ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡಗಳ (ST) ಮೀಸಲಾತಿಯನ್ನು ಹೆಚ್ಚಿಸಿ ಜಾರಿಗೆ ತಂದಿರುವ ಕಾನೂನನ್ನು ಸಂವಿಧಾನದ 9ನೇ ಷೆಡ್ಯೂಲ್ಗೆ ಸೇರಿಸಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ, ಕರ್ನಾಟಕ ರಾಜ್ಯ ವಾಲ್ಮೀಕಿ ಸಮಾಜದ ಸಮಾನ ಮನಸ್ಕರ ವೇದಿಕೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಹಲವು ಬೇಡಿಕೆಗಳನ್ನು ಮಂಡಿಸಿದೆ.
ರಾಜ್ಯದಲ್ಲಿ ಎಸ್ಸಿ ಮೀಸಲಾತಿಯನ್ನು 15% ರಿಂದ 17% ಕ್ಕೆ ಮತ್ತು ಎಸ್ಟಿ ಮೀಸಲಾತಿಯನ್ನು 3% ರಿಂದ 7% ಕ್ಕೆ ಹೆಚ್ಚಿಸಲಾಗಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿದ್ದ 56% ಮೀಸಲಾತಿ ಕಾನೂನಿಗೆ ಪ್ರಸ್ತುತ ಕರ್ನಾಟಕ ಉಚ್ಚ ನ್ಯಾಯಾಲಯವು ತಡೆಯಾಜ್ಞೆ ನೀಡಿದೆ. ಇದರಿಂದಾಗಿ ಈ ಸಮುದಾಯಗಳ ಶಿಕ್ಷಣ ಮತ್ತು ಉದ್ಯೋಗದ ಮೇಲೆ ಪೆಟ್ಟು ಬಿದ್ದಿದೆ ಎಂದು ವೇದಿಕೆ ಕಳವಳ ವ್ಯಕ್ತಪಡಿಸಿದೆ.

ಈ ಕಾನೂನಿಗೆ ಶಾಶ್ವತ ರಕ್ಷಣೆ ನೀಡಲು ಸಂವಿಧಾನದ 9ನೇ ಷೆಡ್ಯೂಲ್ಗೆ ಸೇರಿಸುವುದು ಅನಿವಾರ್ಯ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈ ಬಗ್ಗೆ ಕೇವಲ ಪತ್ರ ವ್ಯವಹಾರ ನಡೆಸುತ್ತಾ ಕಾಲಹರಣ ಮಾಡುತ್ತಿವೆ ಎಂದು ವೇದಿಕೆಯ ಅಧ್ಯಕ್ಷರಾದ ವಿ.ಎಸ್. ಉಗ್ರಪ್ಪ ಆರೋಪಿಸಿದ್ದಾರೆ.
ವೇದಿಕೆಯ ಪ್ರಮುಖ ಬೇಡಿಕೆಗಳು:
ಮೀಸಲಾತಿ ವಿಚಾರವಾಗಿ ತಕ್ಷಣವೇ ಸರ್ವಪಕ್ಷಗಳ ಸಭೆ ಕರೆಯಬೇಕು. ಸರ್ವಪಕ್ಷಗಳ ನಿಯೋಗವನ್ನು ಪ್ರಧಾನ ಮಂತ್ರಿಗಳ ಬಳಿಗೆ ಕೊಂಡೊಯ್ದು 9ನೇ ಷೆಡ್ಯೂಲ್ಗೆ ಸೇರಿಸಲು ಒತ್ತಡ ಹೇರಬೇಕು. ಹೈಕೋರ್ಟ್ ನಲ್ಲಿರುವ ತಡೆಯಾಜ್ಞೆ ತೆರವುಗೊಳಿಸಲು ದಕ್ಷ ವಕೀಲರನ್ನು ನೇಮಿಸಬೇಕು. ಅಗತ್ಯ ಬಿದ್ದರೆ ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಅರ್ಜಿ ಸಲ್ಲಿಸಬೇಕು.
ಎಸ್ಸಿ/ಎಸ್ಟಿ ಹೆಸರಿನಲ್ಲಿ ಸುಳ್ಳು ಜಾತಿ ಪ್ರಮಾಣಪತ್ರ ಪಡೆಯುತ್ತಿರುವವರ ವಿರುದ್ಧ ಮತ್ತು ಅಂತಹ ಪತ್ರ ನೀಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು.
ಈ ಪತ್ರಕ್ಕೆ ಮಾಜಿ ಲೋಕಸಭಾ ಸದಸ್ಯ ವಿ.ಎಸ್. ಉಗ್ರಪ್ಪ, ಎಂ. ನರಸಿಂಹಯ್ಯ, ಈ. ರಾಜಪ್ಪ ಹಾಗೂ ಸಂಘಟನೆಯ ಇತರ ಪದಾಧಿಕಾರಿಗಳು ಸಹಿ ಹಾಕಿದ್ದು, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಿ ಸಾಮಾಜಿಕ ನ್ಯಾಯ ಒದಗಿಸಬೇಕೆಂದು ವಿನಂತಿಸಿದ್ದಾರೆ.


















