ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿ ಬಂದಿದ್ದರ ಹಿನ್ನೆಲೆ ಜಮೀರ್ ಆಪ್ತ ಕಾರ್ಯದರ್ಶಿ ಸರ್ಫರಾಜ್ ಮನೆ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರಿನ ಹಲಸೂರು ಮನೆ ಸೇರಿದಂತೆ 10 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿಯನ್ನ ನಡೆಸಿದ್ದಾರೆ.
ಸರ್ಫರಾಜ್ ಗೆ ಸೇರಿದ 5 ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೊಡಗಿನ ಮನೆ, ರೆಸಾರ್ಟ್ ಮೇಲೂ ದಾಳಿ ನಡೆಸಿದ್ದು, ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ. ಮನೆ ಹಾಗೂ ಕಚೇರಿಗಳ ಮೇಲೂ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ಆಗಿರುವಂತ ಶಿವಪ್ರಕಾಶ್ ದೇವರಾಜ್ ಅವರ ನೇತೃತ್ವದಲ್ಲಿ ಬೆಳ್ಳಂಬೆಳಗ್ಗೆ ಎಲ್ಲಾ ಕಡೆಯಲ್ಲೂ ಏಕಕಾಲಕ್ಕೆ ದಾಳಿಯನ್ನ ನಡೆಸಿದ್ದಾರೆ. ಈ ವೇಳೆ ಒಂದಷ್ಟು ಕಡತಗಳು ಹಾಗೂ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ.
ಇದರಿಂದ ಮುಂದಿನ ದಿನಗಳಲ್ಲಿ ಜಮೀರ್ ಅಹ್ಮದ್ ಅವರಿಗೆ ಸಂಕಷ್ಟ ಎದುರಾಗಬಹುದು. ಯಾಕಂದ್ರೆ ಜಮೀರ್ ಅಹ್ಮದ್ ವಿರುದ್ಧ ಆರೋಪ ಕೇಳಿ ಬಂದ ಕೂಡಲೇ ಲೋಕಾಯುಕ್ತ ಅಧಿಕಾರಿಗಳು ತನಿಖೆಯನ್ನು ನಡೆಸಿದ್ದಾರೆ. ಆ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಸರ್ಫರಾಜ್ ಖಾನ್ ವಿರುದ್ಧವೂ ಒಂದಷ್ಟು ದಾಖಲೆಗಳು ಸಿಕ್ಕಿವೆ ಎನ್ನಲಾಗಿತ್ತು. ಆ ಆಧಾರದ ಮೇಲೆ ಈ ದಾಳಿಯನ್ನ ನಡೆಸಲಾಗಿದೆ. ಇಂದು ಕೂಡ ಸಿಕ್ಕ ದಾಖಲೆಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ. ಜೊತೆಗೆ ಒಂದಷ್ಟು ದಾಖಲೆಗಳನ್ನ ಲೋಕಾಯುಕ್ತ ಅಧಿಕಾರಿಗಳೇ ಕೇಳಿದ್ದಾರೆ ಎನ್ನಲಾಗಿದೆ. ಅದರಲ್ಲೂ 50 ಕ್ಕೂ ಅಧಿಕ ಅಧಿಕಾರಿಗಳಿಂದ ಈ ದಾಳಿ ಮುಂದುವರೆದಿದೆ.







