ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ : ಡಿಡಿಪಿಐ ಮಂಜುನಾಥ ಅವರಿಂದ ಉದ್ಘಾಟನೆ

2 Min Read

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ. 12 : ವಿಕಲಚೇತನ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಅವಕಾಶ ಕಲ್ಪಿಸಿದಾಗ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಂ.ಆರ್.ಮಂಜುನಾಥ್ ದೈಹಿಕ ಶಿಕ್ಷಕರುಗಳಿಗೆ ಸಲಹೆ ನೀಡಿದರು.

 

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ವತಿಯಿಂದ ಸ್ಟೇಡಿಯಂನಲ್ಲಿ ಸೋಮವಾರ ನಡೆದ 2025-26 ನೇ ಸಾಲಿನ ಹದಿನಾಲ್ಕರಿಂದ ಹದಿನೇಳು ವರ್ಷದೊಳಗಿನ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿಶೇಷ ಚೇತನ ಮಕ್ಕಳ ಕ್ರೀಡಾಕೂಟವನ್ನು ಗುಂಡು ಎಸೆಯುವ ಮೂಲಕ ಉದ್ಗಾಟಿಸಿ ಮಾತನಾಡಿದರು.

ಸೋಲು-ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ. ಜಿಲ್ಲಾ ಮಟ್ಟದಲ್ಲಿ ಗೆದ್ದು, ರಾಜ್ಯ ಮಟ್ಟದಲ್ಲಿಯೂ ಜಯಗಳಿಸುವ ಮೂಲಕ ಜಿಲ್ಲೆಗೆ ಕೀರ್ತಿ ತರುವಂತೆ ವಿಶೇಷ ಮಕ್ಕಳಿಗೆ ಶುಭ ಹಾರೈಸಿದ ಎಂ.ಆರ್.ಮಂಜುನಾಥ್ ತೀರ್ಪುಗಾರರು ಯಾವುದೇ ತಾರತಮ್ಯವಿಲ್ಲದೆ ತೀರ್ಪು ನೀಡುವಂತೆ ತಿಳಿಸಿದರು.

 

ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ರಾಜ್ಯ ಆಡಳಿತ ಮಂಡಳಿ ಸದಸ್ಯ ಎಂ.ಕೆ.ಅನಂತರೆಡ್ಡಿ ಮಾತನಾಡಿ ವಿಕಲಚೇತನ ಮಕ್ಕಳು ಸಾಕಷ್ಟು ಸೌಲಭ್ಯಗಳಿಂದ ವಂಚಿತರಾಗಿದ್ದಾರೆ.

ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯಿಂದ ಏನು ಸಹಾಯ ಮಾಡಲು ಅವಕಾಶವಿದೆಯೋ ಅದನ್ನು ವಿಶೇಷ ಚೇತನ ಮಕ್ಕಳಿಗೆ ತಲುಪಿಸುವಲ್ಲಿ ಪ್ರಾಮಾಣಿವಾಗಿ ಶ್ರಮಿಸುತ್ತೇನೆ. ಅಂಗವಿಕಲರಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ ಎಂದು ಹೇಳಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಹಂತೇಶ್ ಮಾತನಾಡಿ ವಿಶೇಷ ಚೇತನ ಮಕ್ಕಳು ಕೀಳರಿಮೆಯನ್ನು ಬಿಟ್ಟು ಕ್ರೀಡೆಯಲ್ಲಿ ಭಾಗವಹಿಸಿದಾಗ ಏನಾದರೂ ಸಾಧನೆ ಮಾಡಬಹುದು. ನಮ್ಮ ದೇಶದ ಅನೇಕ ಅಂಗವಿಕಲರು ಕ್ರೀಡೆಯಲ್ಲಿ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ. ಅವರುಗಳನ್ನು ನೀವುಗಳು ಮಾದರಿಯಾಗಿಟ್ಟುಕೊಳ್ಳಬೇಕು. ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವವರು ಹೆಚ್ಚು ಪದಕಗಳನ್ನು ಗಳಿಸಿ ಜಿಲ್ಲೆಗೆ ಕೀರ್ತಿ ತರಬೇಕೆಂದು ಮನವಿ ಮಾಡಿದರು.

ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಕಾರ್ಯದರ್ಶಿ ಮಜಹರ್‍ವುಲ್ಲಾ, ನಿರ್ದೇಶಕರುಗಳಾದ ಗುರುಮೂರ್ತಿ, ಸುರೇಶ್, ಶಿವರಾಂ, ಸಾರ್ವಜನಿಕ ಶಿಕ್ಷಣ ಇಲಾಖೆಯ ಡಿವೈಪಿಸಿ ವೆಂಕಟೇಶಪ್ಪ, ವಿದ್ಯಾಧಿಕಾರಿ ಎನ್.ಆರ್.ತಿಪ್ಪೇಸ್ವಾಮಿ, ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಗ್ರೇಡ್-2 ಅಧ್ಯಕ್ಷೆ ಲತ
ದೈಹಿಕ ಶಿಕ್ಷಣಾಧಿಕಾರಿ ಎ.ಚಿದಾನಂದಸ್ವಾಮಿ, ಜಿಲ್ಲೆಯ ಆರು ತಾಲ್ಲೂಕಿನ ದೈಹಿಕ ಶಿಕ್ಷಣ ಪರಿವೀಕ್ಷಕರುಗಳು, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಕಲ್ಲೇಶ್‍ಮೌರ್ಯ ಇವರುಗಳು ವೇದಿಕೆಯಲ್ಲಿದ್ದರು.

Share This Article
Enable Notifications OK No thanks