ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 07 : ರೈತರ ಬ್ಯಾಂಕ್ ಖಾತೆಗಳಿಗೆ ಬೆಳೆ ವಿಮೆ ಹಣ ಜಮ ಮಾಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ವಿಮ ಕಂಪನಿಗಳು ಹಾಗೂ ಜಿಲ್ಲಾಡಳಿತದ ನಿರ್ಲಕ್ಷೆಯನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಗುರುವಾರ ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಪ್ರವಾಸಿ ಮಂದಿರದಿಂದ ಮೆರವಣಿಗೆ ಮೂಲಕ ಆಗಮಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ರೈತರನ್ನು ಒನಕೆ ಓಬವ್ವ ವೃತ್ತದಲ್ಲಿಯೆ ಪೊಲೀಸರು ತಡೆದು ನಿಲ್ಲಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೆ.ಪಿ.ಭೂತಯ್ಯ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ಕಳೆದ ವರ್ಷ ಮುಂಗಾರು ಮಳೆಯ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಅನೇಕ ಬೆಳೆಗಳು ನಾಶವಾಗಿವೆ. ಚಳ್ಳಕೆರೆ ತಾಲ್ಲೂಕಿನಲ್ಲಿ ಶೇಂಗಾ ಬೆಳೆ ಹಾನಿಯಾಗಿದ್ದರಿಂದ ರೈತ ಕೈಸುಟ್ಟುಕೊಂಡು ಕೃಷಿಗಾಗಿ ಮಾಡಿದ ಸಾಲ ತೀರಿಸಲು ಆಗದೆ ಆತ್ಮಹತ್ಯೆಯ ಹಾದಿ ಹಿಡಿಯುವಂತಾಗಿದೆ. ಇಂತಹ ಕಷ್ಟದ ಪರಿಸ್ಥಿತಿಯಲ್ಲಿದ್ದರೂ ವಿಮೆ ಕಂಪನಿಗಳು ಬೆಳೆ ವಿಮೆ ಹಣವನ್ನು ನೀಡುತ್ತಿಲ್ಲ. ಚಳ್ಳಕೆರೆ ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಿದಾಗ ಅಧಿಕಾರಿಗಳು ಸ್ಥಳಕ್ಕೆ ಬಂದು ಬೆಳೆವಿಮೆ ಹಣ ಪಾವತಿಸಲಾಗುವುದೆಂಬ ಭರವಸೆ ನೀಡಿದ್ದನ್ನು ಬಿಟ್ಟರೆ ಯಾವ ರೈತನ ಖಾತೆಗೂ ಹಣ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಧ್ಯ ಕರ್ನಾಟಕದ ಬಯಲುಸೀಮೆ ಚಿತ್ರದುರ್ಗಕ್ಕೆ ಭದ್ರಾ ಮೇಲ್ದಂಡೆ ಯೋಜನೆಗಾಗಿ ಕೇಂದ್ರ ಸರ್ಕಾರ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಘೋಷಿಸಿರುವುದು ಇನ್ನು ಭರವಸೆಯಾಗಿಯೇ ಉಳಿದುಕೊಂಡಿದೆ. ಬಿ.ಎಸ್.ಯಡಿಯೂರಪ್ಪನವರ ಅಭಿಮಾನೋತ್ಸವಕ್ಕೆ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ಶಾರವರು ಕೇಂದ್ರ ಸರ್ಕಾರ ನೀಡಿರುವ ಆಶ್ವಾಸನೆಯಂತೆ 5300 ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಲಿ ಎಂದು ಒತ್ತಾಯಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ, ಉಪಾಧ್ಯಕ್ಷ ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ, ತಾಲ್ಲೂಕು ಅಧ್ಯಕ್ಷ ಟಿ.ಹಂಪಣ್ಣ, ಕೆ.ಸಿ.ಹೊರಕೇರಪ್ಪ, ಹಿರಿಯೂರು ತಾಲ್ಲೂಕು ಅಧ್ಯಕ್ಷ ಬಿ.ಓ.ಶಿವಕುಮಾರ್, ಆರ್.ಚೇತನ್ ಯಳನಾಡು, ಬಸ್ತಿಹಳ್ಳಿ ಜಿ.ಸುರೇಶ್ಬಾಬು, ಬಿ.ಪಿ.ಉಮಾಪತಿ ಓಂಕಾರಪ್ಪ, ಅಜೇಯ, ರುದ್ರಪ್ಪ, ಎನ್.ಆರ್.ರಂಗಸ್ವಾಮಿ, ಟಿ.ಮುನಿಸ್ವಾಮಿ, ಆರ್.ಶಂಕರಮೂರ್ತಿ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










