ಸುದ್ದಿಒನ್ ,ಚಿತ್ರದುರ್ಗ, ಮೇ.09 : ತಾಲೂಕಿನ ಗುಡ್ಡದರಂಗವ್ವನಹಳ್ಳಿ ಗ್ರಾಮದ ಹಟ್ಟಿ ಚಿನ್ನದಗಣಿ ರಸ್ತೆಯಲ್ಲಿ ವಿದ್ಯುತ್ ಕಂಬವೊಂದು ಅರ್ಧಕ್ಕೆ ಮುರಿದು ಬಿದ್ದು ಮೂರು ದಿನಗಳೇ ಕಳೆದಿದ್ದರೂ, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮಾತ್ರ ಇತ್ತ ಗಮನಹರಿಸದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಗ್ರಾಮದ ಪ್ರಮುಖ ರಸ್ತೆಯ ಬದಿಯಲ್ಲಿರುವ ಈ ವಿದ್ಯುತ್ ಕಂಬವು ತಾಂತ್ರಿಕ ಕಾರಣಗಳಿಂದಲೋ ಅಥವಾ ಗಾಳಿ-ಮಳೆಗೆ ಸಿಲುಕಿಯೋ ಅರ್ಧಕ್ಕೆ ಮುರಿದು ನೇತಾಡುತ್ತಿದೆ. ಈ ರಸ್ತೆಯು ಹಟ್ಟಿ ಚಿನ್ನದಗಣಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಹಾದಿಯಾಗಿದ್ದು, ಸಾರ್ವಜನಿಕರು ಇಲ್ಲಿ ಸಂಚರಿಸುತ್ತಾರೆ. ಕಂಬವು ಅರ್ಧಕ್ಕೆ ಮುರಿದು ಬಿದ್ದಿರುವುದರಿಂದ ಯಾವುದೇ ಕ್ಷಣದಲ್ಲಿ ವಿದ್ಯುತ್ ತಂತಿಗಳು ತುಂಡಾಗಿ ಬೀಳುವ ಅಥವಾ ದೊಡ್ಡ ಮಟ್ಟದ ಅನಾಹುತ ಸಂಭವಿಸುವ ಭೀತಿ ಎದುರಾಗಿದೆ. ಕಳೆದ ಮೂರು ದಿನಗಳಿಂದ ಈ ಅಪಾಯಕಾರಿ ಸ್ಥಿತಿ ಮುಂದುವರಿದಿದ್ದರೂ, ಬೆಸ್ಕಾಂ (BESCOM) ಸಿಬ್ಬಂದಿಯಾಗಲಿ ಅಥವಾ ಅಧಿಕಾರಿಗಳಾಗಲಿ ಸ್ಥಳಕ್ಕೆ ಭೇಟಿ ನೀಡಿ ದುರಸ್ತಿ ಕಾರ್ಯ ಕೈಗೊಂಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ಯಾವುದೇ ಪ್ರಾಣಾಪಾಯ ಅಥವಾ ಜೀವಹಾನಿ ಸಂಭವಿಸುವ ಮೊದಲು ಇಲಾಖೆಯ ಮುಖ್ಯಸ್ಥರು ಎಚ್ಚೆತ್ತುಕೊಳ್ಳಬೇಕು. ತಕ್ಷಣವೇ ಈ ಮುರಿದ ಕಂಬವನ್ನು ತೆರವುಗೊಳಿಸಿ ಹೊಸ ಕಂಬವನ್ನು ಅಳವಡಿಸಬೇಕು ಎಂದು ಗುಡ್ಡದರಂಗವ್ವನಹಳ್ಳಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








