ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲಿ ಪ್ರತಿಯೊಬ್ಬರು ಒತ್ತಡದ ಜೀವನದಲ್ಲಿ ಬದುಕುತ್ತಿರುವುದರಿಂದ ಆರೋಗ್ಯದ ಕಡೆಗೂ ಕಾಳಜಿ ವಹಿಸಬೇಕೆಂದು ಮಹಾರಾಜ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಪ್ರೊ.ಗಂಗಮ್ಮ ಗ್ರಾಮಸ್ಥರಲ್ಲಿ ಮನವಿ ಮಾಡಿದರು.
ದಾವಣಗೆರೆ ವಿಶ್ವವಿದ್ಯಾನಿಲಯ, ಜಿಲ್ಲಾ ಮದಕರಿನಾಯಕ ವಿದ್ಯಾಸಂಸ್ಥೆ, ಮಹಾರಾಜ ಮದಕರಿನಾಯಕ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಕಾಲೇಜು ಐ.ಕ್ಯೂ.ಎ.ಸಿ. ಸಹಯೋಗದೊಂದಿಗೆ ಜಾಲಿಕಟ್ಟೆಯಲ್ಲಿ ಏ.22 ರಿಂದ 28 ರವರೆಗೆ ನಡೆಯುತ್ತಿರುವ ಎನ್.ಎಸ್.ಎಸ್. ವಿಶೇಷ ವಾರ್ಷಿಕ ಶಿಬಿರದ ಅಂಗವಾಗಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಏರ್ಪಡಿಸಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಚಿಕ್ಕವರಿಂದ ಹಿಡಿದು ದೊಡ್ಡವರತನಕ ರಕ್ತದೊತ್ತಡ, ಸಕ್ಕರೆ ಕಾಯಿಲೆ ಸಾಮಾನ್ಯವಾಗಿದೆ. ಈ ನಿಟ್ಟಿನಲ್ಲಿ ಬಸವೇಶ್ವರ ಆಸ್ಪತ್ರೆಯ ವೈದ್ಯರುಗಳು ಉಚಿತ ಆರೋಗ್ಯ ತಪಾಸಣೆ ನಡೆಸುತ್ತಿದ್ದು, ಗ್ರಾಮಸ್ಥರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಪ್ರೊ.ಗಂಗಮ್ಮ ತಿಳಿಸಿದರು.
ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಮೂಲಕ ಮಕ್ಕಳಲ್ಲಿ ಸ್ವಚ್ಚತೆ ಕುರಿತು ಜಾಗೃತಿ ಮೂಡಿಸಲಾಗುವುದಲ್ಲದೆ ಗ್ರಾಮಸ್ಥರು ಮನೆ ಹಾಗೂ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಚವಾಗಿಟ್ಟುಕೊಂಡು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಹೇಳಿದರು.
ಮಹಾರಾಜ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಪ್ರೊ.ಶ್ರೀನಿವಾಸ ಎನ್. ಪ್ರೊ.ಓಂಕಾರಮೂರ್ತಿ, ಉಪನ್ಯಾಸಕರುಗಳಾದ ಸ್ವರೂಪ ಕೆ. ದಾದಾಪೀರ್ ಹಾಗೂ ಬಸವೇಶ್ವರ ಆಸ್ಪತ್ರೆಯ ವೈದ್ಯರುಗಳಾದ ಕಾರ್ತಿಕ್, ಅಭಿನಯ್, ಶ್ರೇಣಿ, ಪ್ರಿಯಾಂಕ, ರೂಪೇಶ್ರೆಡ್ಡಿ, ಶೃತಿ ಇವರುಗಳು ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಿದರು.


















