ಸುದ್ದಿಒನ್, ಹಿರಿಯೂರು, ಜೂನ್. 27 : ಮುಂಬರುವ ಹಿರಿಯೂರು ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಾನು ಕೂಡ ಪ್ರಬಲ ಆಕಾಂಕ್ಷಿ ಎಂದು ಕೆಪಿಸಿಸಿ ಉಪಾಧ್ಯಕ್ಷ ಗನ್ನಾಯಕನಹಳ್ಳಿ ಆರ್. ಮಂಜುನಾಥ್ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಕಾರ್ಯಕರ್ತರೊಂದಿಗೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಹಿರಿಯೂರು ಕ್ಷೇತ್ರಕ್ಕೆ ಅನಿವಾರ್ಯವಾಗಿ ಉಪಚುನಾವಣೆ ಎದುರಾಗಿದೆ. ಹಾಗಾಗಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದರು. ಕ್ಷೇತ್ರದ ಜನತೆಯ ಅಭಿಪ್ರಾಯ ಸಂಗ್ರಹಿಸಿ, ಸ್ಥಳೀಯರಿಗೆ ಟಿಕೆಟ್ ನೀಡಬೇಕು ಎಂಬ ಕೂಗು ಕೇಳಿ ಬರುತ್ತಿದೆ. ಆಯಾ ಕ್ಷೇತ್ರದಲ್ಲಿ ಉಪಚುನಾವಣೆಗೆ ಅನುಗುಣವಾಗಿ ಕುಟುಂಬದವರಿಗೆ ಮಾತ್ರ ಟಿಕೆಟ್ ನೀಡಲಾಗುತ್ತದೆ. ಆದರೆ ಈ ಕ್ಷೇತ್ರದಲ್ಲಿ ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಟಿಕೆಟ್ ನೀಡಲಾಗುತ್ತದೆ. ನಾನು ಸುಮಾರು 40 ವರ್ಷಗಳಿಂದ ಪಕ್ಷಕ್ಕೆ ದುಡಿದಿದ್ದೇನೆ. ವಿದ್ಯಾರ್ಥಿ ಜೀವನದಿಂದ ಹಿಡಿದು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ, ಪ್ರಸ್ತುತ ಕೆಪಿಸಿಸಿ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಬೆಳಗಾವಿ ಜಿಲ್ಲೆಯ ಉಸ್ತುವಾರಿ ಹಾಗೂ ಬೆಂಗಳೂರು ಕಾರ್ಪೋರೇಷನ್ ಉಸ್ತುವಾರಿಯಾಗಿ ಪಕ್ಷ ಕೊಟ್ಟ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಿದ್ದೇನೆ. 1989ರಲ್ಲಿ ಪಕ್ಷ ಚಿತ್ರದುರ್ಗ ಕ್ಷೇತ್ರಕ್ಕೆ ಟಿಕೆಟ್ ನೀಡಿತ್ತು. ಅಂದು ಹತ್ತು ನಿಮಿಷ ತಡವಾಗಿದ್ದರಿಂದ ಪಕ್ಷದ ಚಿಹ್ನೆ ಸಿಗಲಿಲ್ಲ. ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಅಲ್ಪ ಮತಗಳಿಂದ ಸೋಲಾಯಿತು. ಹೀಗೆ ಸೇವಾ ಹಿರಿತನ ಅನುಭವ ಹಾಗೂ ಸ್ಥಳೀಯ ಎಲ್ಲವನ್ನೂ ಪರಿಗಣಿಸಿ ನನಗೆ ಟಿಕೆಟ್ ನೀಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಕ್ಷೇತ್ರದ ಅಭ್ಯರ್ಥಿಗೆ ಅವಕಾಶ ನೀಡಿದಾಗ ಮಾತ್ರ ಕ್ಷೇತ್ರ ಅಭಿವೃದ್ಧಿ ಹೊಂದಲು ಸಾಧ್ಯ, ಇಲ್ಲಿನ ಜ್ವಲಂತ ಸಮಸ್ಯೆಗಳಾದ ಕುಡಿಯುವ ನೀರು, ಶುಗರ್ ಫ್ಯಾಕ್ಟರಿ ಆರಂಭ, ಉದ್ಯೋಗ, ಶಿಕ್ಷಣ , ಆರೋಗ್ಯ, ನೀರಾವರಿ ಸೌಲಭ್ಯ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನು ಪರಿಹರಿಸಲು ಸ್ಥಳೀಯರಿಗೆ ಅವಕಾಶ ಸಿಗಬೇಕು. ಪಕ್ಷವನ್ನು ತಳ ಮಟ್ಟದಿಂದ ಬಲಪಡಿಸುವ ನಿಟ್ಟಿನಲ್ಲಿ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿ, ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು, ಎಲ್ಲ ಸಮುದಾಯಗಳ ಜನತೆಯೊಂದಿಗೆ ಬೆರೆತು ಆಶೀರ್ವಾದ ನೀಡಬೇಕೆಂದು ಮತದಾರರಲ್ಲಿ ಮನವಿ ಮಾಡುತ್ತಿದ್ದೇನೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬಿ.ಹೆಚ್. ಮಂಜುನಾಥ್, ಕೃಷಿಕ ಸಮಾಜದ ನಿರ್ದೇಶಕ ಹೆಚ್.ಆರ್. ತಿಮ್ಮಯ್ಯ, ಪದ್ಮನಾಭ, ಸುಬ್ರಮಣಿ, ಸಾದತ್ ಉಲ್ಲಾ, ಕಲಾವತಿ, ಕೃಷ್ಣಯ್ಯ, ರಫೀಕ್, ಓಬಳೇಶ್, ಹುಚ್ಚವ್ವನಹಳ್ಳಿ ಪ್ರಕಾಶ್, ಧ್ರುವ ಕುಮಾರ್, ದಾದಾಪೀರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











