ಸುದ್ದಿಒನ್,ವಿಜಯನಗರ,ಮೇ.12 : ಕಳೆದ ಕೆಲವು ದಿನಗಳಿಂದ ಸರಣಿ ಮನೆಗಳ್ಳತನ ಮಾಡುವ ಮೂಲಕ ಸಾರ್ವಜನಿಕರ ನಿದ್ದೆಗೆಡಿಸಿದ್ದ ಇಬ್ಬರು ಅಂತರ ಜಿಲ್ಲಾ ಮನೆಗಳ್ಳರನ್ನು ಹಗರಿಬೊಮ್ಮನಹಳ್ಳಿ ಪೊಲೀಸರು ಯಶಸ್ವಿ ಕಾರ್ಯಾಚರಣೆಯ ಮೂಲಕ ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 14.06 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರನ್ನು ಹಗರಿಬೊಮ್ಮನಹಳ್ಳಿ ತಾಲೂಕಿನ ಗದ್ದಿಕೇರಿ ಗ್ರಾಮದ ಕುಮಾರನಹಳ್ಳಿ ಆನಂದ (24) ಹಾಗೂ ಅರಳೇಹಳ್ಳಿಯ ಜಹಾಂಗೀರ್ ಭಾಷಾ (36) ಎಂದು ಗುರುತಿಸಲಾಗಿದೆ. ಈ ಪೈಕಿ ಜಹಾಂಗೀರ್ ಭಾಷಾ ಹಳೆಯ ಅಪರಾಧಿಯಾಗಿದ್ದು, ಈ ಹಿಂದೆ ಹರಪನಹಳ್ಳಿ, ಹಗರಿಬೊಮ್ಮನಹಳ್ಳಿ ಹಾಗೂ ಅರಸೀಕೆರೆ ಪೊಲೀಸ್ ಠಾಣೆಗಳಲ್ಲಿ ಬೈಕ್ ಕಳ್ಳತನ ಮತ್ತು ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ಶಿಕ್ಷೆ ಅನುಭವಿಸಿದ್ದ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ ಎಸ್. ಮಾಹಿತಿ ನೀಡಿದ್ದಾರೆ.

ಪೊಲೀಸರು ಆರೋಪಿಗಳಿಂದ ಒಟ್ಟು 14.06 ಲಕ್ಷ ರೂ. ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದು, 96.54 ಗ್ರಾಂ (ಅಂದಾಜು ಮೌಲ್ಯ 12.56 ಲಕ್ಷ ರೂ.) ಬೆಳ್ಳಿ ಆಭರಣ 750 ಗ್ರಾಂ (ಅಂದಾಜು ಮೌಲ್ಯ 1.50 ಲಕ್ಷ ರೂ.)
ಈ ಬಂಧನದೊಂದಿಗೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು ನಾಲ್ಕು ಪ್ರಮುಖ ಮನೆಗಳ್ಳತನ ಪ್ರಕರಣಗಳನ್ನು ಭೇದಿಸಿದಂತಾಗಿದೆ. ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ್ದ ಕಳ್ಳರನ್ನು ಶೀಘ್ರವಾಗಿ ಬಂಧಿಸುವಲ್ಲಿ ಯಶಸ್ವಿಯಾದ ಹಗರಿಬೊಮ್ಮನಹಳ್ಳಿ ಪೊಲೀಸರ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


















