ಕರ್ನಾಟಕ ರಾಜಕೀಯದಲ್ಲಿ ಭಾರೀ ಬದಲಾವಣೆಯ ಸುಳಿವುಗಳು ಕಾಣಿಸುತ್ತಿದ್ದು, ಕಾಂಗ್ರೆಸ್ ಸರ್ಕಾರದಲ್ಲಿ ಹೊಸ ರಾಜಕೀಯ ಸಮೀಕರಣ ರೂಪುಗೊಳ್ಳುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ತೀವ್ರಗೊಂಡಿವೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರುವ ಸಾಧ್ಯತೆಗಳ ನಡುವೆಯೇ, ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿ ಹಾಗೂ ನಾಲ್ವರು ಉಪ ಮುಖ್ಯಮಂತ್ರಿಗಳ ನೇಮಕದ ವಿಚಾರ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೆರಡು ವರ್ಷಗಳು ಮಾತ್ರ ಬಾಕಿ ಇರುವ ಹಿನ್ನೆಲೆ, ಕಾಂಗ್ರೆಸ್ ಹೈಕಮಾಂಡ್ ಯಾವುದೇ ರಾಜಕೀಯ ಅಸಮಾಧಾನಕ್ಕೆ ಅವಕಾಶ ನೀಡದಂತೆ ದೊಡ್ಡ ಮಟ್ಟದ ಪವರ್ ಬ್ಯಾಲೆನ್ಸ್ ಫಾರ್ಮುಲಾ ರೂಪಿಸುತ್ತಿದೆ ಎನ್ನಲಾಗುತ್ತಿದೆ. ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರು ಹಾಗೂ ವಿವಿಧ ಸಮುದಾಯ ನಾಯಕರಿಗೆ ಸಮಾನ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ಬಹು ಉಪ ಮುಖ್ಯಮಂತ್ರಿ ಹುದ್ದೆಗಳ ಚರ್ಚೆ ಮುಂದಕ್ಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ.
ಸಿಎಂ ಸಿದ್ದರಾಮಯ್ಯ ಅವರು ಮೇ 28ರಂದು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ. ಇದೇ ವೇಳೆ ಹೊಸ ಮುಖ್ಯಮಂತ್ರಿ ಜೊತೆ ನಾಲ್ವರು ಉಪ ಮುಖ್ಯಮಂತ್ರಿಗಳು ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಫಾರ್ಮುಲಾ ಪ್ರಕಾರ ದಲಿತ, ಅಲ್ಪಸಂಖ್ಯಾತ, ಲಿಂಗಾಯತ ಹಾಗೂ ಒಬಿಸಿ ಸಮುದಾಯಗಳಿಂದ ತಲಾ ಒಬ್ಬರನ್ನು ಉಪ ಮುಖ್ಯಮಂತ್ರಿಗಳಾಗಿ ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಆದರೆ ಮಾತುಕತೆಗಳು ಇನ್ನೂ ಆರಂಭಿಕ ಹಂತದಲ್ಲಿದ್ದು, ಅಂತಿಮ ನಿರ್ಧಾರ ಕೈಗೊಳ್ಳಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಉಪ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷಿಗಳ ಪಟ್ಟಿಯಲ್ಲಿ ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ ಹಾಗೂ ಜಿ. ಪರಮೇಶ್ವರ್ ಸೇರಿದಂತೆ ಹಲವು ಹಿರಿಯ ಕಾಂಗ್ರೆಸ್ ನಾಯಕರ ಹೆಸರುಗಳು ಕೇಳಿಬರುತ್ತಿವೆ.ದೆಹಲಿ ಹೈಕಮಾಂಡ್ ಸಭೆಗಳ ಬಳಿಕ ರಾಜ್ಯ ಕಾಂಗ್ರೆಸ್ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಮುಂದಿನ ಕೆಲ ದಿನಗಳಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುವ ಸಾಧ್ಯತೆ ಇದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















