ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಇದೀಗ ಅಭ್ಯರ್ಥಿಗಳಿಗೆ ಅರ್ಜಿಯಲ್ಲಿನ ಲೋಪ ದೋಷಗಳನ್ನು ಸರಿಪಡಿಸಿಕೊಳ್ಳಲು ಅಂತಿಮ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳ ಮನವಿಯನ್ನು ಪರಿಗಣಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೇ 3ರವರೆಗೆ ತಿದ್ದುಪಡಿ ಮಾಡಲು ಅವಕಾಶ ಕಲ್ಪಿಸಿದೆ.
ಪರೀಕ್ಷೆಗೆ ಅರ್ಜಿ ಸಲ್ಲಿಸುವ ವೇಳೆ ಅಭ್ಯರ್ಥಿಗಳು ನಮೂದಿಸಿದ ವೈಯಕ್ತಿಕ ಮಾಹಿತಿ, ವಿದ್ಯಾಭ್ಯಾಸದ ವಿವರಗಳು, ಮೀಸಲಾತಿ ಹಾಗೂ ಇತರೆ ಅರ್ಹತಾ ಮಾಹಿತಿಗಳಲ್ಲಿ ಏನಾದರೂ ತಪ್ಪುಗಳಿದ್ದರೆ, ಅವನ್ನು ಈ ಅವಧಿಯಲ್ಲಿ ಸರಿಪಡಿಸಿಕೊಳ್ಳಬಹುದು. ಇದೇ ವೇಳೆ ಈಗಾಗಲೇ ದಾಖಲಿಸದಿದ್ದ ಮಾಹಿತಿಗಳನ್ನು ಕೂಡ ಸೇರಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ಅರ್ಜಿ ತಿದ್ದುಪಡಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್ಲೈನ್ ಮೂಲಕ ನಡೆಯಲಿದ್ದು, ಅಭ್ಯರ್ಥಿಗಳು ಕೆಇಎ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ತಮ್ಮ ನೋಂದಣಿ ವಿವರಗಳನ್ನು ಬಳಸಿ ಲಾಗಿನ್ ಆಗಿ ಅಗತ್ಯ ಬದಲಾವಣೆಗಳನ್ನು ಮಾಡಿಕೊಳ್ಳಬೇಕು. ತಿದ್ದುಪಡಿ ಮಾಡುವಾಗ ದಾಖಲೆಗಳ ಆಧಾರದ ಮೇಲೆ ಸರಿಯಾದ ಮಾಹಿತಿಯನ್ನು ನಮೂದಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.ಈ ಬಗ್ಗೆ ಮಾಹಿತಿ ನೀಡಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಚ್. ಪ್ರಸನ್ನ, “ಅಭ್ಯರ್ಥಿಗಳಿಗೆ ಅರ್ಜಿಯಲ್ಲಿನ ದೋಷಗಳನ್ನು ಸರಿಪಡಿಸಲು ಇದು ಕೊನೆಯ ಅವಕಾಶ.

ಈ ಅವಧಿ ನಂತರ ಮತ್ತೊಮ್ಮೆ ಎಡಿಟ್ ಮಾಡುವ ಅವಕಾಶ ಇರುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.ಅದರ ಹಿನ್ನೆಲೆಯಲ್ಲಿ, ಅಭ್ಯರ್ಥಿಗಳು ಕೊನೆಯ ಕ್ಷಣಕ್ಕೆ ಕಾಯದೆ, ತಮ್ಮ ಅರ್ಜಿಯಲ್ಲಿನ ಎಲ್ಲಾ ವಿವರಗಳನ್ನು ಪರಿಶೀಲಿಸಿ ತಿದ್ದುಪಡಿ ಮಾಡಿಕೊಂಡು ಮುಂದಿನ ಪ್ರವೇಶ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಲಾಗಿದೆ.

















