ಸುದ್ದಿಒನ್, ಚಿತ್ರದುರ್ಗ, ಮೇ.31 : ನಗರದ ಹೃದಯ ಭಾಗದಲ್ಲಿರುವ ಹಳೇ ಮಾಧ್ಯಮಿಕ ಶಾಲಾ ಆವರಣ ಸದ್ಯ ಕಸದ ದೆಸೆಯಿಂದಾಗಿ ದುರ್ನಾತ ಬೀರುತ್ತಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಸ್ಥಳೀಯರು ಮತ್ತು ಕ್ರೀಡಾಸಕ್ತರು ನಿತ್ಯ ಕ್ರಿಕೆಟ್ ಹಾಗೂ ಇನ್ನಿತರ ಆಟಗಳನ್ನಾಡಲು ಬಳಸುವ ಈ ವಿಶಾಲವಾದ ಮೈದಾನದ ಪ್ರವೇಶ ದ್ವಾರದಲ್ಲೇ ಕಸದ ರಾಶಿ ಬಿದ್ದಿದೆ. ಪ್ಲಾಸ್ಟಿಕ್ ಕವರ್ ಗಳು, ಒಣಗಿದ ಎಲೆಗಳು, ಹಸಿ ಕಸ ಹಾಗೂ ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಸುರಿಯಲಾಗುತ್ತಿದ್ದು, ಇಡೀ ಆವರಣ ಅಸ್ವಚ್ಛತೆಯಿಂದ ಕೂಡಿದೆ. ಮೈದಾನದ ತುಂಬೆಲ್ಲಾ ಪ್ಲಾಸ್ಟಿಕ್ ತ್ಯಾಜ್ಯ ಹರಡಿಕೊಂಡಿದ್ದು, ಬೀದಿನಾಯಿಗಳು ಕಸವನ್ನು ಕೆದಕುತ್ತಾ ಆಹಾರ ಹುಡುಕುವ ದೃಶ್ಯಗಳು ಇಲ್ಲಿ ಸಾಮಾನ್ಯವಾಗಿದೆ.

ಕೇವಲ ಕಸ ಅಷ್ಟೇ ಅಲ್ಲದೆ, ಮದ್ಯ ಸೇವಿಸಿ ಖಾಲಿ ಬಾಟಲಿಗಳನ್ನು ಮೈದಾನದಲ್ಲೇ ಒಡೆದು ಹಾಕಿ ಹೋಗುತ್ತಿರುವುದರಿಂದ, ಇಲ್ಲಿ ಆಟವಾಡಲು ಬರುವ ಮಕ್ಕಳು ಮತ್ತು ಕ್ರೀಡಾಪಟುಗಳ ಕಾಲಿಗೆ ಗಾಜಿನ ಚೂರುಗಳು ಚುಚ್ಚಿ ಗಾಯಗಳಾಗುವ ಭೀತಿ ಎದುರಾಗಿದೆ. ನಗರಸಭೆ ಕಚೇರಿಯ ಕಟ್ಟಡದ ಪಕ್ಕದಲ್ಲೇ ಈ ಮೈದಾನವಿದ್ದರೂ ಸಹ, ಅಧಿಕಾರಿಗಳು ಮಾತ್ರ ಈ ಬಗ್ಗೆ ಗಮನ ಹರಿಸುತ್ತಿಲ್ಲ. ನಮ್ಮ ನಾಗರಿಕ ಪ್ರಜ್ಞೆ ಎಲ್ಲಿಗೆ ತಲುಪಿದೆ ಎಂಬುದಕ್ಕೆ ಈ ಮೈದಾನವೇ ಸಾಕ್ಷಿ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಎಚ್ಚೆತ್ತುಕೊಂಡು, ಮೈದಾನದಲ್ಲಿ ಬಿದ್ದಿರುವ ಕಸದ ರಾಶಿಯನ್ನು ತೆರವುಗೊಳಿಸಬೇಕು. ಜೊತೆಗೆ ಇಲ್ಲಿ ಕಸ ಹಾಕುವವರ ಮತ್ತು ಮದ್ಯಪಾನ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಮೈದಾನದ ಸೌಂದರ್ಯ ಹಾಗೂ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















