ಬಾಗಲಕೋಟೆ: ಮುಳುಗಡೆ ಭೂಮಿಗೆ ಹಲವು ವರ್ಷಗಳಿಂದ ಪರಿಹಾರ ನೀಡದೆ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂದು ಆರೋಪಿಸಿದ ರೈತರೊಬ್ಬರು ಸರ್ಕಾರಿ ಅಧಿಕಾರಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಘಟನೆ ಬಾಗಲಕೋಟೆಯಲ್ಲಿ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಾಹಿತಿಯ ಪ್ರಕಾರ, ರಸ್ತೆ ಯೋಜನೆಗಾಗಿ 2004ರಲ್ಲಿ ದಾದೇನವರ್ ವೃತ್ತದ ಸಮೀಪದ ರೈತ ಬಸವರಾಜ ದೊಡ್ಡಮನಿ ಅವರ ಜಮೀನನ್ನು ಸರ್ಕಾರ ಸ್ವಾಧೀನಪಡಿಸಿಕೊಂಡಿತ್ತು. ಆದರೆ ಭೂ ಪರಿಹಾರ ನೀಡುವ ಪ್ರಕ್ರಿಯೆಯಲ್ಲಿ ವಿಳಂಬವಾಗಿರುವುದರಿಂದ ರೈತ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ.
ಬಿಟಿಡಿಎ ಕಚೇರಿಗೆ ಆಗಮಿಸಿದ ಬಸವರಾಜ ದೊಡ್ಡಮನಿ, ಕೇಸ್ ವರ್ಕರ್ ನೀಲಕಂಠ ಅಂಕದ್ ಅವರನ್ನು ಪ್ರಶ್ನಿಸಿ, ಬಳಿಕ ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ಘಟನೆಯಿಂದ ಕಚೇರಿ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.ಈ ವೇಳೆ ಡಿಎಸ್ಎಸ್ (ದಲಿತ ಸಂಘರ್ಷ ಸಮಿತಿ) ಮುಖಂಡರು ಸಫಾಯಿ ಕರ್ಮಚಾರಿಗಳಿಗೆ ಪ್ಲಾಟ್ ಹಂಚಿಕೆ ವಿಚಾರವಾಗಿ ಬಿಟಿಡಿಎ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿದ್ದರು. ಪ್ರತಿಭಟನೆಯ ನಡುವೆಯೇ ಈ ಘಟನೆ ನಡೆದಿದ್ದು, ಸ್ಥಳದಲ್ಲಿದ್ದವರು ವಿಡಿಯೋ ಚಿತ್ರೀಕರಿಸಿದ್ದಾರೆ.
ಘಟನೆಯ ಬಳಿಕ ರೈತ ಬಸವರಾಜ ದೊಡ್ಡಮನಿ ತಮ್ಮ ಅಳಲನ್ನು ವ್ಯಕ್ತಪಡಿಸಿ, ಭೂಮಿ ಕಳೆದುಕೊಂಡು ವರ್ಷಗಳಾದರೂ ಪರಿಹಾರ ಸಿಗದೇ ಕಚೇರಿಗೆ ಅಲೆದಾಡುತ್ತಿರುವುದಾಗಿ ಆರೋಪಿಸಿದ್ದಾರೆ. ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಅಧಿಕಾರಿಗಳಿಂದ ಸ್ಪಂದನೆ ದೊರೆಯಲಿಲ್ಲ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.
ಇತ್ತ ಸರ್ಕಾರಿ ಅಧಿಕಾರಿಗೆ ಹಲ್ಲೆ ನಡೆಸಿದ ಆರೋಪದಡಿ ಬಸವರಾಜ ದೊಡ್ಡಮನಿ ವಿರುದ್ಧ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದು ಹಾಗೂ ಬೆದರಿಕೆ ಹಾಕಿದ ಆರೋಪಗಳನ್ನು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ.ಘಟನೆ ಕುರಿತು ಪ್ರತಿಕ್ರಿಯಿಸಿರುವ ಬಿಟಿಡಿಎ ಕೇಸ್ ವರ್ಕರ್ ನೀಲಕಂಠ ಅಂಕದ್, “ರೈತನ ಫೈಲ್ಗೆ ನನ್ನ ಸಂಬಂಧವೇ ಇರಲಿಲ್ಲ. ಸಂಬಂಧಿತ ಅಧಿಕಾರಿಗಳನ್ನು ಭೇಟಿ ಮಾಡಲು ಸೂಚಿಸಿದ್ದೆ. ಆದರೆ ಏಕಾಏಕಿ ನನ್ನ ಮೇಲೆ ಆರೋಪ ಮಾಡಿ ಹಲ್ಲೆ ನಡೆಸಲಾಗಿದೆ. ಇದರಿಂದ ನನಗೆ ಮಾನಸಿಕವಾಗಿ ನೋವಾಗಿದೆ. ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.ಘಟನೆ ಇದೀಗ ಜಿಲ್ಲೆಯಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ರೈತರ ಸಮಸ್ಯೆ ಹಾಗೂ ಪರಿಹಾರ ವಿತರಣೆಯ ವಿಳಂಬದ ಪ್ರಶ್ನೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















