ದಾವಣಗೆರೆ : ಪೇಂಟಿಂಗ್ ಕೆಲಸಗಾರನಾಗಿ ವಾಸವಾಗಿದ್ದ ಉತ್ತರ ಪ್ರದೇಶ ಮೂಲದ ಯುವಕನೊಬ್ಬನನ್ನು ಶಂಕಿತ ಉಗ್ರ ಚಟುವಟಿಕೆಗಳ ಆರೋಪದಡಿ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಬಂಧಿಸಲಾಗಿದೆ.ಉತ್ತರ ಪ್ರದೇಶದ ಸಹರಾನ್ಪುರ ಜಿಲ್ಲೆಯ ಲಖ್ನೋತಿ ಗ್ರಾಮದ ಸೊಹೇಲ್ (22) ಬಂಧಿತನಾಗಿದ್ದಾನೆ. ಕಳೆದ 20ರಿಂದ 25 ದಿನಗಳಿಂದ ಬನ್ನಿಕೋಡು ಗ್ರಾಮದಲ್ಲಿ ವಾಸವಾಗಿದ್ದ ಆತ, ಬೆಳ್ಳೂಡಿಯ ಕಾರ್ಗಿಲ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ತನ್ನ ಸಹೋದರನ ಬಳಿಗೆ ಬಂದಿದ್ದ ಎನ್ನಲಾಗಿದೆ.
ಕೇಂದ್ರ ಗುಪ್ತಚರ ಇಲಾಖೆಯಿಂದ ದೊರೆತ ಮಾಹಿತಿಯ ಆಧಾರದಲ್ಲಿ ಗ್ರಾಮಾಂತರ ಡಿವೈಎಸ್ಪಿ ಬಿ.ಎಸ್. ಬಸವರಾಜ ನೇತೃತ್ವದ ತಂಡ ಮಂಗಳವಾರ ಮುಂಜಾನೆ ಕಾರ್ಯಾಚರಣೆ ನಡೆಸಿ ಸೊಹೇಲ್ನನ್ನು ವಶಕ್ಕೆ ಪಡೆದಿದೆ.ಪ್ರಾಥಮಿಕ ತನಿಖೆಯಲ್ಲಿ ಸೊಹೇಲ್ ಸಾಮಾಜಿಕ ಜಾಲತಾಣಗಳ ಮೂಲಕ ಪಾಕಿಸ್ತಾನ ಮೂಲದ ವ್ಯಕ್ತಿಗಳು ಹಾಗೂ ಉಗ್ರ ಚಟುವಟಿಕೆಗಳಿಗೆ ಸಂಬಂಧಿಸಿದವರೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಭಾರತ ವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದ ವಾಟ್ಸಪ್ ಗುಂಪುಗಳಲ್ಲಿ ಸಕ್ರಿಯನಾಗಿದ್ದ ಮಾಹಿತಿ ಲಭ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.
ಕಾರ್ಯಾಚರಣೆ ವೇಳೆ ಸೊಹೇಲ್ ವಾಸವಿದ್ದ ಸ್ಥಳದ ಮೇಲೆ ದಾಳಿ ನಡೆಸಿ ಇತರ ಕೆಲವರನ್ನೂ ವಿಚಾರಣೆಗೆ ಒಳಪಡಿಸಲಾಗಿತ್ತು. ಬಳಿಕ ಸೊಹೇಲ್ನನ್ನು ಹೆಚ್ಚಿನ ತನಿಖೆಗಾಗಿ ತುಮಕೂರು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.ಈ ಪ್ರಕರಣದ ತನಿಖೆಯಲ್ಲಿ ರಾಷ್ಟ್ರೀಯ ತನಿಖಾ ದಳ (NIA) ಕೂಡ ಭಾಗಿಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು, ಬಂಧಿತನ ಸಂಪರ್ಕ ಜಾಲ ಹಾಗೂ ಚಟುವಟಿಕೆಗಳ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ.









