
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27 : ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳನ್ನು ಉತ್ತೇಜಿಸುವ ಉದ್ದೇಶದಿಂದ ಬೆಳಗಟ್ಟ ಶ್ರೀ ಮಾರುತಿ ಗ್ರಾಮಾಂತರ ಪ್ರೌಢಶಾಲೆಯ 1990-91ನೇ ಸಾಲಿನ ಎಸ್ಎಸ್ಎಲ್ಸಿ ವಿದ್ಯಾರ್ಥಿ ಬಳಗ ‘ಗೆಳೆತನದ ಗಂಗೋತ್ರಿ” ವತಿಯಿಂದ 2025-26ನೇ ಸಾಲಿನ ಪಿಯುಸಿ ಹಾಗೂ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಇದೇ ಏಪ್ರಿಲ್ 28ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ತಾಲ್ಲೂಕಿನ ಬೆಳಗಟ್ಟ ಗ್ರಾಮದ ಶ್ರೀ ನರಹರಿ ಸದ್ಗುರು ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಂಗವಾಗಿ ಗ್ರಾಮದ ಆಂಜನೇಯ ದೇವಸ್ಥಾನದಿಂದ ಶ್ರೀ ನರಹರಿ ಸದ್ಗುರು ಕಲ್ಯಾಣ ಮಂಟಪದವರಗೆ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮೆರವಣಿಗೆ ಮಾಡಲಾಗುವುದು. ಈ ಕಾರ್ಯಕ್ರಮವು ವಿದ್ಯಾರ್ಥಿಗಳ ಸಾಧನೆಯನ್ನು ಗೌರವಿಸುವುದರ ಜೊತೆಗೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ತಮ ಸಾಧನೆ ಮಾಡಲು ಪ್ರೇರಣೆ ನೀಡುವ ಉದ್ದೇಶ ಹೊಂದಿದೆ.
ಶಿಕ್ಷಣದ ಮೂಲಕ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂಬ ನಂಬಿಕೆಯಿಂದ ಹಳೆಯ ವಿದ್ಯಾರ್ಥಿಗಳ ಬಳಗ ಈ ಕಾರ್ಯ ಕೈಗೊಂಡಿದೆ. ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ “ಗೆಳೆತನದ ಗಂಗೋತ್ರಿ” ಬಳಗ ನಿರಂತರವಾಗಿ ಸಾಮಾಜಿಕ ಹಾಗೂ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ ಎಂದು ಗೆಳತನ ಗಂಗೋತ್ರಿ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಮತ್ತು ಕಾರ್ಯಕ್ರಮ ಪ್ರಧಾನ ಸಂಚಾಲಕ ನಾಗರಾಜ್ ತಿಳಿಸಿದ್ದಾರೆ.
ಸ್ಥಳೀಯ ಗಣ್ಯರು, ಶಿಕ್ಷಕರು, ಪೋಷಕರು, ಹಳೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಅಭಿನಂದಿಸುವಂತೆ ಬೆಳಗಟ್ಟದ ‘ಗೆಳೆತನದ ಗಂಗೋತ್ರಿ’ ಬಳಗ ಪ್ರಕಟಣೆ ತಿಳಿಸಿದೆ.




















