ದಾವಣಗೆರೆ ದಕ್ಷಿಣ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ನಲ್ಲಿ ಉಂಟಾಗಿದ್ದ ತೀವ್ರ ಟಿಕೆಟ್ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಶಾಮನೂರು ಕುಟುಂಬದ ಸಮರ್ಥ್ ಅವರಿಗೆ ಟಿಕೆಟ್ ನೀಡಲಾಗಿದೆ. ಅಲ್ಪಸಂಖ್ಯಾತ ಸಮುದಾಯವು ಕೆಲವು ಷರತ್ತುಗಳ ಮೇರೆಗೆ ಈ ನಿರ್ಧಾರಕ್ಕೆ ಒಪ್ಪಿಕೊಂಡಿದ್ದು, ಹೈಕಮಾಂಡ್ ಪ್ರಮುಖ ಭರವಸೆಗಳನ್ನು ನೀಡಿದೆ ಎಂದು ತಿಳಿದುಬಂದಿದೆ.
ಈ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಪಕ್ಷದೊಳಗೆ ದೊಡ್ಡ ಮಟ್ಟದ ಅಸಮಾಧಾನ ವ್ಯಕ್ತವಾಗಿತ್ತು. ಸಚಿವ ಎಸ್.ಎಸ್. ಮಲ್ಲಿಕಾರ್ಜುನ ತಮ್ಮ ಪುತ್ರ ಸಮರ್ಥ್ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದರೆ, ಮತ್ತೊಂದೆಡೆ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಅಲ್ಪಸಂಖ್ಯಾತ ನಾಯಕರು ಮುಸ್ಲಿಂ ಅಭ್ಯರ್ಥಿಗೆ ಅವಕಾಶ ನೀಡಬೇಕೆಂದು ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದರು.
ಟಿಕೆಟ್ ವಿಚಾರ ತೀವ್ರಗೊಂಡ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ದೆಹಲಿಯಿಂದ ಬೆಂಗಳೂರಿಗೆ ಬಂದು, ಅಭ್ಯರ್ಥಿ ಆಯ್ಕೆ ಕುರಿತು ಸರಣಿ ಸಭೆಗಳನ್ನು ನಡೆಸಿದರು. ಖಾಸಗಿ ಹೋಟೆಲ್ನಲ್ಲಿ ನಡೆದ ಈ ಸಭೆಗಳಲ್ಲಿ ಮುಸ್ಲಿಂ ನಾಯಕರು ಹಾಗೂ ಎಸ್.ಎಸ್. ಮಲ್ಲಿಕಾರ್ಜುನ ಜೊತೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವಾರು ಹಿರಿಯ ನಾಯಕರು ಹಾಗೂ ಮುಸ್ಲಿಂ ಶಾಸಕರು, ಸಚಿವರು ಸಭೆಯಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಅಂತಿಮವಾಗಿ ಸರ್ಕಾರದಲ್ಲಿ ಮುಸ್ಲಿಂ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡುವ ಭರವಸೆಯೊಂದಿಗೆ ಟಿಕೆಟ್ ಸಮರ್ಥ್ ಅವರಿಗೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಸ್ಲಿಂ ನಾಯಕರು ಮುಂದಿಟ್ಟಿದ್ದ ಪ್ರಮುಖ ಷರತ್ತುಗಳಲ್ಲಿ ವಿಧಾನ ಪರಿಷತ್ ಸ್ಥಾನಗಳಿಗೆ ಆದ್ಯತೆ, ರಾಜ್ಯಸಭೆ ಚುನಾವಣೆಯಲ್ಲಿ ಅವಕಾಶ, ನಿಗಮ-ಮಂಡಳಿಗಳಲ್ಲಿ ಹೆಚ್ಚಿನ ಪ್ರತಿನಿಧಿತ್ವ ಹಾಗೂ ಮುಂದಿನ ಸಚಿವ ಸಂಪುಟ ಪುನರ್ರಚನೆಯಲ್ಲಿ ಹೆಚ್ಚಿನ ಸ್ಥಾನ ನೀಡುವುದು ಸೇರಿವೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸುಮಾರು 75 ಸಾವಿರಕ್ಕೂ ಹೆಚ್ಚು ಮುಸ್ಲಿಂ ಮತದಾರರಿದ್ದು, ಅವರ ಬೆಂಬಲವೇ ಗೆಲುವಿನ ತೀರ್ಮಾನಕಾರಿ ಅಂಶವಾಗಿದೆ. ಹೀಗಾಗಿ ಹೈಕಮಾಂಡ್ನ ಮನವೊಲಿಕೆಯ ಬಳಿಕ ಅಲ್ಪಸಂಖ್ಯಾತರು ಸಮರ್ಥ್ ಪರವಾಗಿ ಏಕಮುಖ ಬೆಂಬಲ ನೀಡುತ್ತಾರೆಯೇ ಅಥವಾ ಬೇರೆ ತೀರ್ಮಾನ ಕೈಗೊಳ್ಳುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.
















