ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 29 : ತೀವ್ರ ಬಿಸಿಗಾಳಿಯಿಂದ ತತ್ತರಿಸಿದ್ದ ಜನತೆಗೆ ಮಳೆಯ ತಂಪು ನೆಮ್ಮದಿ ತಂದಿದೆ. ವಿಶೇಷವಾಗಿ ನಿನ್ನೆ ರಾತ್ರಿ ಚಿತ್ರದುರ್ಗದಲ್ಲಿ ಮಳೆಯಾಗಿದ್ದು, ಒಣಗಿದ್ದ ಭೂಮಿಗೆ ತಂಪು ನೀಡಿದೆ. ಮಳೆಯೊಂದಿಗೆ ಮಣ್ಣಿನ ಸುವಾಸನೆ ಹರಡಿದ ಪರಿಣಾಮ ಜನರು ಸ್ವಲ್ಪ ಮಟ್ಟಿಗೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಆಲಿಕಲ್ಲು ಮಳೆಯಾಗುವ ಸಾಧ್ಯತೆಯನ್ನೂ ಇಲಾಖೆ ಸೂಚಿಸಿದೆ.
ಚಿತ್ರದುರ್ಗ, ದಾವಣಗೆರೆ ಸೇರಿದಂತೆ 15 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದಿರಬೇಕೆಂದು ಸೂಚಿಸಲಾಗಿದೆ. ಬೆಂಗಳೂರು, ತುಮಕೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು, ಮಂಡ್ಯ, ವಿಜಯನಗರ, ಗದಗ, ಕೊಪ್ಪಳ, ಹಾವೇರಿ, ಧಾರವಾಡ, ಬೆಳಗಾವಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದೆ.ಆಲಿಕಲ್ಲು ಮಳೆ ಮತ್ತು ಬಿರುಗಾಳಿಯ ಹಿನ್ನೆಲೆ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು.

ಸಿಡಿಲು, ಬಿರುಗಾಳಿ ಸಂದರ್ಭಗಳಲ್ಲಿ ಮರಗಳ ಕೆಳಗೆ ನಿಲ್ಲಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ರೈತರೂ ಕೃಷಿ ಚಟುವಟಿಕೆಗಳಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.ಇನ್ನೂ ಏಪ್ರಿಲ್ 28 ಮತ್ತು 29ರಂದು ಕರಾವಳಿ ಭಾಗದಲ್ಲಿಯೂ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.



















