ಬೆಂಗಳೂರು: ನೀರಾವರಿ ಯೋಜನೆಗೆ ನೆರೆರಾಜ್ಯಗಳ ಅಡ್ಡಗಾಲು ಇದ್ದೆ ಇರುತ್ತದೆ, ಕ್ಯಾತೆ ತೆಗೆಯುತ್ತಲೇ ಇರುತ್ತವೆ. ಇದೀಗ ಕೃಷ್ಣಾ ಮೇಲ್ದಂಡೆ ಹಾಗೂ ತುಂಗಾಭದ್ರ ನೀರಾವರಿ ಯೋಜನೆಗೆ ಅಡ್ಡಗಾಲು ಹಾಕಿದ್ದ, ಆಂಧ್ರ ಸರ್ಕಾರದ ವಿರುದ್ಧ ಗರಂ ಆಗಿದ್ದಾರೆ. ಆಂಧ್ರ ಸರ್ಕಾರ ಒಡ್ಡುತ್ತಿರುವ ಅಡ್ಡಿಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ನೆರೆಯ ರಾಜ್ಯದ ತಗಾದೆಗೆ ತಿರುಗೇಟು ನೀಡುವುದಕ್ಕೆ ಮುಂದಾಗಿದೆ.
ಈ ಸಂಬಂಧ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಮುಂದಾಗಿದ್ದು, ರಾಜ್ಯದ ಸಂಸದರೊಂದಿಗೆ ದೆಹಲಿಯಲ್ಲಿ ತುರ್ತು ಸಭೆ ನಡೆಸಲು ನಿರ್ಧರಿಸಿದೆ. ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳಲ್ಲಿ ಒಂದಾದ ಯುಕೆಪಿ ಮೂರನೇ ಹಂತಕ್ಕೆ ತಕರಾರು ಎತ್ತಿರುವ ಹಾಗೂ ತುಂಗಭದ್ರ ಅಣೆಕಟ್ಟಿನ ನೀರು ಪೋಲು ತಡೆಯಲು ಸಹಕಾರ ನೀಡದಿರುವ ಆಂಧ್ರ ಪ್ರದೇಶದ ನಡೆ ವಿರುದ್ಧ ಧ್ವನಿ ಎತ್ತಲಾಗುವುದು. ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಹಿನ್ನೆಲೆಯಲ್ಲಿ ರಾಜ್ಯದ ಸಂಸದರ ಜೊತೆ ದೆಹಲಿಯ ಕರ್ನಾಟಕ ಭವನದಲ್ಲಿ ಮುಂಬರುವ ಮಂಗಳವಾರ ಸಭೆ ನಡೆಸಲಾಗುವುದು ಎಂದು ಡಿಕೆ ಶಿವಕುಮಾರ್ ಬಾಗಲಕೋಟೆಯಲ್ಲಿ ತಿಳಿಸಿದ್ದಾರೆ.
ಕೃಷ್ಣಾ ಮೇಲ್ದಂಡೆ ಯೋಜನೆ ಅನುಷ್ಠಾನ ಹಾಗೂ ಭೂಸ್ವಾಧೀನ ಪ್ರಕ್ರಿಯೆ ಮಾಡಬಾರದು ಎಂದು ಆಂಧ್ರ ಪ್ರದೇಶದವರು ಕೇಂದ್ರ ಸರ್ಕಾರಕ್ಕೆ ಆಕ್ಷೇಪಣಾ ಪತ್ರ ಬರೆದಿದ್ದಾರೆ. ಈ ವಿಚಾರವಾಗಿ ಕೇಂದ್ರ ಸರ್ಕಾರ ನಮಗೆ ಪತ್ರ ಬರೆದು ಸ್ಪಷ್ಟನೆ ಕೇಳಿದೆ. ನ್ಯಾಯಾಧೀಕರಣ ಆದೇಶದ ಪ್ರಕಾರ ನಮ್ಮ ಪಾಲಿನ ನೀರಿನ ಬಳಕೆಗೆ ಯೋಜನೆ ಮಾಡುತ್ತಿದ್ದು, ಈಗಾಗಲೇ 26 ಸಾವಿರ ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳನ್ನು ಆರಂಭಿಸಿದ್ದೇವೆ ಎಂದಿದ್ದಾರೆ.






