ಸುದ್ದಿಒನ್, ಚಿತ್ರದುರ್ಗ, ಜನವರಿ. 19 : ಕಳೆದ ವರ್ಷ ಹಾಸ್ಟೆಲ್ನಲ್ಲಿನ ಮಕ್ಕಳ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಫಲಿತಾಂಶಗಳು ತೀವ್ರ ಕಡಿಮೆ ಪ್ರಮಾಣದ್ದಾಗಿದ್ದು, ಫಲಿತಾಂಶ ಸುಧಾರಣೆ ನಿಟ್ಟಿನಲ್ಲಿಯೂ ಸೂಕ್ತ ಕ್ರಮ ಆಗಬೇಕು ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹೇಳಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಹಾಸ್ಟೆಲ್ಗಳಲ್ಲಿ ಮೂಲಭೂತ ಸೌಕರ್ಯದ ಕೊರತೆ, ಶೌಚಾಲಯಗಳ ಸ್ಥಿತಿಗತಿ ಶೋಚನೀಯವಾಗಿವೆ. ಅಧಿಕಾರಿಗಳು ಕಾಲಕಾಲಕ್ಕೆ ಹಾಸ್ಟೆಲ್ಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಶನಿವಾರ, ಭಾನುವಾರ ರಜೆ ಸಂದರ್ಭದಲ್ಲಿ ಹಾಸ್ಟೆಲ್ನಿಂದ ತೆರಳುವ ಮಕ್ಕಳ ಬಗ್ಗೆ ಸೂಕ್ತ ನಿಗಾ ಇಡುವುದು ಅಗತ್ಯವಾಗಿದೆ. ಹಾಸ್ಟೆಲ್ಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯವಿದ್ದು, ಇದಕ್ಕೆ ಅನುಗುಣವಾಗಿಯೇ ಆಹಾರ ಮತ್ತಿತರ ಬಿಲ್ಗಳು ಪಾವತಿಯಾಗಬೇಕು ಎಂದು ಅವರು ಹೇಳಿದರು.
ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಈ ವರ್ಷ ಪರಿಣಾಮಕಾರಿಯಾಗಿ ಅನುಷ್ಟಾನ ಮಾಡಲಾಗುತ್ತಿದೆ. ಹೀಗಾಗಿ ಈ ವರ್ಷ ಉತ್ತಮ ಫಲಿತಾಂಶದ ನಿರೀಕ್ಷೆ ಇದೆ. ಹಾಸ್ಟೆಲ್ಗಳಲ್ಲಿ ಮೂಲಭೂತ ಸೌಕರ್ಯ ಹೆಚ್ಚಿನ ನಿಟ್ಟಿನಲ್ಲಿಯೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಿ.ಪಂ. ಸಿಇಒ ಆಕಾಶ್ ಹೇಳಿದರು.
ಪಡಿತರ ಅಕ್ಕಿ ಅಕ್ರಮ ಸಾಗಾಣಿಕೆ ತಡೆಗೆ ಕಠಿಣ ಕ್ರಮ ಅಗತ್ಯ : ಜಿಲ್ಲೆಯ ವಿವಿಧೆಡೆ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿ ಅಕ್ರಮವಾಗಿ ಕಳ್ಳ ಸಾಗಾಣಿಕೆಯಾಗುತ್ತಿದ್ದು, ಈ ಕುರಿತು ಆಹಾರ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಬಡವರಿಗಾಗಿ ಸರ್ಕಾರ ನೀಡುತ್ತಿರುವ ಅಕ್ಕಿ ಈ ರೀತಿ ಅಕ್ರಮಗಳಿಗೆ ಬಳಕೆಯಾಗುತ್ತಿರುವ ಬಗ್ಗೆ ಅಧಿಕಾರಿಗಳು ಸುಮ್ಮನೆ ನೋಡಿಕೊಂಡು ಕೂರುವುದು ಸಮಂಜಸ ಅಲ್ಲ ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹೇಳಿದರು.
ಆಹಾರ ಇಲಾಖೆ ಉಪನಿರ್ದೇಶಕ ಶಿದ್ರಾಮ ಮಾರಿಹಾಳ ಅವರು, ಪಡಿತರ ಅಕ್ಕಿ ಅಕ್ರಮ ಸಾಗಾಣಿಕೆ ಪ್ರಕರಣಗಳಲ್ಲಿ ಸಂಬಂಧಪಟ್ಟವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳು ತಮ್ಮ ಕುಟುಂಬಕ್ಕೆ ಬೇಕಾದ್ದಷ್ಟನ್ನು ಉಳಿಸಿಕೊಂಡು, ಹೆಚ್ಚುವರಿ ಅಕ್ಕಿಯನ್ನು ಮಾರಾಟ ಮಾಡುತ್ತಿದ್ದು, ಇಂತಹ ಅಕ್ಕಿಯನ್ನು ಅಕ್ರಮ ಸಾಗಾಣಿಕೆಗೆ ಬಳಸುತ್ತಿರುವುದು ಕಂಡುಬರುತ್ತಿದೆ. ಅಕ್ರಮದಲ್ಲಿ ಸಹಕರಿಸಿದ ಜಿಲ್ಲೆಯ 04 ನ್ಯಾಯಬೆಲೆ ಅಂಗಡಿಗಳ ಪರವಾನಗಿಯನ್ನು ಅಮಾನತು ಮಾಡಲಾಗಿದೆ. ಅಕ್ಕಿಯ ಜೊತೆಗೆ ತೊಗರಿ ಬೇಳೆ, ಅಡುಗೆ ಎಣ್ಣೆ, ಸಕ್ಕರೆ ಮತ್ತು ಉಪ್ಪು ಸೇರಿದಂತೆ ಇಂದಿರಾ ಕಿಟ್ ಅನ್ನು ಅನ್ನಭಾಗ್ಯ ಫಲಾನುಭವಿಗಳಿಗೆ ನೀಡುವ ಯೋಜನೆಗೆ ಸಿದ್ಧತೆ ನಡೆದಿದ್ದು, ಶೀಘ್ರದಲ್ಲೇ ಜಾರಿಯಾಗಲಿದೆ ಎಂದರು.



