ಸುದ್ದಿಒನ್, ಚಿತ್ರದುರ್ಗ, ಜೂನ್. 06 : ಕರ್ನಾಟಕ ರಾಜ್ಯ ಸಚಿವ ಸಂಪುಟದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ನ್ಯಾಯಯುತ ಪ್ರಾತಿನಿಧ್ಯ ನೀಡಬೇಕು ಹಾಗೂ ಪ್ರಬಲ ನಾಯಕರಾದ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಬೇಕು ಎಂದು ಒತ್ತಾಯಿಸಿ ಚಿತ್ರದುರ್ಗ ನಗರದ ಡಿಸಿ ಸರ್ಕಲ್ ನಲ್ಲಿ ಬೃಹತ್ ಜನಾಕ್ರೋಶ ಪ್ರತಿಭಟನೆ ನಡೆಯಿತು. ಜಮೀರ್ ಅಹ್ಮದ್ ಖಾನ್ ರವರ ನೂರಾರು ಸಂಖ್ಯೆಯ ಅಭಿಮಾನಿಗಳು ಹಾಗೂ ಮುಖಂಡರು ಒಟ್ಟಾಗಿ ಸೇರಿ ಈ ಪ್ರತಿಭಟನೆಯನ್ನು ನಡೆಸಿದರು.
ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಎಲ್ಲಾ ವರ್ಗಗಳ ಮತ್ತು ಎಲ್ಲಾ ಸಮುದಾಯಗಳ ಆಶೋತ್ತರಗಳನ್ನು ಪ್ರತಿನಿಧಿಸುವ ಪಕ್ಷವಾಗಿದೆ. ರಾಜ್ಯದ ಒಟ್ಟಾರೆ ಅಭಿವೃದ್ಧಿ ಹಾಗೂ ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಅಲ್ಪಸಂಖ್ಯಾತ ಸಮುದಾಯದ ಕೊಡುಗೆ ಅತ್ಯಂತ ಮಹತ್ತರವಾದದ್ದು. ಕಾಂಗ್ರೆಸ್ ಪಕ್ಷದ ಸಿದ್ಧಾಂತ, ಮೌಲ್ಯಗಳು ಹಾಗೂ ಚುನಾವಣಾ ಗೆಲುವುಗಳಲ್ಲಿ ಅಲ್ಪಸಂಖ್ಯಾತ ಸಮುದಾಯವು ನಿರಂತರವಾಗಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಆದ್ದರಿಂದ, ರಾಜ್ಯದ ನೂತನ ಸಚಿವ ಸಂಪುಟ ರಚನೆಯ ಸಂದರ್ಭದಲ್ಲಿ ಈ ಸಮುದಾಯದ ಶಾಸಕರಿಗೆ ಸಮರ್ಪಕ ಮತ್ತು ನ್ಯಾಯಯುತ ಪ್ರಾತಿನಿಧ್ಯ ದೊರೆಯಬೇಕು. ವಿಶೇಷವಾಗಿ, ಅಲ್ಪಸಂಖ್ಯಾತ ಸಮುದಾಯದ ಪ್ರಬಲ ಶಾಸಕರಾದ ಶ್ರೀ ಜಮೀರ್ ಅಹ್ಮದ್ ಖಾನ್ ರವರಿಗೆ ಉಪ ಮುಖ್ಯಮಂತ್ರಿ (ಡಿಸಿಎಂ) ಸ್ಥಾನ ನೀಡುವ ಮೂಲಕ ಸರ್ಕಾರವು ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶದ ತನ್ನ ಬದ್ಧತೆಯನ್ನು ಪ್ರದರ್ಶಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಸಮುದಾಯದ ಜನಸಂಖ್ಯೆ, ರಾಜಕೀಯ ಕೊಡುಗೆ ಮತ್ತು ಸಾಮಾಜಿಕ ಪ್ರಾತಿನಿಧ್ಯವನ್ನು ಪರಿಗಣಿಸಿ ಸೂಕ್ತ ಸ್ಥಾನಮಾನ ನೀಡುವುದು ಅತ್ಯಗತ್ಯವಾಗಿದ್ದು, ರಾಜ್ಯದ ಮುಖ್ಯಮಂತ್ರಿ ಹಾಗೂ ಪಕ್ಷದ ಹೈಕಮಾಂಡ್ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ನ್ಯಾಯಯುತ ಬೇಡಿಕೆಯನ್ನು ಈಡೇರಿಸಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ದಾವಣಗೆರೆ ದಕ್ಷಿಣ ಉಪಚುನಾವಣೆಯ ಸಂದರ್ಭದಲ್ಲಿ ವೈರಲ್ ಆಗಿರುವ ಆಡಿಯೋ ಸಂಪೂರ್ಣ ಸುಳ್ಳು ಮತ್ತು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಸೃಷ್ಟಿಸಲಾದ ನಕಲಿ ಆಡಿಯೋ ಆಗಿದೆ ಎಂದು ಪ್ರತಿಭಟನಾಕಾರರು ಸ್ಪಷ್ಟಪಡಿಸಿದರು. ಜಮೀರ್ ಅಹ್ಮದ್ ಖಾನ್ ರವರಿಗೆ ಡಿಸಿಎಂ ಸ್ಥಾನ ತಪ್ಪಿಸಲು ಇಂತಹ ಕುತಂತ್ರದ ಆಡಿಯೋವನ್ನು ಸೃಷ್ಟಿಸಲಾಗಿದೆ. ಈ ಆಡಿಯೋ ಮೊದಲೇ ಏಕೆ ಬರಲಿಲ್ಲ? ಕರಾರುವಕ್ಕಾಗಿ ಇದೇ ಸಂದರ್ಭದಲ್ಲಿ ಯಾಕೆ ಬಿಡಲಾಯಿತು? ಎಂದು ಪ್ರಶ್ನಿಸಿದ ಅಭಿಮಾನಿಗಳು, ಮುಂದಿನ ದಿನಗಳಲ್ಲಿ ಹೈಕಮಾಂಡ್ ಜಮೀರ್ ಅಹ್ಮದ್ ಖಾನ್ ಅವರಿಗೆ ಮಂತ್ರಿ ಸ್ಥಾನದ ಜೊತೆಗೆ ಡಿಸಿಎಂ ಸ್ಥಾನವನ್ನು ಮಾಡೇ ಮಾಡುತ್ತಾರೆ ಎಂಬ ದೃಢ ನಂಬಿಕೆಯನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ರಾಜ್ಯ ವಕ್ಫ್ ಬೋರ್ಡ್ ಅಧ್ಯಕ್ಷರಾದ ಅನ್ವರ್ ಭಾಷೆ ರವರು ಪಾಲ್ಗೊಂಡು ಮಾತನಾಡಿದರು. ಇವರೊಂದಿಗೆ ಮುಸ್ಲಿಂ ಹಾಸ್ಟೆಲ್ ಅಧ್ಯಕ್ಷರು ಹಾಗೂ ಸಮಾಜ ಸೇವಕರಾದ ಹಾಜಿ ನಯಾಜ್, ಕಾಂಗ್ರೆಸ್ ಮುಖಂಡರಾದ ಸಯ್ಯದ್ ಅನಿಸ್, ನಗರಸಭಾ ಸದಸ್ಯರಾದ ಸರ್ದಾರ್ ಅಹಮದ್ ಪಾಷಾ, ಹಿರಿಯ ವಕೀಲರಾದ ಸಾಧಿಕುಲ್ಲ, ದಲಿತ ಮುಖಂಡರಾದ ಬಾಳೆಕಾಯಿ ಶ್ರೀನಿವಾಸ್, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಸೈಯದ್ ಖುದ್ದೂಸ್, ಅಗತನಕಲ್ಲು ಮುತ್ವಲ್ಲಿ ದಾದಾಪೀರ್, ಸ್ಲಂ ಬೋರ್ಡ್ ಸದಸ್ಯರಾದ ರಶೀದ್, ಮುಖಂಡರಾದ ಅನ್ವರ್ ವರ್ದ, ನಗರಸಭೆ ಸದಸ್ಯರಾದ ದಾವೂದ್, ಗುಪ್ಪೆ ಮಂಜುನಾಥ್, ಜಾಗ ಮಸೀದಿ ಕಾರ್ಯದರ್ಶಿ ಮುಹಿಬುಲ್ಲ, ಮುತ್ತುವಲ್ಲಿಯಾದ ಸಾಧಿಕುಲ್ಲ, ಹಾಗೂ ಪ್ರಮುಖರಾದ ಇರ್ಫಾನ್, ಈಜಾಜ್, ನಿಜಾಂ, ಯೂಸುಫ್, ಅಕ್ರಂ ಸೇರಿದಂತೆ ಜಮೀರ್ ಅಹ್ಮದ್ ಖಾನ್ ಅಭಿಮಾನಿ ಬಳಗದ ನೂರಾರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















