Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಯಕನಹಟ್ಟಿ ಜಾತ್ರೆಯಲ್ಲಿ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಸಕಲ ಸಿದ್ಧತೆ ಕೈಗೊಳ್ಳಿ

---Advertisement---

 

ಚಿತ್ರದುರ್ಗ. ಫೆ.19 : ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರೆಯನ್ನು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ನಡೆಸಲು ಸಕಲ ಸಿದ್ಧತೆ ಕೈಗೊಳ್ಳಬೇಕು. ಜಾತ್ರೆಯ ಯಶಸ್ವಿಗಾಗಿ ರಚಿಸಿರುವ ಉಪ ಸಮಿತಿಗಳು ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಗ್ರಾಮದ ಶ್ರೀ ಗುರುತಿಪ್ಪೇರುದ್ರಸ್ವಾಮಿ ಕ್ಷೇತ್ರದಲ್ಲಿ ಇದೇ ಫೆ.27 ರಿಂದ ಮಾರ್ಚ್ 09 ರವರೆಗೆ ಜಾತ್ರೆ ನಡೆಯಲಿದ್ದು, ಮಾರ್ಚ್ 06ರಂದು ರಥೋತ್ಸವ ನಡೆಯಲಿರುವ ಪ್ರಯುಕ್ತ ಜಾತ್ರೆಯ ಕೆಲಸ ಕಾರ್ಯಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಾಯಕನಹಟ್ಟಿ ಜಾತ್ರೆಗೆ ಚಿತ್ರದುರ್ಗ ಜಿಲ್ಲೆ, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಆಗಮಿಸುವುದರಿಂದ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರ ವಹಿಸಬೇಕು. ನೀರಿನ ಟ್ಯಾಂಕ್‍ಗಳನ್ನು ಕಡ್ಡಾಯವಾಗಿ ಸ್ವಚ್ಛಗೊಳಿಸಬೇಕು. ನೀರು ಕಲುಷಿತವಾಗಂತೆ ಕ್ರಮವಹಿಸುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ಪಂಚಾಯತ್‍ನ ನೀರು ಪರೀಕ್ಷಾ ಘಟಕದಿಂದ ವರದಿ ಪಡೆದುಕೊಳ್ಳಬೇಕು. ನೀರು ಪೂರೈಕೆಯ ಮೂಲ ಮತ್ತು ವಿತರಣಾ ಕೇಂದ್ರ ಎರಡು ಕಡೆಗಳಲ್ಲಿ ನೀರಿನ ಮಾದರಿಯನ್ನು ಪಡೆದು, ಗುಣಮಟ್ಟ ಪರಿಶೀಲಿಸಬೇಕು.  ಕುಡಿಯುವ ನೀರು ಸ್ವಚ್ಛತೆ ಕುರಿತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸವಂತೆ ತಾಕೀತು ಮಾಡಿದರು.

 

ಜಾತ್ರೆಗೆ ಬರುವ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಈಗಾಗಲೇ ಇರುವ ನೀರಿನ ತೊಟ್ಟಿಗಳನ್ನು ತಕ್ಷಣವೇ ದುರಸ್ತಿಗೊಳಿಸಲು ಗ್ರಾಮ ಪಂಚಾಯಿತಿ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.

 

ಪ್ರಸ್ತುತ ಬಿಸಿಲಿನ ತಾಪ ಹೆಚ್ಚಾಗುತ್ತಿರುವುದರಿಂದ ಆರೋಗ್ಯ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು.  ಜಾತ್ರೆಗೆ ಬರುವ ಭಕ್ತಾದಿಗಳಿಗೆ ಬಿಸಿಲಿನ ತಾಪ ತಟ್ಟದಂತೆ ಮುನ್ನೆಚ್ಚರಿಕೆ ವಹಿಸಿ, ಸ್ಥಳೀಯವಾಗಿ ಓಆರ್‍ಎಸ್ ಪ್ಯಾಕೆಟ್‍ಗಳು ಮತ್ತು ಅಗತ್ಯ ಔಷಧಗಳನ್ನು ಸನ್ನದ್ಧವಾಗಿಟ್ಟುಕೊಳ್ಳಬೇಕು. ಬಿಸಿಲಿನಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಫಲಕಗಳನ್ನು ಅಲ್ಲಲ್ಲಿ ಹಾಕಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

 

ಯಾವುದೇ ತುರ್ತು ಪರಿಸ್ಥಿತಿ ಎದುರಿಸಲು ಜಾತ್ರಾ ಸಮಯದಲ್ಲಿ ನಾಲ್ಕು ಪ್ರಥಮ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಇದರೊಂದಿಗೆ ನಾಲ್ಕು ಆಂಬ್ಯುಲೆನ್ಸ್‍ಗಳನ್ನು ದಿನದ 24 ಗಂಟೆಯೂ ಕಾರ್ಯಾಚರಣೆಯಲ್ಲಿರುವಂತೆ ನಿಯೋಜಿಸಲಾಗಿದೆ. ಸಮೀಪದ ಸಿ.ಹೆಚ್.ಸಿ ಆಸ್ಪತ್ರೆಯಲ್ಲಿ ಒಟ್ಟು 60 ಹಾಸಿಗೆಗಳನ್ನು ಕಾಯ್ದಿರಿಸಲಾಗಿದ್ದು, ಮಕ್ಕಳ ವೈದ್ಯರು ಸೇರಿದಂತೆ ತಜ್ಞ ವೈದ್ಯರ ತಂಡವು ಸ್ಥಳದಲ್ಲಿ ಲಭ್ಯವಿರಲಿದೆ.  ಸುಮಾರು 200 ಸಿಬ್ಬಂದಿಗಳನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಚಳ್ಳಕೆರೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಕಾಶೀ ಮಾಹಿತಿ ನೀಡಿದರು.

 

ಜಾತ್ರಾ ಮಹೋತ್ಸದಲ್ಲಿ ಎಲ್ಲ ಪಾರ್ಕಿಂಗ್ ಸ್ಥಳಗಳಲ್ಲಿಯೂ ಲೈಟಿಂಗ್ ವ್ಯವಸ್ಥೆ ಕಣ್ಗಾವಲು ಹೆಚ್ಚಿಸಲು ಈಗಾಗಲೇ ಇರುವ 24 ಸಿಸಿ ಟಿವಿಗಳ ಜೊತೆಗೆ ಹೆಚ್ಚುವರಿಯಾಗಿ 50 ಹೊಸ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕಿದೆ. ಯಾವುದೇ ಅನಾಹುತಗಳನ್ನು ತಡೆಯಲು ಮತ್ತು ತುರ್ತು ರಕ್ಷಣಾ ಕಾರ್ಯಗಳಿಗಾಗಿ ಎನ್.ಡಿ.ಆರ್.ಎಫ್ ತಂಡ ನಿಯೋಜನೆ, ಜನಸಂದಣಿ ನಿಯಂತ್ರಿಸಲು ಮತ್ತು ಅಗತ್ಯ ಮಾಹಿತಿ ನೀಡಲು ಜಾತ್ರೆಯ ವಿವಿಧೆಡೆ ಧ್ವನಿವರ್ಧಕಗಳ ಅಳವಡಿಸಬೇಕು. ವಿದ್ಯುತ್ ವ್ಯತ್ಯಯವಾದರೂ ಅನೌನ್ಸ್‍ಮೆಂಟ್ ಮುಂದುವರಿಯಲು ಜನರೇಟರ್ ಬ್ಯಾಕಪ್ ವ್ಯವಸ್ಥೆ ಕಲ್ಪಿಸಬೇಕು ಎಂದು ಪೊಲೀಸ್ ಅಧಿಕಾರಿಗಳು ಸಲಹೆ ನೀಡಿದರು.

 

ರಥಬೀದಿಯಲ್ಲಿರುವ ಹಳೆಯ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ಗುರುತಿಸಿ, ಅವುಗಳ ಮೇಲೆ ಜನರು ಹತ್ತದಂತೆ ಎಚ್ಚರಿಕೆ ವಹಿಸಲು ಮತ್ತು ಮಾಲೀಕರಿಗೆ ನೋಟಿಸ್ ನೀಡುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್ ಮಾತನಾಡಿ, ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಾತ್ರೆಯು ಯಶಸ್ವಿವಾಗಿ ಆಗಬೇಕು. ಕಳೆದ ವರ್ಷ 5 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿತ್ತು. ಈ ಬಾರಿ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಈ ವ್ಯಾಪ್ತಿಯನ್ನು 10 ಕಿ.ಮೀ ಗೆ ವಿಸ್ತರಿಸಲು, ಎರಡು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಲು ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ತಾತ್ಕಾಲಿಕ ಆರೋಗ್ಯ ಕೇಂದ್ರಗಳ ಸ್ಥಾಪನೆ ಮತ್ತು ಜಾತ್ರೆಯಲ್ಲಿ ವಿತರಿಸುವ ಪ್ರಸಾದದ ಗುಣಮಟ್ಟ ಪರೀಕ್ಷಿಸಲು ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಸ್ತೆ ದುರಸ್ತಿ, ಕುಡಿಯುವ ನೀರು, ನಿರಂತರ ವಿದ್ಯುತ್ ಸರಬರಾಜು ಮತ್ತು ಹೆಚ್ಚುವರಿ ಕೆಎಸ್‍ಆರ್‍ಟಿಸಿ ಬಸ್‍ಗಳ ವ್ಯವಸ್ಥೆಗಾಗಿ ಸಂಬಂಧಪಟ್ಟ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ. ಜಾತ್ರೆಗೆ ಬರುವ ಸುಮಾರು 2,500ಕ್ಕೂ ಹೆಚ್ಚು ಪೆÇಲೀಸ್ ಸಿಬ್ಬಂದಿಗಳಿಗೆ ವಸತಿ ಸೌಕರ್ಯದ ವ್ಯವಸ್ಥೆ ಕಲ್ಪಿಸಬೇಕಿದೆ. ಯಾವುದೇ ಅಹಿತಕರ ಘಟನೆ ಹಾಗೂ ತುರ್ತು ಪರಿಸ್ಥಿತಿ ಎದುರಾದರೆ ತಕ್ಷಣ ಸ್ಪಂದಿಸಲು ಆಂಬ್ಯುಲೆನ್ಸ್ ಮತ್ತು ವೈದ್ಯಕೀಯ ತಂಡದೊಂದಿಗೆ ಹಿಂದೂ ಮಹಾಗಣಪತಿ ಶೋಭಾಯಾತ್ರೆ ಸಂದರ್ಭದಲ್ಲಿ ಅಳವಡಿಸಿಕೊಂಡ ಮಾದರಿಯಂತೆ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ ಸಿದ್ಧವಿರಲು ಕ್ರಮ ವಹಿಸಲಾಗುವುದು.  ಜಾನುವಾರುಗಳಿಗೆ ತುರ್ತು ವೈದ್ಯಕೀಯ ಸೇವೆ, ಅಗ್ನಿಶಾಮಕ ದಳಗಳ ನಿಯೋಜನೆ, ರಥದ ಸುರಕ್ಷತೆ ಕುರಿತಂತೆಯೂ ಸಂಬಂಧಿಸಿದ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ಅನಿಷ್ಟ ಪದ್ಧತಿಗಳ ಆಚರಣೆ ಜರುಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ತಿಳಿಸಿದರು.

 

ಜಾತ್ರೆಯ ಮಾರ್ಗಗಳಲ್ಲಿ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ರಸ್ತೆಗಳನ್ನು ತಗ್ಗು, ಗುಂಡಿ ಮುಕ್ತಗೊಳಿಸಲು ಮತ್ತು ಚರಂಡಿಗಳನ್ನು ಸ್ವಚ್ಛಗೊಳಿಸಲು ಸಂಬಂಧಪಟ್ಟ ಇಲಾಖೆಗಳು ಅಗತ್ಯ ಕ್ರಮವಹಿಸಬೇಕು. ರಸ್ತೆ ಬದಿಯ ಒತ್ತುವರಿ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಜಾತ್ರೆಯಲ್ಲಿ ಪ್ರಾಣಿ ಬಲಿಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ಚೆಕ್‍ಪೋಸ್ಟ್ ತೆರೆದು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು. ಅಷ್ಟೇ ಅಲ್ಲದೆ, ಜಾತ್ರೆಯ ಸುತ್ತಮುತ್ತಲ ನಿಗದಿತ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮತ್ತು ಸೇವನೆಯ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲು ಪೊಲೀಸ್ ಇಲಾಖೆ ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.

 

ಬ್ಯಾನರ್ ಮುಕ್ತ ಜಾತ್ರೆ: ಈ ಬಾರಿಯ ಜಾತ್ರೆಯಲ್ಲಿ ರಾಜಕೀಯ ಮತ್ತು ವೈಯಕ್ತಿಕ ಪ್ರಚಾರದ ಬ್ಯಾನರ್‍ಗಳಿಗೆ ಅವಕಾಶವಿರುವುದಿಲ್ಲ. ಕೇವಲ ಸಾರ್ವಜನಿಕ ಮಾಹಿತಿ ನೀಡುವ ಸೂಚನಾ ಫಲಕಗಳು ಮತ್ತು ದೇವಸ್ಥಾನದ ಅಧಿಕೃತ ಸ್ವಾಗತ ಫಲಕಗಳಿಗೆ ಮಾತ್ರ ಅನುಮತಿ ನೀಡಲಾಗಿದ್ದು, ಉಳಿದ ಯಾವುದೇ ಅನಧಿಕೃತ ಬ್ಯಾನರ್‍ಗಳನ್ನು ತೆರವುಗೊಳಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಕಾಂತರಾಜ್, ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನ ಕಾರ್ಯನಿರ್ವಾಹಣಾಧಿಕಾರಿ ಗಂಗಾಧರ್, ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ.ಕಾಳೇಸಿಂಗೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
==============

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...