನ ಕಾರಣವನ್ನು ಮುಂದಿಟ್ಟು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಬೇಡಿ, ಹದಿನೆಂಟು ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ವಿವಾಹ ಮಾಡುವುದು ಶಿಕ್ಷಾರ್ಹ ಅಪರಾಧ ಎನ್ನುವುದನ್ನು ನೀವುಗಳು ತಿಳಿದುಕೊಂಡಿರಬೇಕೆಂದು ಕೊಳಗೇರಿ ಮಹಿಳೆಯರನ್ನು ಜಾಗೃತಿಗೊಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಸಿ.ರಂಗಾನಾಯ್ಕ ಮಾತನಾಡಿ ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರ ಎಲ್ಲಾ ರೀತಿಯ ಸೌಲಭ್ಯಗಳನ್ನು ನೀಡುತ್ತಿದೆ. ಕೊಳಗೇರಿ ನಿವಾಸಿಗಳು ಯಾರು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿಸಬಾರದು. ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್.ಕೆ.ಜಿ.ಯಿಂದ ಹಿಡಿದು ದ್ವಿತೀಯ ಪಿ.ಯು.ಸಿ.ವರೆಗೂ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತದೆ. ಇದರಿಂದ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶ ಪಡೆಯುವವರಿಗೆ ಸುಲಭವಾಗುತ್ತದೆ ಎಂದು ಹೇಳಿದರು.
ನ್ಯಾಯವಾದಿ ದಿಲ್ಶಾದ್ ಉನ್ನಿಸ ಮಾತನಾಡುತ್ತ ಇಂದಿನ ಮಕ್ಕಳು ಪುಸ್ತಕಗಳ ಹುಳುಗಳಾಗುತ್ತಿದ್ದಾರೆ. ಇಲ್ಲವೇ ಮೊಬೈಲ್ನಲ್ಲಿ ಮುಳುಗಿರುತ್ತಾರೆ. ಶಿಕ್ಷಣದ ಜೊತೆ ಆಟಕ್ಕೂ ಹೆಚ್ಚಿನ ಪ್ರಾಮುಖ್ಯತೆ ಕೊಡಬೇಕು. ಕೊಳಗೇರಿ ನಿವಾಸಿಗಳು ಮಕ್ಕಳಿಗೆ ಪಾರ್ಕ್, ಆಟದ ಮೈದಾನ ಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಮನವಿ ಕೊಡಬೇಕು. ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳು ಹಾಗೂ ಮಹಿಳೆಯರ ಮೇಲೆ ಅತ್ಯಾಚಾರಗಳು ನಡೆಯುತ್ತಿವೆ. ಮಕ್ಕಳು ದುಶ್ಚಗಳಿಗೆ ಬಲಿಯಾಗುತ್ತಿದ್ದಾರೆ. ಮಕ್ಕಳ ಆರೋಗ್ಯ ಹಾನಿಗೊಳಿಸುವ ಜಾಲವಿದೆ. ನಿಮ್ಮ ಮಕ್ಕಳು ಸರಿಯಾಗಿ ಶಾಲೆಗೆ ಹೋಗುತ್ತಿದ್ದಾರೋ ಇಲ್ಲವೋ ಎನ್ನುವುದರ ಕಡೆ ನಿಮ್ಮಗಳ ಗಮನವಿರಬೇಕೆಂದು ಕೊಳಗೇರಿ ನಿವಾಸಿಗಳಿಗೆ ತಿಳಿಸಿದರು.
ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಸಮಿತಿ ಅಧ್ಯಕ್ಷ ಗಣೇಶ್ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಸ್ವಾಲೇಹ, ಕೆ.ಕೆ.ಎನ್.ಎಸ್.ಎಸ್.ನ
ಲೀಲಾವತಿ, ಶಬಿನಾ ಇವರುಗಳು ವೇದಿಕೆಯಲ್ಲಿದ್ದರು. ಚಂದ್ರಮ್ಮ, ದೀಪ ಇನ್ನು ಅನೇಕರು ಸಮಾರಂಭದಲ್ಲಿ ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















