ಚಿತ್ರದುರ್ಗ .ಮೇ.10: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವಾರು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಾಜಿ ಶಾಸಕ ಹಾಗೂ ಹಿರಿಯ ರಾಜಕಾರಣಿ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ಡಿ.ಸುಧಾಕರ್ ಅವರು ಒಬ್ಬ ಸ್ನೇಹಜೀವಿ ಮತ್ತು ಅಭಿವೃದ್ಧಿ ಪರ ಚಿಂತನೆಯುಳ್ಳವರಾಗಿದ್ದರು. 40 ವರ್ಷಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ಹಂತ ಹಂತವಾಗಿ ಮುನ್ನೆಲೆಗೆ ಬಂದು ಜನಸೇವೆಯನ್ನು ಮಾಡಿದ್ದರು. ಜಿಲ್ಲೆಯ ಅಭಿವೃದ್ಧಿಯಲ್ಲಿ ಸದಾ ಆಸಕ್ತಿ ಹೊಂದಿದ್ದ ಅವರು ಭದ್ರಾ ಮೇಲ್ದಂಡೆ ಯೋಜನೆ, ಕೆರೆಗಳಿಗೆ ನೀರು ತುಂಬಿಸುವ ಕೆಲಸಗಳಿಗಾಗಿ ಸಾಕಷ್ಟು ಶ್ರಮಿಸಿದ್ದರು. ನಾವು ಬೇರೆ ಬೇರೆ ಪಕ್ಷಗಳಲ್ಲಿದ್ದರೂ ಜಿಲ್ಲೆಯ ಅಭಿವೃದ್ಧಿ ಕೆಲಸಗಳ ವಿಚಾರದಲ್ಲಿ ಒಂದೇ ಮನೆಯ ಸದಸ್ಯರಂತೆ ಚರ್ಚೆ ಮಾಡುತ್ತಿದ್ದೆವು. ಅಷ್ಟರಮಟ್ಟಿಗೆ ಅವರೊಂದಿಗೆ ನನಗೆ ಆತ್ಮೀಯ ಒಡನಾಟವಿತ್ತು. ಜಿಲ್ಲೆಯ ಒಬ್ಬ ಸಮರ್ಥ ನಾಯಕನನ್ನು ಕಳೆದುಕೊಂಡಿರುವುದು ಅತ್ಯಂತ ದುರದೃಷ್ಟಕರ ಸಂಗತಿ. ಭಗವಂತನು ಡಿ.ಸುಧಾಕರ್ ಅವರ ಕುಟುಂಬಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.


















