ಬೆಂಗಳೂರು.ಜುಲೈ.22: ರಾಜ್ಯದಲ್ಲಿ ಪಡಿತರ ಧಾನ್ಯ ವಿತರಣೆಯಲ್ಲಿ ಎದುರಾಗುತ್ತಿರುವ ವಿಳಂಬವನ್ನು ತಡೆಗಟ್ಟಲು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಮಹತ್ವದ ಕ್ರಮ ಕೈಗೊಂಡಿದೆ. ಜುಲೈ ತಿಂಗಳ ಅನ್ನಭಾಗ್ಯ ಹಾಗೂ ಎನ್ಎಫ್ಎಸ್ಎ (NFSA) ಪಡಿತರ ಧಾನ್ಯಗಳನ್ನು ಸಾರ್ವಜನಿಕರಿಗೆ ಯಾವುದೇ ಅಡಚಣೆಯಿಲ್ಲದೆ ತಲುಪಿಸಲು ಪ್ರತಿದಿನ ಬೆಳಿಗ್ಗೆ 6-00 ಗಂಟೆಯಿಂದ ರಾತ್ರಿ 10-00 ಗಂಟೆಯವರೆಗೆ ನ್ಯಾಯಬೆಲೆ ಅಂಗಡಿಗಳನ್ನು ತೆರೆದಿಟ್ಟು ವಿತರಿಸಬೇಕು ಎಂದು ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಂಟಿ ಮತ್ತು ಉಪ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ನ್ಯಾಯಬೆಲೆ ಅಂಗಡಿಯವರು ಸಗಟು ಮಳಿಗೆಗಳಿಂದ ಪೂರ್ಣ ಪ್ರಮಾಣದ ಆಹಾರಧಾನ್ಯಗಳನ್ನು ಎತ್ತುವಳಿ ಮಾಡಿಕೊಂಡಿದ್ದರೂ, ತಕ್ಷಣವೇ ಸಾರ್ವಜನಿಕರಿಗೆ ವಿತರಿಸದೆ ವಿಳಂಬ ಮಾಡುತ್ತಿರುವುದು ಮತ್ತು ಎಲ್ಲಾ ದಾಸ್ತಾನು ಬಂದ ನಂತರವೇ ವಿತರಣೆ ಆರಂಭಿಸುತ್ತಿರುವುದು ಇಲಾಖೆಯ ಗಮನಕ್ಕೆ ಬಂದಿದೆ. ಈ ರೀತಿ ವಿಳಂಬ ಧೋರಣೆ ಅನುಸರಿಸುವುದನ್ನು ತಕ್ಷಣವೇ ತಡೆದು, ಗೋದಾಮಿನಿಂದ ದಾಸ್ತಾನು ಲಭ್ಯವಾದ ಕೂಡಲೇ ತಕ್ಷಣದಿಂದಲೇ ಪಡಿತರ ಹಂಚಿಕೆ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು ಎಂದು ಸುತ್ತೋಲೆಯಲ್ಲಿ ಕಟ್ಟುನಿಟ್ಟಾಗಿ ತಿಳಿಸಲಾಗಿದೆ.
ಜುಲೈ 2026 ರ ಮಾಹೆಯ ಅಂತ್ಯದೊಳಗಾಗಿ ಎಲ್ಲಾ ಅರ್ಹ ಪಡಿತರ ಚೀಟಿದಾರರಿಗೆ ಸಂಪೂರ್ಣವಾಗಿ ಪಡಿತರ ತಲುಪಿಸಬೇಕಾಗಿರುವುದರಿಂದ, ಕಡ್ಡಾಯವಾಗಿ ನಿಗದಿಪಡಿಸಿದ ಅವಧಿಯಲ್ಲಿ ಅಂಗಡಿಗಳನ್ನು ತೆರೆದಿಡಬೇಕಾಗಿದೆ. ಈ ಕಾರ್ಯನಿರ್ವಹಣಾ ಸಮಯವನ್ನು ನಿಯಮಿತವಾಗಿ ಪರಿಶೀಲಿಸಲು ಮತ್ತು ಮೇಲ್ವಿಚಾರಣೆ ನಡೆಸಲು ಆಹಾರ ನಿರೀಕ್ಷಕರಿಗೆ ನಿರ್ದೇಶಿಸಲಾಗಿದೆ. ಸಾರ್ವಜನಿಕರಿಂದ ಯಾವುದೇ ದೂರುಗಳು ಬರದಂತೆ ಪಡಿತರ ಹಂಚಿಕೆ ಮಾಡಬೇಕು ಹಾಗೂ ಸೂಚನೆಗಳನ್ನು ಉಲ್ಲಂಘಿಸುವ ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ಧ ನಿಯಮಾನುಸಾರ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಯುಕ್ತರು ಎಚ್ಚರಿಸಿದ್ದಾರೆ.


ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









