ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ, ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ವಿರುದ್ಧ ಷಡ್ಯಂತ್ರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಪಕ್ಷದೊಳಗಿನ ಅಸಮಾಧಾನ ತೀವ್ರಗೊಂಡಿದೆ. ಪಕ್ಷ ವಿರೋಧ ಚಟುವಟಿಕೆಗಳ ಆರೋಪದ ಕುರಿತು ವರದಿ ಹೈಕಮಾಂಡ್ ಕೈಗೆ ತಲುಪಿದ ಬಳಿಕ, ಕಠಿಣ ಕ್ರಮದ ಭಾಗವಾಗಿ ರಾಜೀನಾಮೆ ನೀಡುವಂತೆ ಎಐಸಿಸಿ ಸೂಚನೆ ನೀಡಿದೆ.ಈ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷರಾಗಿದ್ದ ಅಬ್ದುಲ್ ಜಬ್ಬಾರ್ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಏಪ್ರಿಲ್ 3ರಂದೇ ತಮ್ಮ ರಾಜೀನಾಮೆಯನ್ನು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
“ನನ್ನಿಂದ ಯಾವ ತಪ್ಪು ನಡೆದಿದೆ ಎಂಬುದೇ ನನಗೆ ಅರ್ಥವಾಗುತ್ತಿಲ್ಲ. ಹೈಕಮಾಂಡ್ ಯಾವುದೇ ತೀರ್ಮಾನ ಕೈಗೊಂಡರೂ ಅದಕ್ಕೆ ಬದ್ಧನಾಗಿದ್ದೇನೆ,” ಎಂದು ಅವರು ಹೇಳಿದರು. ಪಕ್ಷದಲ್ಲಿ ಅನಗತ್ಯ ಒಳಜಗಳ ಮತ್ತು ಪರಸ್ಪರ ಆರೋಪ-ಪ್ರತ್ಯಾರೋಪಗಳು ಬೇಡವೆಂದು ಅಭಿಪ್ರಾಯಪಟ್ಟ ಅವರು, ಕಾಂಗ್ರೆಸ್ ಪಕ್ಷ ತೊರೆಯುವ ಯೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದರು.ಇದೇ ವೇಳೆ, ಸಚಿವ ಸ್ಥಾನಕ್ಕಾಗಿ ಯಾವುದೇ ಒತ್ತಡ ಹಾಕಿಲ್ಲ ಎಂದು ಹೇಳಿದ ಅವರು, ಅಲ್ಪಸಂಖ್ಯಾತ ಸಮುದಾಯಕ್ಕೆ ನ್ಯಾಯ ಸಿಗಬೇಕು ಎಂಬ ಉದ್ದೇಶದಿಂದಲೇ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾಗಿ ತಿಳಿಸಿದರು.

ಟಿಕೆಟ್ ಹಂಚಿಕೆ ವಿಚಾರದಲ್ಲಿಯೂ ಕೆಲ ಪ್ರಶ್ನೆಗಳು ಕೇಳಿದ್ದಾಗಿ ಅವರು ಹೇಳಿದರು.ಉಪಚುನಾವಣೆಯ ಬಗ್ಗೆ ಯಾವುದೇ ನಾಯಕರು ತಮ್ಮೊಂದಿಗೆ ಚರ್ಚೆ ನಡೆಸಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ ಜಬ್ಬಾರ್, “ನನ್ನನ್ನು ಕಡೆಗಣಿಸಿ ಚುನಾವಣೆಗೆ ತೆರಳಿದ್ದಾರೆ. ಆದರೂ ಪಕ್ಷ ಗೆಲ್ಲಲಿ ಎಂಬುದೇ ನನ್ನ ಆಶಯ,” ಎಂದರು.ದಾವಣಗೆರೆ ಉಪಚುನಾವಣೆಯ ಸುತ್ತ ಕಾಂಗ್ರೆಸ್ ಪಕ್ಷದಲ್ಲಿ ಉಂಟಾದ ಈ ಬೆಳವಣಿಗೆಗಳು ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿವೆ.












