ಸುದ್ದಿಒನ್, ಚಿತ್ರದುರ್ಗ, ಮೇ.24 : ತಾಲ್ಲೂಕಿನ ತಮಟಕಲ್ಲು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಶನಿವಾರ ರಾತ್ರಿ ಲಾರಿ, ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಆಲಘಟ್ಟ ಗ್ರಾಮದ ನಿವಾಸಿಗಳಾದ ಗೋವಿಂದಪ್ಪ (45) ಮತ್ತು ಬಸವರಾಜಪ್ಪ (50) ಮೃತಪಟ್ಟ ದುರ್ದೈವಿಗಳು ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರು ಮತ್ತು ಲಾರಿ ನಿಯಂತ್ರಣ ತಪ್ಪಿ ಒಂದಕ್ಕೊಂದು ಬಲವಾಗಿ ಡಿಕ್ಕಿ ಹೊಡೆದಿವೆ. ಈ ವೇಳೆ ನಿಯಂತ್ರಣ ಕಳೆದುಕೊಂಡ ಕಾರು, ಪಕ್ಕದಲ್ಲೇ ಚಲಿಸುತ್ತಿದ್ದ ಬೈಕ್ಗೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸಮೇತ ರಸ್ತೆಗೆ ಬಿದ್ದ ಸವಾರರಿಬ್ಬರು ತೀವ್ರ ರಕ್ತಸ್ರಾವದಿಂದಾಗಿ ಮೃತಪಟ್ಟಿದ್ದಾರೆ.
ಅಪಘಾತದ ತೀವ್ರತೆಗೆ ವಾಹನಗಳು ರಸ್ತೆಯಲ್ಲೇ ಸಿಲುಕಿಕೊಂಡಿದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಭಾರಿ ಸಂಚಾರ ದಟ್ಟಣೆ ಉಂಟಾಗಿತ್ತು. ಇದರಿಂದಾಗಿ ಸಾರ್ವಜನಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು, ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದರು. ತದನಂತರ ಅಪಘಾತಕ್ಕೀಡಾದ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿ, ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಘಟನೆಗೆ ಸಂಬಂಧಿಸಿದಂತೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.










