ಬೆಂಗಳೂರು.ಜುಲೈ.03: ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬಿಎಲ್ ಒಗಳ (ಬೂತ್ ಮಟ್ಟದ ಅಧಿಕಾರಿಗಳು) ಬೇಜವಾಬ್ದಾರಿತನದ ವಿರುದ್ಧ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ (ಸಿಇಒ) ವಿ. ಅನ್ಬುಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣೆಯ ನಿಯಮಾವಳಿಗಳನ್ನು ಗಾಳಿಗೆ ತೂರಿ, ಬಿಎಲ್ ಒಗಳು ಮನೆ ಮನೆಗೆ ಹೋಗುವ ಬದಲು ತಮ್ಮ ಕಚೇರಿ ಅಥವಾ ಇತರೆಡೆಗಳಲ್ಲೇ ಕುಳಿತು ಫಾರಂಗಳನ್ನು ವಿತರಿಸುತ್ತಿದ್ದಾರೆ ಎಂಬ ಗಂಭೀರ ದೂರುಗಳು ಚುನಾವಣಾ ಆಯೋಗಕ್ಕೆ ಬಂದಿದ್ದವು. ಈ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಮುಖ್ಯ ಚುನಾವಣಾಧಿಕಾರಿಗಳು, ರಾಜ್ಯದ ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು, ಜಿಲ್ಲಾಧಿಕಾರಿಗಳು (ಡಿಸಿ) ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಅಧಿಕೃತ ಸುತ್ತೋಲೆ ಕಳುಹಿಸಿ, ಭಾರತೀಯ ಚುನಾವಣಾ ಆಯೋಗದ (ಇಸಿಐ) ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಕಠಿಣ ನಿರ್ದೇಶನ ನೀಡಿದ್ದಾರೆ.
ಕಳೆದ ಜೂನ್ 30 ರಿಂದಲೇ ರಾಜ್ಯಾದ್ಯಂತ ಮತದಾರರಿಗೆ ಎನ್ಯೂಮರೇಶನ್ ಫಾರಂಗಳನ್ನು ವಿತರಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ನಿಯಮಗಳ ಪ್ರಕಾರ ಪ್ರತಿಯೊಬ್ಬ ಅಧಿಕಾರಿಯೂ ಸಾರ್ವಜನಿಕರ ಮನೆ ಬಾಗಿಲಿಗೆ ತೆರಳಿ ಈ ಪ್ರಕ್ರಿಯೆ ನಡೆಸಬೇಕಿರುತ್ತದೆ. ಆದರೆ ಕ್ಷೇತ್ರಕ್ಕೆ ಇಳಿಯದೇ ಕಚೇರಿಯಲ್ಲೇ ಕಾಲಹರಣ ಮಾಡುತ್ತಿರುವ ದೂರುಗಳು ವ್ಯಾಪಕವಾಗಿ ಕೇಳಿಬಂದ ಕಾರಣ,”ಇನ್ನು ಮುಂದೆ ಬಿಎಲ್ಒಗಳು ಕಡ್ಡಾಯವಾಗಿ ಪ್ರತಿಯೊಬ್ಬ ಮತದಾರನ ಮನೆಗೆ ಖುದ್ದಾಗಿ ಭೇಟಿ ನೀಡಿ ಫಾರಂ ವಿತರಿಸಬೇಕು. ವಿಶೇಷ ತೀವ್ರ ಪರಿಷ್ಕರಣೆಯ ಯಾವುದೇ ಹಂತದಲ್ಲೂ ನಿರ್ಲಕ್ಷ್ಯ ವಹಿಸದೆ ಇಸಿಐ ನಿಯಮಗಳನ್ನು ಪಾಲಿಸಬೇಕು” ಎಂದು ಸಿಇಒ ವಿ. ಅನ್ಬುಕುಮಾರ್ ಕಟು ಶಬ್ದಗಳಲ್ಲಿ ಆದೇಶಿಸಿದ್ದಾರೆ.

ಇದೇ ವೇಳೆ, ಫಾರಂ ಭರ್ತಿ ಮಾಡಲು ತೊಂದರೆ ಅನುಭವಿಸುವ ನಾಗರಿಕರಿಗಾಗಿ ‘ಮತದಾರರ ಸಹಾಯ ಕೇಂದ್ರಗಳು’ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರು ಇವುಗಳ ಪ್ರಯೋಜನ ಪಡೆದುಕೊಳ್ಳಬಹುದು ಎಂದು ತಿಳಿಸಲಾಗಿದೆ. ಈ ಕೇಂದ್ರಗಳ ಕುರಿತು ಜನಸಾಮಾನ್ಯರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.




















