ಸುದ್ದಿಒನ್,ಬೆಂಗಳೂರು,ಮೇ.15: ಹೆತ್ತ ತಾಯಿಯನ್ನು ವೃದ್ಧಾಪ್ಯದಲ್ಲಿ ಸಾಕುವುದು ಕೇವಲ ನೈತಿಕ ಅಥವಾ ಸಾಮಾಜಿಕ ಕರ್ತವ್ಯವಲ್ಲ, ಅದು ಮಕ್ಕಳ ಕಾನೂನುಬದ್ಧ ಹೊಣೆಗಾರಿಕೆಯೂ ಹೌದು ಎಂದು ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ತೀರ್ಪು ನೀಡಿದೆ. ಆಸ್ತಿ ಪಡೆದ ಮೇಲೆ ತಾಯಿಯನ್ನು ನಿರ್ಲಕ್ಷಿಸಿದ ಮಗಳ ನಡೆಯನ್ನು ತೀವ್ರವಾಗಿ ಖಂಡಿಸಿರುವ ನ್ಯಾಯಾಲಯ, ಮಗಳ ಹೆಸರಿಗೆ ವರ್ಗಾವಣೆಯಾಗಿದ್ದ ಆಸ್ತಿಯನ್ನು ಮರಳಿ ತಾಯಿಗೆ ನೀಡುವಂತೆ ಆದೇಶಿಸಿದೆ.
ನಿವೃತ್ತ ಸರ್ಕಾರಿ ಶಾಲಾ ಶಿಕ್ಷಕಿ ಹೇಮಾ (62) ಅವರು ತಾವು ಕಷ್ಟಪಟ್ಟು ಸಂಪಾದಿಸಿದ್ದ ಆಸ್ತಿಯನ್ನು, ವೃದ್ಧಾಪ್ಯದಲ್ಲಿ ಮಕ್ಕಳು ತಮ್ಮನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ ಎಂಬ ನಂಬಿಕೆಯಿಂದ ಮಗಳು ಆರ್. ಪವಿತ್ರಾ ಮತ್ತು ಮಗ ಆರ್. ವೇಣುಗೋಪಾಲ್ ಅವರ ಹೆಸರಿಗೆ ದಾನಪತ್ರದ ಮೂಲಕ ವರ್ಗಾಯಿಸಿದ್ದರು.
ಆದರೆ, ಆಸ್ತಿ ಕೈ ಸೇರಿದ ಬೆನ್ನಲ್ಲೇ ಮಕ್ಕಳ ನಡವಳಿಕೆ ಬದಲಾಗಿತ್ತು. ಸ್ವಂತ ಮನೆಯಿದ್ದರೂ ತಾಯಿಯನ್ನು ಬಾಡಿಗೆ ಮನೆಯಲ್ಲಿ ಇರುವಂತೆ ಮಾಡಿ, ಅವರಿಗೆ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿತ್ತು. ಇದರಿಂದ ನೊಂದ ತಾಯಿ, ‘ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ-2007’ರ ಅಡಿಯಲ್ಲಿ ನ್ಯಾಯಮಂಡಳಿಗೆ ಮೊರೆ ಹೋಗಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಂ ಅವರಿದ್ದ ಪೀಠವು ಮಗಳು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.ದಾನಪತ್ರದಲ್ಲಿ ‘ನೋಡಿಕೊಳ್ಳಬೇಕು’ ಎಂಬ ಷರತ್ತು ಸ್ಪಷ್ಟವಾಗಿ ನಮೂದಿಸದಿದ್ದರೂ, ಆಸ್ತಿ ನೀಡುವ ಹಿಂದೆ ಅಂತಹದೊಂದು ನಂಬಿಕೆ ಮತ್ತು ನಿರೀಕ್ಷೆ ಇರುತ್ತದೆ ಎಂಬುದು ಕಾನೂನಿನ ಆಶಯವಾಗಿದೆ. ತಾಂತ್ರಿಕ ಕಾರಣಗಳನ್ನು ನೀಡಿ ಮಕ್ಕಳಾದವರು ಪೋಷಕರನ್ನು ರಕ್ಷಿಸುವ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಾಯಿಯನ್ನು ಕಡೆಗಣಿಸಿದ ಹಿನ್ನೆಲೆಯಲ್ಲಿ, ಮಕ್ಕಳಿಗೆ ಮಾಡಿಕೊಡಲಾಗಿದ್ದ ದಾನಪತ್ರವನ್ನು ರದ್ದುಗೊಳಿಸಿ ಆಸ್ತಿಯನ್ನು ಮರಳಿ ತಾಯಿಯ ಹೆಸರಿಗೆ ನೋಂದಣಿ ಮಾಡಿಕೊಡುವ ನ್ಯಾಯಮಂಡಳಿಯ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











