ಸುದ್ದಿಒನ್, ಚಿತ್ರದುರ್ಗ, ಜುಲೈ. 12 : ಜಿಲ್ಲೆಯ ಹಿರಿಯ ರಾಜಕಾರಣಿ, ರಾಜ್ಯಸಭೆಯ ಮಾಜಿ ಸದಸ್ಯ ಹಾಗೂ ದಲಿತ ಮುಖಂಡ ಎಚ್. ಹನುಮಂತಪ್ಪ ಅವರ ನಿಧನಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತ ಹಾಗೂ ರಾಷ್ಟ್ರೀಯ ವಿಶ್ವಕರ್ಮ ವಂಶಿ ಸೇನೆಯ ಜಿಲ್ಲಾ ಅಧ್ಯಕ್ಷೆ ಅನಿತಾ ಲಕ್ಷ್ಮಿ ಆಚಾರ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ‘ಜನಸಾಮಾನ್ಯರ ಏಳಿಗೆಯನ್ನು ತಮ್ಮ ರಾಜಕೀಯ ಜೀವನದ ಧ್ಯೇಯವಾಗಿಸಿಕೊಂಡಿದ್ದ ಹನುಮಂತಪ್ಪ ಅವರು ಹಿಂದುಳಿದ ವರ್ಗಗಳು, ದಲಿತರು ಮತ್ತು ಶೋಷಿತರ ಪರವಾಗಿ ನಿರಂತರವಾಗಿ ಧ್ವನಿಯಾಗಿದ್ದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ರಾಜಕೀಯ ಹಾಗೂ ಸಾಮಾಜಿಕ ನ್ಯಾಯ ದೊರೆಯಬೇಕು ಎಂಬ ಬದ್ಧತೆಯೊಂದಿಗೆ ಸಾರ್ವಜನಿಕ ಜೀವನದಲ್ಲಿ ಕಾರ್ಯನಿರ್ವಹಿಸಿದ್ದರು’ ಎಂದು ತಿಳಿಸಿದ್ದಾರೆ.
‘ರಾಜ್ಯಸಭೆಯ ಸದಸ್ಯರಾಗಿದ್ದ ಅವಧಿಯಲ್ಲಿ ಬಡವರು ಹಾಗೂ ದುರ್ಬಲ ವರ್ಗಗಳ ಹಿತಾಸಕ್ತಿಗೆ ಸಂಬಂಧಿಸಿದ ಹಲವು ವಿಷಯಗಳನ್ನು ಪ್ರಸ್ತಾಪಿಸಿ, ಜನಪರ ನೀತಿಗಳಿಗೆ ಒತ್ತು ನೀಡಿದ್ದರು. ಅವರ ಅಗಲಿಕೆಯಿಂದ ಕೋಟೆನಾಡು ಅನುಭವಿ ಹಾಗೂ ಜನಪರ ನಾಯಕನನ್ನು ಕಳೆದುಕೊಂಡಿದೆ’ ಎಂದು ಹೇಳಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಅನಿತಾ ಲಕ್ಷ್ಮಿ ಆಚಾರ್ಯ ಪ್ರಾರ್ಥಿಸಿದ್ದಾರೆ.





