ಸುದ್ದಿಒನ್,ಬೆಂಗಳೂರು,ಮೇ.24: ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ ಭಾರಿ ಚುರುಕುಗೊಂಡಿದ್ದು, ಇಂದು (ಮೇ 24) ಭಾನುವಾರ ಒಟ್ಟು 17 ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ನಾಳೆ ಕೂಡ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.
ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಾಮರಾಜನಗರ ಹಾಗೂ ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಜಾರಿಗೊಳಿಸಲಾಗಿದೆ.

ಇದೇ ವೇಳೆ ಕೊಪ್ಪಳ ಹಾಗೂ ಗದಗ ಜಿಲ್ಲೆಗಳಿಗೆ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ಘೋಷಿಸಿದ್ದು, ಈ ಭಾಗದಲ್ಲಿ ಗುಡುಗು ಮಿಂಚಿನೊಂದಿಗೆ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಇನ್ನು ಮೇ 25ರವರೆಗೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದ್ದು, ಕರಾವಳಿ ಭಾಗದಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಬೀಳುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.










