ದೆಹಲಿ.ಜೂನ್.19: ದೇಶದಾದ್ಯಂತ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಮತ್ತು ಪಾದಚಾರಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.ರಸ್ತೆಯ ಪಕ್ಕದಲ್ಲಿ ನಿರ್ಮಿಸಲಾದ ಪಾದಚಾರಿ ಮಾರ್ಗಗಳಲ್ಲಿ ನಡೆಯುವುದು ನಾಗರಿಕರ ಮೂಲಭೂತ ಹಕ್ಕಾಗಿದ್ದು, ಮೋಟಾರು ವಾಹನಗಳ ಚಲನವಲನಕ್ಕಿಂತ ಪಾದಚಾರಿಗಳ ಹಕ್ಕಿಗೇ ಮೊದಲ ಆದ್ಯತೆ ನೀಡಬೇಕು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಅತುಲ್ ಎಸ್. ಚಂದೂರ್ಕರ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು ಈ ಮಹತ್ವದ ತೀರ್ಪು ಪ್ರಕಟಿಸಿದೆ. ಸಂವಿಧಾನದ ವಿಧಿ 19(1)(d) (ಸ್ವತಂತ್ರವಾಗಿ ಸಂಚರಿಸುವ ಹಕ್ಕು), ವಿಧಿ 21 (ಜೀವಿಸುವ ಹಕ್ಕು) ಹಾಗೂ ವಿಧಿ 19(1)(a), (b), (c) ಗಳ ಅಡಿಯಲ್ಲಿ ಪಾದಚಾರಿ ಮಾರ್ಗದಲ್ಲಿ ನಡೆಯುವ ಹಕ್ಕು ಒಳಗೊಂಡಿದೆ ಎಂದು ಕೋರ್ಟ್ ಹೇಳಿದೆ.

ರಸ್ತೆಗಳು ಇರುವ ಕಡೆಗಳಲ್ಲೆಲ್ಲ ಪಾದಚಾರಿ ಮಾರ್ಗಗಳನ್ನು ಗುರುತಿಸುವುದು, ನಿರ್ಮಿಸುವುದು, ನಿರ್ವಹಿಸುವುದು ಮತ್ತು ಅವುಗಳನ್ನು ರಕ್ಷಿಸುವುದು ನಗರಾಭಿವೃದ್ಧಿ ಪ್ರಾಧಿಕಾರಗಳು, ಮಹಾನಗರ ಪಾಲಿಕೆಗಳು, ಪುರಸಭೆಗಳು ಮತ್ತು ಪಂಚಾಯತ್ಗಳ ಕಡ್ಡಾಯ ಕರ್ತವ್ಯವಾಗಿದೆ.ಒಂದು ವೇಳೆ ಪಾದಚಾರಿಗಳ ಈ ಮೂಲಭೂತ ಹಕ್ಕಿನ ಉಲ್ಲಂಘನೆಯಾದರೆ, ನಾಗರಿಕರು ಮೋಟಾರು ವಾಹನ ಕಾಯ್ದೆಯ ಹೊರತಾಗಿಯೂ ನೇರವಾಗಿ ಸಂವಿಧಾನಾತ್ಮಕ ಪರಿಹಾರ ಮತ್ತು ಪರಿಹಾರ ಧನವನ್ನು (Compensation) ಕೋರಬಹುದು. ಪಾದಚಾರಿಗಳ ನಡಿಗೆಯ ಹಕ್ಕನ್ನು ರಕ್ಷಿಸಲು ಮತ್ತು ಉತ್ತೇಜಿಸಲು ಪ್ರತ್ಯೇಕ ನಿಯಂತ್ರಣ ಮಂಡಳಿಯನ್ನು ಸ್ಥಾಪಿಸುವಂತೆ ಕೋರ್ಟ್ ಸೂಚಿಸಿದೆ.
ಮಣಿಯಾರ್ ಇಲಿಯಾಸ್ (ಶೇಕ್ ರಿಯಾಜ್) ಎಂಬುವವರು ಸಲ್ಲಿಸಿದ್ದ ಸಿವಿಲ್ ಮೇಲ್ಮನವಿಯ ವಿಚಾರಣೆ ನಡೆಸುವಾಗ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ. ಶೇಕ್ ರಿಯಾಜ್ ಅವರು ತಮ್ಮ 5 ವರ್ಷದ ಪುಟ್ಟ ಮಗನನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದಾಗ, ವೇಗವಾಗಿ ಬಂದ ಟ್ಯಾಂಕರ್ ಲಾರಿಯೊಂದು ಮಗುವಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿತ್ತು. ಈ ಭೀಕರ ಅಪಘಾತದಲ್ಲಿ ಮಗು ಸ್ಥಳದಲ್ಲೇ ಸಾವನ್ನಪ್ಪಿತ್ತು. ಈ ಪ್ರಕರಣದ ತೀವ್ರತೆಯನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ಕಡಿತಗೊಳಿಸಿದ್ದ ಪರಿಹಾರದ ಮೊತ್ತವನ್ನು ರೂ. 11,44,628 ಕ್ಕೆ ಹೆಚ್ಚಿಸಿ, ಎರಡು ತಿಂಗಳೊಳಗೆ ತಂದೆಗೆ ಪಾವತಿಸುವಂತೆ ಆದೇಶಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.













