ಬೆಂಗಳೂರು.ಜೂನ್.23:ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಕಂಗಾಲಾಗಿದ್ದ ಜನತೆಗೆ ಹವಾಮಾನ ಇಲಾಖೆ ಕೊನೆಗೂ ಒಂದು ನಿರಾಳ ಸುದ್ದಿ ನೀಡಿದೆ. ಇಂದಿನಿಂದ ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ.
ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಜೂನ್ 23 ರಿಂದ ಜೂನ್ 25 ರವರೆಗೆ ರಾಜ್ಯದ ಎಲ್ಲಾ ಭಾಗಗಳಲ್ಲೂ ಮುಂಗಾರು ಮಳೆ ಚುರುಕಾಗಲಿದೆ. ಇದರ ಬೆನ್ನಲ್ಲೇ ಜೂನ್ 27 ರಂದು ಕರಾವಳಿ ತೀರದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಭಾಗಗಳಿಗೆ ‘ಆರೆಂಜ್ ಅಲರ್ಟ್’ ಜಾರಿ ಮಾಡಲಾಗಿದೆ.
ಮುಂದಿನ ಮೂರು ದಿನಗಳ ಕಾಲ ಸಾರ್ವಜನಿಕರು ಹಾಗೂ ರೈತರು ಮಳೆಯ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.














