ಸುದ್ದಿಒನ್,ಬೆಂಗಳೂರು,ಮೇ.25: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಅತ್ಯಂತ ಜನಪ್ರಿಯವಾಗಿರುವ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇದೀಗ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಅರ್ಹರಲ್ಲದವರಿಗೆ ಬ್ರೇಕ್ ಹಾಕಿ, ಕೇವಲ ನೈಜ ಫಲಾನುಭವಿಗಳಿಗೆ ಮಾತ್ರ ಯೋಜನೆಯ ಲಾಭ ತಲುಪಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಶಾಸಕರ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಸಂಪೂರ್ಣವಾಗಿ ಪರಿಷ್ಕರಣೆ (Gruhalakshmi Gruhajyoti Beneficiary List Verification) ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.

ಪ್ರಸ್ತುತ ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿಗೆ ಪ್ರತಿ ತಿಂಗಳು 2,000 ರೂಪಾಯಿಗಳನ್ನು ಖಾತೆಗೆ ಜಮಾ ಮಾಡಲಾಗುತ್ತಿದೆ. ಆದರೆ, ಸರ್ಕಾರದ ಇತ್ತೀಚಿನ ಪರಿಶೀಲನೆಯಲ್ಲಿ ಅರ್ಹತೆ ಇಲ್ಲದವರು ಹಾಗೂ ಮರಣ ಹೊಂದಿದ ಮಹಿಳೆಯರ ಹೆಸರಿನಲ್ಲಿಯೂ ಹಣ ಡ್ರಾ ಆಗುತ್ತಿರುವುದು ಬೆಳಕಿಗೆ ಬಂದಿದೆ. ಇತ್ತ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯಲ್ಲಿಯೂ ಸಹ ನಿಯಮಗಳನ್ನು ಮೀರಿ ಅರ್ಹತೆ ಇಲ್ಲದ ಲಕ್ಷಾಂತರ ಜನರು ಇದರ ಸೌಲಭ್ಯ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಬೊಕ್ಕಸಕ್ಕೆ ಆಗುತ್ತಿರುವ ನಷ್ಟವನ್ನು ತಪ್ಪಿಸಲು ಈ ಕಠಿಣ ಕ್ರಮಕ್ಕೆ ಮುಂದಾಗಲಾಗಿದೆ.
ಸದ್ಯ ರಾಜ್ಯದಲ್ಲಿ ಸುಮಾರು 1.24 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದಾರೆ. ಇವರಲ್ಲಿ ಮೃತಪಟ್ಟವರ ಹೆಸರಿನಲ್ಲಿ ಲಕ್ಷಾಂತರ ಮೊಬೈಲ್ ಸಂಖ್ಯೆಗಳು ಇನ್ನು ಚಾಲ್ತಿಯಲ್ಲಿರುವುದು ಪತ್ತೆಯಾಗಿದೆ. ಹೀಗಾಗಿ, ನಕಲಿ ಫಲಾನುಭವಿಗಳಿಗೆ ಕೊಕ್ ನೀಡಲು ಸರ್ಕಾರ ಹೊಸ ಪ್ಲಾನ್ ಮಾಡಿದೆ.ಹಾಲಿ ಇರುವ ಎಲ್ಲಾ ಗೃಹಲಕ್ಷ್ಮಿ ಫಲಾನುಭವಿಗಳಿಂದ ಹೊಸದಾಗಿ ಅರ್ಜಿ ಸ್ವೀಕರಿಸಲು ಸರ್ಕಾರ ಯೋಚಿಸುತ್ತಿದೆ ಎಂದು ಹೇಳಲಾಗಿದೆ.










