ಬೆಂಗಳೂರು: ಈ ವರ್ಷದಿಂದಾನೇ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯ ವಿಷಯವನ್ನು ಅಂಕಗಳಿಗೆ ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂಬ ನಿರ್ಧಾರವನ್ನ ರಾಜ್ಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಇದನ್ನ ಹಲವರು ವಿರೋಧಿಸಿದ್ದಾರೆ. ರಾಜ್ಯಪಾಲರು ಸಹ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದಾರೆ. ಈ ನಿರ್ಧಾರವನ್ನ ಮತ್ತೊಮ್ಮೆ ಪರಿಶೀಲನೆ ನಡೆಸುವಂತೆ ತಿಳಿಸಿದ್ದಾರೆ. ಈ ಸಂಬಂಧ ಕರವೇ ರೊಚ್ಚಿಗೆದ್ದಿದೆ.
ಕರವೇ ಅಧ್ಯಕ್ಷ ನಾರಾಯಣ ಗೌಡ ಅವರು ಆಕ್ರೋಶ ಹೊರ ಹಾಕಿದ್ದು, ರಾಜಭವನಕ್ಕೆ ಮುತ್ತಿಗೆ ಹಾಕುವುದಕ್ಕೆ ನಿರ್ಧಾರ ಮಾಡಿದ್ದಾರೆ. ಸೋಮವಾರ ರಾಜಭವನಕ್ಕೆ ಮುತ್ತಿಗೆ ಹಾಕಲಾಗುತ್ತದೆ ಎಂದಿದ್ದಾರೆ. ಚುನಾಯಿತ ಸರ್ಕಾರವೊಂದು ಬಹುಮತದೊಂದಿಗೆ ಆಡಳಿತ ನಡೆಸುತ್ತಿರುವಾಗ, ರಾಜ್ಯಪಾಲರು ದೈನಂದಿನ ಆಡಳಿತದಲ್ಲಿ ಮೂಗು ತೂರಿಸುವುದು ಒಕ್ಕೂಟ ವ್ಯವಸ್ಥೆಗೆ ಮಾಡುವ ಅವಮಾನವಾಗಿದೆ. ರಾಜ್ಯಪಾಲರ ಹಸ್ತಕ್ಷೇಪವು ಹಿಂದಿ ಸಾಮ್ರಾಜ್ಯಶಾಹಿಯ ಕುತಂತ್ರದ ಭಾಗವಾಗಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ಮಕ್ಕಳು ಕೇವಲ ಎರಡು ಭಾಷೆಗಳನ್ನು ಕಲಿಯುತ್ತಿದ್ದಾರೆ. ಅಲ್ಲಿಗೆ ಹೋಗಿ ಮೊದಲು ತ್ರಿಭಾಷಾ ಸೂತ್ರ ಜಾರಿಗೆ ತನ್ನಿ ಎಂದು ಟಿ ಎ ನಾರಾಯಣ ಗೌಡರು ಸವಾಲು ಹಾಕಿದ್ದರು.
ಕನ್ನಡಿಗರ ತೆರಿಗೆ ಹಣದಿಂದ ನಡೆಯುವ ರಾಜಭವನದಲ್ಲಿ ಕುಳಿತು, ತಿಂದ ಮನೆಗೆ ಕನ್ನ ಹಾಕುವುದು ಸರಿಯಲ್ಲ. ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಗಳನ್ನು ತರುವ ಹಕಗಕು ರಾಜ್ಯ ಸರ್ಕಾರಕ್ಕೆ ಇದೆ. ಮತ್ತು ಇದರಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಅನಗತ್ಯ. ರಾಜ್ಯಪಾಲರ ಈ ಅಧಿಕಪ್ರಸಂಗವನ್ನು ಕನ್ನಡಿಗರು ಸಹಿಸುವುದಿಲ್ಲ. ಈ ಹಸ್ತಕ್ಷೇಪವನ್ನು ಖಂಡಿಸಿ ಏಪ್ರಿಲ್ 7 ರ ಸೋಮವಾರ ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಕರವೇ ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
















