ಸುದ್ದಿಒನ್,ತುಮಕೂರು,ಮೇ.09: ಭೀಕರ ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ಹೊನ್ನೇನಹಳ್ಳಿ ಬಳಿ ನಡೆದಿದೆ.
ಮಂಡ್ಯ ಜಿಲ್ಲೆಯಿಂದ ಹೊರಟಿದ್ದ ಆಲ್ಟೋ ಕಾರು ಕುಣಿಗಲ್ ಮಾರ್ಗವಾಗಿ ಸಂಚರಿಸುತ್ತಿತ್ತು. ಈ ವೇಳೆ ಹೊನ್ನೇನಹಳ್ಳಿ ಸಮೀಪ ರಸ್ತೆಯಲ್ಲಿದ್ದ ಗೊಬ್ಬರ ತುಂಬಿದ ಲಾರಿಗೆ ಕಾರು ಅತಿ ವೇಗವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಒಳಗೆ ಸಿಲುಕಿದ್ದ ನಾಲ್ವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಮೃತರೆಲ್ಲರೂ ಮಂಡ್ಯ ಜಿಲ್ಲೆಯ ಮೂಲದವರೆಂದು ಗುರುತಿಸಲಾಗಿದೆ.ಕುಮಾರಸ್ವಾಮಿ,ಗಾಯತ್ರಿ, ಹಾಗೂ ಕಾರು ಚಾಲಕ ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

















