ಬೆಂಗಳೂರು.ಜೂನ್.25: ರಾಜ್ಯದಲ್ಲಿ ಪ್ರಾಕೃತಿಕ ವಿಕೋಪಗಳ ಸಮರ್ಥ ನಿರ್ವಹಣೆ ಮತ್ತು ಮೇಲ್ವಿಚಾರಣೆಗಾಗಿ ಉಪ ಮುಖ್ಯಮಂತ್ರಿ ಹಾಗೂ ವಿವಿಧ ಸಚಿವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಜಿಲ್ಲಾವಾರು ಜವಾಬ್ದಾರಿಯನ್ನು ಹಂಚಿಕೆ ಮಾಡಿ ಕರ್ನಾಟಕ ಸರ್ಕಾರ ಗುರುವಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಮುಖ್ಯಮಂತ್ರಿಗಳ ಅನುಮೋದನೆಯೊಂದಿಗೆ ಹೊರಬಿದ್ದಿರುವ ಈ ಆದೇಶವು ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ.
ಸರ್ಕಾರದ ಜಂಟಿ ಕಾರ್ಯದರ್ಶಿ ಕಚೇರಿಯಿಂದ ಬಿಡುಗಡೆಯಾಗಿರುವ ಈ ಆದೇಶದ ಪ್ರಕಾರ, ಪ್ರಮುಖ ಸಚಿವರಿಗೆ ಒಂದಕ್ಕಿಂತ ಹೆಚ್ಚು ಜಿಲ್ಲೆಗಳ ಉಸ್ತುವಾರಿಯನ್ನು ವಹಿಸಲಾಗಿದೆ. ಡಾ. ಜಿ. ಪರಮೇಶ್ವರ್ ಅವರಿಗೆ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದ್ದರೆ, ಕೆ.ಎಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಉಸ್ತುವಾರಿ ವಹಿಸಲಾಗಿದೆ. ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಮತ್ತು ಮಂಡ್ಯ ಜಿಲ್ಲೆಗಳು ಹಾಗೂ ಎಂ.ಬಿ. ಪಾಟೀಲ್ ಅವರಿಗೆ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಜವಾಬ್ದಾರಿ ಸಿಕ್ಕಿದೆ.

ಇನ್ನುಳಿದಂತೆ ಕೆ.ಜೆ. ಜಾರ್ಜ್ ಅವರಿಗೆ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದ್ದು, ಕೃಷ್ಣ ಬೈರೇಗೌಡ ಅವರಿಗೆ ಬೆಂಗಳೂರು ನಗರ ಮತ್ತು ಹಾಸನ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿದೆ. ಈಶ್ವರ್ ಖಂಡ್ರೆ ಅವರಿಗೆ ಬೀದರ್ ಮತ್ತು ಗದಗ್, ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿ, ಧಾರವಾಡ ಮತ್ತು ಹಾವೇರಿ, ಪ್ರಿಯಾಂಕ್ ಖರ್ಗೆ ಅವರಿಗೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ. ಡಾ. ಶರಣಪ್ರಕಾಶ್ ರುದ್ರಪ್ಪ ಪಾಟೀಲ್ ಅವರಿಗೆ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಹೊಣೆಗಾರಿಕೆ ವಹಿಸಲಾಗಿದೆ.
ಯು.ಟಿ. ಖಾದರ್ ಅವರಿಗೆ ಉಡುಪಿ, ಕೊಡಗು, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದ್ದು, ಭೈರತಿ ಸುರೇಶ್ ಅವರಿಗೆ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಹೊಣೆ ನೀಡಲಾಗಿದೆ. ಇನ್ನು ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಪ್ರಾಕೃತಿಕ ವಿಕೋಪ ನಿರ್ವಹಣೆಯ ಮೇಲ್ವಿಚಾರಣೆಯನ್ನು ವಹಿಸಿಕೊಡಲಾಗಿದೆ. ಮುಂಗಾರು ಮಳೆ ಹಾಗೂ ಎದುರಾಗಬಹುದಾದ ಪ್ರಕೃತಿ ವಿಕೋಪಗಳನ್ನು ಎದುರಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












