ಬೆಂಗಳೂರು : ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳಿಗೆ ಒಟ್ಟು 5,000 ಹೊಸ ಬಸ್ಗಳನ್ನು ಸೇರ್ಪಡೆಗೊಳಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆಎಸ್ಆರ್ಟಿಸಿ, ಕೆಕೆಆರ್ಟಿಸಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಬಿಎಂಟಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಸಚಿವರು ಈ ಮಾಹಿತಿ ಹಂಚಿಕೊಂಡರು. ಪ್ರಯಾಣಿಕರ ಸಂಖ್ಯೆ ಹಾಗೂ ಬೇಡಿಕೆಯನ್ನು ಪರಿಗಣಿಸಿ ನಾಲ್ಕು ಸಾರಿಗೆ ನಿಗಮಗಳಿಗೂ ಹೊಸ ಬಸ್ಗಳನ್ನು ಹಂತ ಹಂತವಾಗಿ ಹಂಚಿಕೆ ಮಾಡಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.
ರಾಜ್ಯ ಸರ್ಕಾರದ ಅನುದಾನದ ಮೂಲಕ ಮೊದಲ ಹಂತದಲ್ಲಿ 1,000 ಹೊಸ ಬಸ್ಗಳನ್ನು ಖರೀದಿಸಲಾಗುವುದು. ಉಳಿದ 4,000 ಎಲೆಕ್ಟ್ರಿಕ್ ಬಸ್ಗಳನ್ನು ಕೇಂದ್ರ ಸರ್ಕಾರದ ಆರ್ಥಿಕ ಸಹಾಯದೊಂದಿಗೆ ಖರೀದಿಸಲು ಯೋಜನೆ ರೂಪಿಸಲಾಗಿದೆ. ಇದರಿಂದ ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಗೆ ಉತ್ತೇಜನ ಸಿಗುವ ಜೊತೆಗೆ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸುವ ಗುರಿ ಸರ್ಕಾರದದ್ದಾಗಿದೆ.

ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆಯಾದ ಶಕ್ತಿ ಯೋಜನೆಯನ್ನು ಇನ್ನಷ್ಟು ಸುಗಮಗೊಳಿಸಲು ಫಲಾನುಭವಿಗಳಿಗೆ ಉಚಿತ ಸ್ಮಾರ್ಟ್ ಕಾರ್ಡ್ಗಳನ್ನು ವಿತರಿಸುವ ಯೋಜನೆಯೂ ಜಾರಿಗೆ ಬರಲಿದೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.ಈ ಕಾರ್ಡ್ಗಳ ಮೂಲಕ ಮಹಿಳೆಯರು ಸುಲಭವಾಗಿ ಹಾಗೂ ವೇಗವಾಗಿ ಉಚಿತ ಪ್ರಯಾಣದ ಸೌಲಭ್ಯವನ್ನು ಪಡೆಯಲು ಸಾಧ್ಯವಾಗಲಿದೆ.






