ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ಭಾರೀ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ, ಬೆಂಗಳೂರಿನ ಮಡಿವಾಳದಲ್ಲಿರುವ ಕೃಪಾನಿಧಿ ಕಾಲೇಜಿನ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಈ ಘಟನೆ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಕಾಲೇಜಿನ ಪರವಾನಗಿ ರದ್ದುಪಡಿಸಿ 25 ಲಕ್ಷ ರೂಪಾಯಿ ದಂಡ ವಿಧಿಸುವಂತೆ ಮುಖ್ಯಮಂತ್ರಿಗಳಿಗೆ ದೂರು ನೀಡಿ ಒತ್ತಾಯಿಸಿತ್ತು.
ಇದರ ನಡುವೆಯೇ ಕೃಪಾನಿಧಿ ಕಾಲೇಜಿಗೆ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ಇನ್ನು ಮುಂದೆ ಈ ಕಾಲೇಜಿನಲ್ಲಿ ಸರ್ಕಾರಿ ಪರೀಕ್ಷೆಗಳು ನಡೆಯದಂತೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ತಿಳಿಸಿದ್ದಾರೆ.
ಘಟನೆಯ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಜಗದೀಶ್, ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ವಿಚಾರದಲ್ಲಿ ಯಾರು ಹೊಣೆಗಾರರು ಎಂಬುದರ ಕುರಿತು ತನಿಖೆ ನಡೆಸಲಾಗಿದೆ ಎಂದು ಹೇಳಿದರು. ವಸ್ತ್ರಸಂಹಿತೆ ಕುರಿತು ಪೂರ್ವಭಾವಿ ತರಬೇತಿ ನೀಡಿದ್ದರೂ ಈ ರೀತಿಯ ಸಮಸ್ಯೆ ಉಂಟಾಗಿದೆ. ಜನಿವಾರ ಘಟನೆ ಕರ್ತವ್ಯ ಲೋಪದಿಂದ ಸಂಭವಿಸಿರುವುದರಿಂದ, ಕೃಪಾನಿಧಿ ಕಾಲೇಜಿನಲ್ಲಿ ಮುಂದಿನ ದಿನಗಳಲ್ಲಿ ಸರ್ಕಾರಿ ಪರೀಕ್ಷೆಗಳನ್ನು ನಡೆಸದಂತೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಪರೀಕ್ಷಾರ್ಥಿಗಳ ಜನಿವಾರವನ್ನು ಉದ್ದೇಶಪೂರ್ವಕವಾಗಿ ತೆಗೆಯಲಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿರುವುದರಿಂದ, ಈ ಕಾಲೇಜಿಗೆ ಮುಂದೆಯೂ ಪರೀಕ್ಷಾ ಕೇಂದ್ರ ಹಂಚಿಕೆಯಾಗದಂತೆ ಶಿಫಾರಸು ಮಾಡಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಇದಕ್ಕೂ ಮುನ್ನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ಘಟನೆ ಕುರಿತು ಗಂಭೀರವಾಗಿ ಗಮನ ಹರಿಸಿ ತನಿಖೆಗೆ ಆಗ್ರಹಿಸಿತ್ತು. ಏಪ್ರಿಲ್ 23ರಂದು ನಡೆದ 2026ನೇ ಸಾಲಿನ ಸಿಇಟಿ ಭೌತಶಾಸ್ತ್ರ ಪರೀಕ್ಷೆಗೆ ಹಾಜರಾಗಲು ಬಂದಿದ್ದ ಕೆಲ ಅಭ್ಯರ್ಥಿಗಳ ಜನಿವಾರವನ್ನು ತೆಗೆಸಲು ಸಿಬ್ಬಂದಿ ಸೂಚಿಸಿದ್ದರೆಂಬ ಮಾಹಿತಿ ಹೊರಬಂದಿತ್ತು. ಇದು ಸೂಕ್ಷ್ಮ ವಿಷಯವಾಗಿದ್ದು, KEA ವಸ್ತ್ರಸಂಹಿತೆ ಕುರಿತು ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಿತ್ತು. ಕಳೆದ ವರ್ಷವೂ ಇಂತಹ ಘಟನೆ ನಡೆದ ಹಿನ್ನೆಲೆ, ಜನಿವಾರ, ಲಿಂಗ ಮುಂತಾದ ಧಾರ್ಮಿಕ ಗುರುತುಗಳನ್ನು ತೆಗೆಸಬಾರದೆಂದು ತರಬೇತಿಯಲ್ಲಿ ತಿಳಿಸಲಾಗಿತ್ತು. ಆದಾಗ್ಯೂ ಈ ಘಟನೆ ನಡೆದಿರುವುದು ಗಂಭೀರವಾಗಿದ್ದು, ಹಿರಿಯ ಅಧಿಕಾರಿಗಳಿಂದ ಸಮಗ್ರ ವಿಚಾರಣೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಸಂಪೂರ್ಣ ವರದಿ ಸಲ್ಲಿಸಬೇಕು ಎಂದು KEA ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಪತ್ರ ಬರೆದು ಒತ್ತಾಯಿಸಿತ್ತು.



















