ದಾವಣಗೆರೆ.ಜುಲೈ.04: ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಭೂಮಿ ಅಳತೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ಸರ್ವೆ ಇಲಾಖೆಯ ಇಬ್ಬರು ನೌಕರರನ್ನು ರೆಡ್ಹ್ಯಾಂಡ್ ಆಗಿ ವಶಕ್ಕೆ ಪಡೆದಿರುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದಿದೆ.
ಸರ್ವೆ ಸೂಪರ್ ವೈಸರ್ ರಾಮಪ್ಪ ಅಡಿವೆಪ್ಪ ದಾಸರ್ ಹಾಗೂ ಸರ್ಕಾರಿ ಪರವಾನಗಿ ಭೂಮಾಪಕರಾದ ಆನಂದಪ್ಪ ನಾಯ್ಕ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ. ತಮ್ಮ ಜಮೀನಿನ ಅಳತೆ ಕಾರ್ಯ ಮಾಡಿಕೊಡುವಂತೆ ಕೋರಿ ರೈತ ರುದ್ರೇಶ್ ಎಂಬುವವರು ಸರ್ವೆ ಇಲಾಖೆಗೆ ಅರ್ಜಿ ಸಲ್ಲಿಸಿದ್ದರು. ಆದರೆ ಈ ಕೆಲಸ ಮಾಡಿಕೊಡಲು ಅಧಿಕಾರಿಗಳು 5 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ಕುರಿತು ಖಚಿತ ಮಾಹಿತಿ ಹಾಗೂ ದೂರಿನ ಮೇರೆಗೆ ಹರಿಹರದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಅಧಿಕಾರಿಗಳು, ರೈತನಿಂದ ₹5,000 ಹಣವನ್ನು ಸ್ವೀಕರಿಸುತ್ತಿದ್ದ ಕ್ಷಣದಲ್ಲೇ ದಾಳಿ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗಿದೆ.


















