Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಜನಸಾಮಾನ್ಯರ ಕುಂದುಕೊರತೆ ನಿವಾರಣೆಗೆ ಸರ್ಕಾರದ ಮಹತ್ವದ ಹೆಜ್ಜೆ: ನೂತನ ‘ಪ್ರಜಾಸೇವೆ ಇಲಾಖೆ’ ಸ್ಥಾಪನೆಗೆ ಸಂಪುಟ ಅಸ್ತು!

---Advertisement---

ಬೆಂಗಳೂರು.ಜೂನ್.21:ರಾಜ್ಯದ ಜನಸಾಮಾನ್ಯರ ಸಮಸ್ಯೆ ಹಾಗೂ ಕುಂದುಕೊರತೆಗಳಿಗೆ ಕಾನೂನಿನ ಚೌಕಟ್ಟಿನಲ್ಲಿ ತಕ್ಷಣ ಸ್ಪಂದಿಸಿ, ಸೂಕ್ತ ನ್ಯಾಯ ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬೃಹತ್ ನಿರ್ಧಾರ ಕೈಗೊಂಡಿದೆ. ಇದಕ್ಕಾಗಿ ನೂತನವಾಗಿ “ಪ್ರಜಾಸೇವೆ ಇಲಾಖೆ”ಯನ್ನು ಪ್ರಾರಂಭಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸಭೆಯ ಬಳಿಕ ಮುಖ್ಯಮಂತ್ರಿಗಳು ಮಾಧ್ಯಮಗಳಿಗೆ ಈ ಕುರಿತು ಮಾಹಿತಿ ಹಂಚಿಕೊಂಡರು.

ಹೊಸದಾಗಿ ರಚನೆಯಾಗಲಿರುವ ‘ಪ್ರಜಾಸೇವೆ ಇಲಾಖೆ’ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಇದರ ಸಂಪೂರ್ಣ ಜವಾಬ್ದಾರಿಯನ್ನು ಪ್ರತ್ಯೇಕ ಸಚಿವರೊಬ್ಬರಿಗೆ ವಹಿಸಲಾಗುವುದು.ಜನರ ಕಷ್ಟ ಮತ್ತು ಭಾವನೆಗಳಿಗೆ ಪೂರಕವಾಗಿ ಸ್ಪಂದಿಸಲು ಈ ಇಲಾಖೆಗೆ ಹಿರಿಯ ಐಎಎಸ್ ಅಧಿಕಾರಿಯೊಬ್ಬರನ್ನು ಮುಖ್ಯಸ್ಥರನ್ನಾಗಿ ನೇಮಿಸಲಾಗುವುದು. ಅವರು ಸಾರ್ವಜನಿಕರ ಎಲ್ಲಾ ಸಮಸ್ಯೆಗಳನ್ನು ಖುದ್ದಾಗಿ ಪರಿಶೀಲಿಸಿ, ವರದಿ ನೀಡುವ ಕೆಲಸ ಮಾಡಲಿದ್ದಾರೆ.

ಮುಖ್ಯಮಂತ್ರಿಗಳು ಹಾಗೂ ಇತರೆ ಸಚಿವರುಗಳಿಗೆ ಸಾರ್ವಜನಿಕರು ಸಲ್ಲಿಸುವ ಎಲ್ಲಾ ಅಹವಾಲು ಮತ್ತು ಮನವಿಗಳನ್ನು ಇನ್ಮುಂದೆ ಇದೇ ಇಲಾಖೆಯ ಅಡಿಯಲ್ಲಿ ತರಲಾಗುವುದು. ಇದರಿಂದ ಅರ್ಜಿಗಳ ವಿಲೇವಾರಿ ಸುಲಭವಾಗಲಿದೆ.

ವಾರಕ್ಕೊಮ್ಮೆ ಕಡ್ಡಾಯ ‘ಜನಸ್ಪಂದನ’ ಸಭೆ:

ಸರ್ಕಾರದ ಈ ಯೋಜನೆಯು ತಳಮಟ್ಟದ ಜನರಿಗೂ ತಲುಪಬೇಕೆಂಬ ಉದ್ದೇಶದಿಂದ ಜಿಲ್ಲಾ ಉಸ್ತುವಾರಿ ಸಚಿವರಿಗೆ ವಿಶೇಷ ಜವಾಬ್ದಾರಿ ನೀಡಲಾಗಿದೆ.ಜಿಲ್ಲಾ ಉಸ್ತುವಾರಿ ಸಚಿವರುಗಳು ತಾವು ಜವಾಬ್ದಾರಿ ಹೊತ್ತಿರುವ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ವಾರಕ್ಕೆ ಒಮ್ಮೆ ಕಡ್ಡಾಯವಾಗಿ ಸ್ಥಳೀಯ ಶಾಸಕರೊಂದಿಗೆ ಸೇರಿ ‘ಜನಸ್ಪಂದನ’ ಸಭೆಗಳನ್ನು ನಡೆಸಬೇಕು. ಸಭೆಯಲ್ಲಿ ಸ್ವೀಕೃತವಾದ ದೂರುಗಳನ್ನು ಆನಂತರ ಸೂಕ್ತವಾಗಿ ಪರಿಶೀಲಿಸಿ, ಬಗೆಹರಿಸುವ ಕೆಲಸ ಮಾಡಲಾಗುವುದು,” ಎಂದು ಸಿಎಂ ತಿಳಿಸಿದರು.ಈ ನೂತನ ಇಲಾಖೆಯ ಸ್ಥಾಪನೆಯ ಮೂಲಕ ಜನಸಾಮಾನ್ಯರ ಮನೆಬಾಗಿಲಿಗೆ ಆಡಳಿತವನ್ನು ತಲುಪಿಸಲು ಹಾಗೂ ಶೀಘ್ರವಾಗಿ ನ್ಯಾಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಭರವಸೆ ನೀಡಿದರು.

Join WhatsApp

Join Now

Join Telegram

Join Now