ಸುದ್ದಿಒನ್, ಚಿತ್ರದುರ್ಗ, ಜುಲೈ. 14 : ಚಿತ್ರದುರ್ಗ ನಗರದ ಸಮಗ್ರ ಅಭಿವೃದ್ಧಿ ಹಾಗೂ ಐತಿಹಾಸಿಕ ಪರಂಪರೆಯ ಸಂರಕ್ಷಣೆಗೆ ಸಂಬಂಧಿಸಿದ ನಾಲ್ಕು ಮಹತ್ವಾಕಾಂಕ್ಷಿ ಯೋಜನೆಗಳಿಗೆ ರಾಜ್ಯ ಸರ್ಕಾರ ವಿಶೇಷ ಅನುದಾನ ಮಂಜೂರು ಮಾಡಿ ಶೀಘ್ರ ಅನುಷ್ಠಾನಗೊಳಿಸಬೇಕೆಂದು ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಜುಲೈ 13 ರಂದು ಮುಖ್ಯಮಂತ್ರಿಗಳು ಚಿತ್ರದುರ್ಗಕ್ಕೆ ಆಗಮಿಸಿದ ವೇಳೆ ಚಿತ್ರದುರ್ಗ ಅಭಿವೃದ್ಧಿ ಹೇಗೆ ಸಂಬಂಧಿಸಿದ ಅನುದಾನ ಬಿಡುಗಡೆ ಮಾಡುವಂತೆ ಮನವಿ ಪತ್ರವನ್ನು ಸಲ್ಲಿಸಿದರು, ಚಿತ್ರದುರ್ಗ ನಗರದ ಪ್ರಮುಖ ರಸ್ತೆಗಳನ್ನು ಅಗಲೀಕರಿಸಲು ವಿಶೇಷ ಅನುದಾನ ನೀಡುವಂತೆ ಕೋರಲಾಗಿದೆ. ನಗರದಲ್ಲಿ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಿರಿದಾದ ರಸ್ತೆಗಳ ಕಾರಣದಿಂದ ತೀವ್ರ ಸಂಚಾರ ದಟ್ಟಣೆ, ಅಪಘಾತಗಳ ಸಂಖ್ಯೆ ಹೆಚ್ಚಳ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ರಸ್ತೆ ಅಗಲೀಕರಣದಿಂದ ಸಂಚಾರ ವ್ಯವಸ್ಥೆ ಸುಧಾರಿಸುವುದರ ಜೊತೆಗೆ ಪ್ರವಾಸೋದ್ಯಮ, ವ್ಯಾಪಾರ-ವಹಿವಾಟು ಹಾಗೂ ನಗರದ ಅಭಿವೃದ್ಧಿಗೆ ಹೊಸ ವೇಗ ದೊರೆಯಲಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಅಲ್ಲದೆ, ಆಗಸ್ಟ್ ಅಧಿವೇಶನದಲ್ಲಿಯೇ ಈ ಯೋಜನೆಗೆ ಅನುಮೋದನೆ ಹಾಗೂ ಅನುದಾನ ಘೋಷಣೆ ಮಾಡುವಂತೆ ಮನವಿಯಲ್ಲಿ ತಿಳಿಸಲಾಗಿದೆ.
ಚಿತ್ರದುರ್ಗದ ಐತಿಹಾಸಿಕ ದುರ್ಗೋತ್ಸವವನ್ನು ಸರ್ಕಾರದ ವತಿಯಿಂದ ಮರುಆರಂಭಿಸಿ ರಾಜ್ಯಮಟ್ಟದ ಉತ್ಸವವಾಗಿ ಆಚರಿಸಲು 25 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ಮನವಿ ಮಾಡಲಾಗಿದೆ. 2006 ಹಾಗೂ 2015ರಲ್ಲಿ ವಿಜೃಂಭಣೆಯಿಂದ ನಡೆದ ದುರ್ಗೋತ್ಸವ ಕಳೆದ ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದು, ಅದರ ಪುನರಾರಂಭದಿಂದ ಜಿಲ್ಲೆಯ ಇತಿಹಾಸ, ಸಂಸ್ಕೃತಿ, ಕಲೆ ಹಾಗೂ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ಸಿಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಲಾಗಿದೆ.
ವಿಶ್ವವಿಖ್ಯಾತ ಚಿತ್ರದುರ್ಗ ಕೋಟೆ ಹಾಗೂ ಚಂದ್ರವಳ್ಳಿ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಚಿತ್ರದುರ್ಗ ಕೋಟೆ ಮತ್ತು ಚಂದ್ರವಳ್ಳಿ ಅಭಿವೃದ್ಧಿ ಪ್ರಾಧಿಕಾರವನ್ನು ಸ್ಥಾಪಿಸುವಂತೆ ಕೋರಲಾಗಿದೆ. ರಾಜ್ಯದಲ್ಲಿ ಹಂಪಿ, ಚಾಮುಂಡಿಬೆಟ್ಟ, ಲಕ್ಕುಂಡಿ ಸೇರಿದಂತೆ ಹಲವು ಐತಿಹಾಸಿಕ ತಾಣಗಳಿಗೆ ಪ್ರಾಧಿಕಾರಗಳನ್ನು ರಚಿಸಿರುವ ಮಾದರಿಯಲ್ಲಿ ಚಿತ್ರದುರ್ಗಕ್ಕೂ ಪ್ರಾಧಿಕಾರ ರಚಿಸಿದರೆ ಪಾರಂಪರಿಕ ತಾಣಗಳ ಸಂರಕ್ಷಣೆ, ಮೂಲಸೌಕರ್ಯ ಅಭಿವೃದ್ಧಿ, ಪ್ರವಾಸೋದ್ಯಮ ಉತ್ತೇಜನ, ಉದ್ಯೋಗ ಸೃಷ್ಟಿ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಜಿಲ್ಲೆಯ ಪ್ರಚಾರಕ್ಕೆ ಹೆಚ್ಚಿನ ಅವಕಾಶ ದೊರೆಯಲಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಚಿತ್ರದುರ್ಗ ನೂತನ ಹೈಟೆಕ್ ಬಸ್ ನಿಲ್ದಾಣ ಕಾಮಗಾರಿಗೆ 47.50 ಕೋಟಿ ವೆಚ್ಚದ ಅಗತ್ಯ ಅನುದಾನ ಮಂಜೂರು ಮಾಡಿ ಆಡಳಿತಾತ್ಮಕ ಅನುಮೋದನೆ ನೀಡುವಂತೆ ಮನವಿ ಮಾಡಲಾಗಿದೆ. 2023ರ ಮಾರ್ಚ್ 24ರಂದು ಭೂಮಿಪೂಜೆ ನೆರವೇರಿದ್ದರೂ, ಕಳೆದ ಮೂರು ವರ್ಷಗಳಿಂದ ಅನುದಾನದ ಕೊರತೆಯಿಂದ ಕಾಮಗಾರಿ ಆರಂಭವಾಗದೆ ನೆನೆಗುದಿಗೆ ಬಿದ್ದಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿಯೇ ಅಗತ್ಯ ಅನುದಾನ ಬಿಡುಗಡೆ ಮಾಡಿ ಕಾಮಗಾರಿಗೆ ಚಾಲನೆ ನೀಡುವಂತೆ ಕೋರಲಾಗಿದೆ.
ಈ ನಾಲ್ಕು ಯೋಜನೆಗಳು ಜಾರಿಯಾದಲ್ಲಿ ಚಿತ್ರದುರ್ಗ ನಗರದ ಸಂಚಾರ ವ್ಯವಸ್ಥೆ ಸುಧಾರಿಸುವುದರ ಜೊತೆಗೆ ಐತಿಹಾಸಿಕ ಪರಂಪರೆಯ ಸಂರಕ್ಷಣೆ, ಪ್ರವಾಸೋದ್ಯಮ ವೃದ್ಧಿ, ಉದ್ಯೋಗ ಸೃಷ್ಟಿ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಲಿವೆ ಎಂದು ಮುಖ್ಯಮಂತ್ರಿಗಳಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ಅವರು ಮನವರಿಕೆ ಮಾಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








