ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜೂನ್. 14 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ.ಹರಿಪ್ರಸಾದ್ರವರು ಜೂ.21 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಪದಗ್ರಹಣ ಸ್ವೀಕರಿಸುತ್ತಿರುವ ಸಮಾರಂಭಕ್ಕೆ ಜಿಲ್ಲೆಯಿಂದ ಐದು ಸಾವಿರ ಜನ ಪಾಲ್ಗೊಳ್ಳುತ್ತೇವೆಂದು ಮಾಜಿ ಸಚಿವ ಹೆಚ್.ಆಂಜನೇಯ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಕಟ್ಟಾಳು, ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾಗಿ, ನಾಲ್ಕು ಬಾರಿ ರಾಜ್ಯಸಭೆಗೆ ನೇಮಕಗೊಂಡಿದ್ದ ಸಂಘಟನಾ ಚತುರ ಬಿ.ಕೆ.ಹರಿಪ್ರಸಾದ್ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. ಅವರ ನಾಯಕತ್ವ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದ್ದು, ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷಕ್ಕೆ ಗೆಲುವು ಸಿಗುತ್ತದೆಂದು ಹೇಳಿದರು.
ಸಾಮಾನ್ಯ ಕಾರ್ಯಕರ್ತ, ವಿದ್ಯಾರ್ಥಿ ನಾಯಕನಾಗಿದ್ದ ಬಿ.ಕೆ.ಹರಿಪ್ರಸಾದ್ರವರಿಗೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರ ಹಸ್ತಾಂತರಿಸಲಿದ್ದಾರೆ, ಪಕ್ಷದ ಯುವ ನೇತಾರ ರಾಹುಲ್ಗಾಂಧಿ, ಎ.ಐ.ಸಿ.ಸಿ. ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವೇಣುಗೋಪಾಲ್, ಸುರ್ಜೆವಾಲ ಇವರುಗಳನ್ನು ಆಹ್ವಾನಿಸಿದ್ದೇವೆ. ಸಮಾರಂಭದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಭಿನಂದಿಸಲಾಗುವುದು. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಸೇರಿದಂತೆ ನಾಡಿನ ವಿವಿಧ ಭಾಗಗಳಿಂದ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಜಿಲ್ಲೆಯ ವಿವಿಧ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ತಪ್ಪದೆ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಬೇಕು. ಜಿಲ್ಲೆಯ ಆಯಾ ವಿಧಾನಸಭಾ ಕ್ಷೇತ್ರದ ಶಾಸಕರುಗಳು ಜನರನ್ನು ಕರೆತರಬೇಕು. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಭಾರಿ ಸಂಖ್ಯೆಯಲ್ಲಿ ಜನ ಸೇರಿ ಶಕ್ತಿ ಪ್ರದರ್ಶಿಸಬೇಕಿದೆ. ರಾಜ್ಯ ಸರ್ಕಾರ ಈಗಾಗಲೆ ಮೂರು ವರ್ಷಗಳನ್ನು ಪೂರೈಸಿದ್ದು, ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷದ ಗೆಲುವಿಗೆ ಕಾರ್ಯಕರ್ತರು ಈಗಿನಿಂದಲೇ ಸಿದ್ದರಾಗಬೇಕೆಂದು ಮನವಿ ಮಾಡಿದರು.
ಸರ್ಕಾರದ ಪಂಚ ಗ್ಯಾರೆಂಟಿಯಿಂದ ರಾಜ್ಯ ಹಸಿವು, ಬಡತನ ಮುಕ್ತವಾಗಿದೆ. ಇದನ್ನು ಸಹಿಸದೆ ಬಿಜೆಪಿ.ಯವರು ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಟೀಕಿಸುತ್ತಿರುವುದರಲ್ಲಿ ಅರ್ಥವಿಲ್ಲ. ಬಿಹಾರ ಸೇರಿದಂತೆ ಅನೇಕ ರಾಜ್ಯಗಳು ನಮ್ಮ ಯೋಜನೆಗಳನ್ನು ಕಾಪಿ ಮಾಡಿ ವಾಮ ಮಾರ್ಗದಲ್ಲಿ ಅಧಿಕಾರ ಹಿಡಿದಿವೆ. ಪ್ರಜಾಪ್ರಭುತ್ವಕ್ಕೆ ಇದು ಮಾರಕ ಎಂದು ವಿರೋಧಿಗಳಿಗೆ ಹೆಚ್.ಆಂಜನೇಯ ತಿರುಗೇಟು ನೀಡಿದರು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದೆ. ನನ್ನ ವೈಫಲ್ಯದಿಂದ ಸೋಲನುಭವಿಸಬೇಕಾಯಿತು. ನಮ್ಮ ಪಕ್ಷದವರೆ ಕೆಲವರು ಬಿಜೆಪಿ. ಏಜೆಂಟರಾಗಿ ಅವರು ಕೊಡುವ ಎಂಜಲು ಕಾಸಿಗೆ ಬಲಿಯಾದರು. ಪಕ್ಷ ನನಗೆ ಎಲ್ಲಾ ಅಧಿಕಾರ ಕೊಟ್ಟಿದೆ. ವಿಧಾನಪರಿಷತ್ ಸದಸ್ಯನಾಗಿ ಮಾಡುವಂತೆ ನಾನು ಯಾರನ್ನು ಕೇಳಿಲ್ಲ. ಎಂಎಲ್ಸಿ. ಚುನಾವಣೆಯಲ್ಲಿ ಪಕ್ಷದ ನಿಷ್ಟಾವಂತರಿಗೆ ಅವಕಾಶ ನೀಡಬೇಕು. ಸದ್ಯದಲ್ಲಿಯೇ ಎಐಸಿಸಿ. ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಬಳಿ ನಿಯೋಗ ಹೊರಟು ನಮ್ಮ ಅಹವಾಲು ಸಲ್ಲಿಸುತ್ತೇವೆ. ದೇಶಕ್ಕೆ ಸ್ವಾತಂತ್ರ್ಯ ಬಂದು ಎಪ್ಪತ್ತೈದು ವರ್ಷಗಳು ಕಳೆದಿದೆ. ಕಾಂಗ್ರೆಸ್ ನಮ್ಮನ್ನು ಕಡೆಗಣಿಸಿಲ್ಲ. ಈಗ ಕಡೆಗಣಿಸುತ್ತಿದೆ ಎನ್ನುವ ಅನುಮಾನ ಕಾಡುತ್ತಿದೆ. ಒಳ ಮೀಸಲಾತಿಯಲ್ಲಿ ಲೋಪವಾಗಿದೆ. ಅದನ್ನು ಸರಿಪಡಿಸಿ ಮಾದಿಗ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸುವಲ್ಲಿ ಹೋರಾಟ ನಡೆಸುತ್ತೇನೆಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ.ತಾಜ್ಪೀರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಆರ್.ನರಸಿಂಹರಾಜ, ಪ್ರಚಾರ ಸಮಿತಿ ಅಧ್ಯಕ್ಷ ಆರ್.ಕೃಷ್ಣಮೂರ್ತಿ, ವಕ್ಪ್ ಬೋರ್ಡ್ ಮಾಜಿ ಚೇರ್ಮನ್ ಅನ್ವರ್ಭಾಷಾ, ಚಳ್ಳಕೆರೆ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಸಮರ್ಥರಾಯ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್ಕುಮಾರ್ ಹೆಚ್.ಅಂಜಿನಪ್ಪ, ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮುನಿರಾ ಎ.ಮಕಾಂದಾರ್, ಹೊಳಲ್ಕೆರೆ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















