ದಾವಣಗೆರೆ ಜಿಲ್ಲೆಯ ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀಗಳ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.ಪ್ರಕರಣದ ಸಂತ್ರಸ್ತ ಬಾಲಕನ ತಾಯಿ, ವಚನಾನಂದ ಶ್ರೀಗಳಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾದ ಪ್ರಕ್ರಿಯೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.
ಪೋಕ್ಸೋ ಪ್ರಕರಣದ ದೂರು ದಾಖಲಾಗುವ ಒಂದು ವಾರಕ್ಕೂ ಮುನ್ನವೇ ನಿರೀಕ್ಷಣಾ ಜಾಮೀನು ನೀಡಲಾಗಿರುವುದು ಕಾನೂನುಬದ್ಧವಾಗಿ ಸಮಂಜಸವಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ವಚನಾನಂದ ಶ್ರೀಗಳಿಗೆ ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸುವಂತೆ ಆದೇಶಿಸಿದೆ.ಆದರೆ, ವಚನಾನಂದ ಶ್ರೀಗಳಿಗೆ ತಕ್ಷಣದ ಸಂಕಷ್ಟವಾಗದಂತೆ ಹೈಕೋರ್ಟ್ ಮೂರು ವಾರಗಳ ಕಾಲ ನಿರೀಕ್ಷಣಾ ಜಾಮೀನಿನ ರಕ್ಷಣೆಯನ್ನು ಮುಂದುವರಿಸಲು ಅವಕಾಶ ನೀಡಿದೆ. ಈ ಅವಧಿಯಲ್ಲಿ ಅವರು ನಿಯಮಿತ (ರೆಗ್ಯುಲರ್) ಜಾಮೀನಿಗಾಗಿ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಾಲಯ ಸೂಚಿಸಿದೆ.
ಹೀಗಾಗಿ ನಿರೀಕ್ಷಣಾ ಜಾಮೀನು ರದ್ದಾದರೂ, ಮುಂದಿನ ಮೂರು ವಾರಗಳ ಕಾಲ ಕಾನೂನುಬದ್ಧ ರಕ್ಷಣೆ ಮುಂದುವರಿಯಲಿದ್ದು, ವಚನಾನಂದ ಶ್ರೀಗಳಿಗೆ ತಾತ್ಕಾಲಿಕ ನೆಮ್ಮದಿ ದೊರೆತಂತಾಗಿದೆ.









