ಚಿತ್ರದುರ್ಗ .ಮೇ.10: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವಾರು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಭಾನುವಾರ ಹಿರಿಯೂರು ನಗರದ ನೆಹರು ಮೈದಾನದಲ್ಲಿ ಡಿ. ಸುಧಾಕರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮದರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, “ನಾನು ಮತ್ತು ಸುಧಾಕರ್ ಅವರು ಆಪ್ತ ಸ್ನೇಹಿತರು. ಇಷ್ಟು ಚಿಕ್ಕ ವಯಸ್ಸಿನಲ್ಲೇ ಅವರು ನಮ್ಮನ್ನು ಅಗಲುತ್ತಾರೆ ಎಂದು ನಾವು ನಿರೀಕ್ಷಿಸಿರಲಿಲ್ಲ,” ಎಂದು ಭಾವುಕರಾದರು.

ಆಸ್ಪತ್ರೆಗೆ ದಾಖಲಾಗುವ ಮುನ್ನ ಕೂಡ ಸುಧಾಕರ್ ಅವರು ಅತ್ಯಂತ ಆತ್ಮವಿಶ್ವಾಸದಿಂದ ಇದ್ದರು. ತಮ್ಮ ಕಾಲಿನ ಸಮಸ್ಯೆಯನ್ನು ಸರಿಪಡಿಸಿಕೊಂಡು ಬರುತ್ತೇನೆ ಎಂದು ಹೇಳಿಯೇ ಆಸ್ಪತ್ರೆಗೆ ಹೋಗಿದ್ದರು. ಆದರೆ ಕೊನೆಯ ಹಂತದಲ್ಲಿ ಲಂಗ್ ಇನ್ಫೆಕ್ಷನ್ (ಶ್ವಾಸಕೋಶದ ಸೋಂಕು) ಆದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿಸಿದರು.
ಸುಧಾಕರ್ ಅವರು ಚಿತ್ರದುರ್ಗ ಜಿಲ್ಲೆಯ ಅಭಿವೃದ್ಧಿಗಾಗಿ, ಅದರಲ್ಲೂ ವಿಶೇಷವಾಗಿ ರೈತರ ಬದುಕಿನಲ್ಲಿ ಬದಲಾವಣೆ ತರಲು ನಿರಂತರವಾಗಿ ಶ್ರಮಿಸಿದವರು ಎಂದು ಡಿಕೆಶಿ ಸ್ಮರಿಸಿದರು ಅವರು, ಈ ಭಾಗದ ರೈತರ ಹಿತದೃಷ್ಟಿಯಿಂದ ಭದ್ರಾ ಮೇಲ್ದಂಡೆ ಯೋಜನೆಯನ್ನು ಸಂಪೂರ್ಣವಾಗಿ ಜಾರಿಗೆ ತರಲು ಅವರು ಶ್ರಮಿಸಿದ್ದರು. ಟ್ರಯಲ್ ರನ್ ವೇಳೆ ನೀರು ಬಿಡಿಸುವಲ್ಲಿ ಅವರ ಪಾತ್ರ ದೊಡ್ಡದಿದೆ. ವೈ ಜಂಕ್ಷನ್ ಬಳಿಯ ದೀರ್ಘಕಾಲದ ಸಮಸ್ಯೆಯನ್ನು ಬಗೆಹರಿಸಲು ಶಾಸಕರನ್ನು ಒಟ್ಟುಗೂಡಿಸಿ ಹೋರಾಟ ಮಾಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡುವಾಗ ಯಾರಿಗೂ ಕಿರುಕುಳ ನೀಡದ, ಸೌಮ್ಯ ಸ್ವಭಾವದ ವ್ಯಕ್ತಿಯಾಗಿದ್ದರು ಎಂದರು.
ಜಾತಿ-ಧರ್ಮದ ಭೇದವಿಲ್ಲದೆ ಸಾಮಾಜಿಕ ನ್ಯಾಯಕ್ಕಾಗಿ ಕೆಲಸ ಮಾಡಿದ ಸುಧಾಕರ್ ಅವರ ಸಾವು ಪಕ್ಷ ಹಾಗೂ ಸರ್ಕಾರಕ್ಕೆ ತುಂಬಲಾರದ ನಷ್ಟವಾಗಿದೆ. ಸುಧಾಕರ್ ಅವರ ಕುಟುಂಬಕ್ಕೆ ಸರ್ಕಾರ ಹಾಗೂ ಪಕ್ಷವು ಸಂಪೂರ್ಣ ಬೆಂಬಲವಾಗಿ ನಿಲ್ಲಲಿದೆ ಎಂದು ಭರವಸೆ ನೀಡಿದರು. ಇದೇ ವೇಳೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಡಿ.ಕೆ.ಶಿವಕುಮಾರ್ ಅವರು ಮೊಬೈಲ್ ಕರೆ ಮಾಡಿ, ಸಚಿವ ಡಿ.ಸುಧಾಕರ್ ಅವರ ಪುತ್ರ ಸುಹಾಸ್ ಅವರಿಗೆ ಸಾಂತ್ವಾನ ಹೇಳಿದರು.


















