ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜುಲೈ . 22 : ಕರ್ನಾಟಕದ ಎಲ್ಲಾ ಸಂಸದರುಗಳ ನಿರ್ಲಕ್ಷೆಯಿಂದ ಅಪ್ಪರ್ಭದ್ರಾ ಯೋಜನೆ ಜಾರಿಯಾಗುವಲ್ಲಿ ತಡವಾಗುತ್ತಿದೆ ಎಂದು ಸರ್ವೋದಯ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ಆಪಾದಿಸಿದರು.
ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಈಗಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಲಸಂಪನ್ಮೂಲ ಸಚಿವರಾಗಿದ್ದಾಗ ಎತ್ತಿನಹೊಳೆ ಯೋಜನೆಗೆ 16700 ಕೋಟಿ ರೂ.ಗಳನ್ನು ಕೊಟ್ಟಿದ್ದಾರೆ. ಭದ್ರಾಮೇಲ್ದಂಡೆ ಯೋಜನೆಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ತಾರತಮ್ಯವೆಸಗಿರುವುದು ಯಾವ ನ್ಯಾಯ?
ಅನುದಾನ ಬಿಡುಗಡೆಯಾಗಿದ್ದರೆ ಇಷ್ಟೊತ್ತಿಗೆ ಹಿರಿಯೂರಿನ ವಾಣಿವಿಲಾಸಸಾಗರಕ್ಕೆ 60 ರಿಂದ 70 ಟಿಎಂಸಿ. ನೀರು ಹರಿಯುತ್ತಿತ್ತು. ಕೇಂದ್ರ ಸರ್ಕಾರ ಯೋಜನೆಗೆ 5300 ಕೋಟಿ ರೂ.ಗಳನ್ನು ಘೋಷಿಸಿ ನಾಲ್ಕು ವರ್ಷಗಳಾಗಿದೆ. ಯೋಜನೆಗೆ ತಾತ್ವಿಕ ಅನುಮೋದನೆ ನೀಡುವುದರ ಜೊತೆಗೆ ವಿವಿಧ ಇಲಾಖೆಗಳಿಂದ ನಿರಪೇಕ್ಷಣಾ ಪತ್ರ ಕೊಡಿಸುವುದು ಮುಖ್ಯ ಎಂದು ಒತ್ತಾಯಿಸಿದರು.
ಎಷ್ಟು ಮರಗಳನ್ನು ಕಡಿಯುತ್ತಾರೋ ಅಷ್ಟು ಮರಗಳನ್ನು ಬೆಳೆಸಲು ಅರಣ್ಯ ಮತ್ತು ಪರಿಸರ ಇಲಾಖೆಗೆ ಸರ್ಕಾರ ಹಣ ನೀಡಬೇಕು. 47 ಲಕ್ಷ ಕೋಟಿ ರೂ.ಬಜೆಟ್ ಮಂಡಿಸುವ ಕೇಂದ್ರ ಸರ್ಕಾರ ತಕ್ಷಣವೇ ಮೂರು ಸಾವಿರ ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಿಸಿ ಐದು ಸಾವಿರದ ಮುನ್ನೂರು ಕೋಟಿ ರೂ.ಗಳನ್ನು ಬಿಡುಗಡೆಗೊಳಿಸಬೇಕು. ರಾಜ್ಯದ ಸಂಸದರುಗಳು ಸುಳ್ಳು ಹೇಳುವುದನ್ನು ಬಿಟ್ಟು ಭದ್ರಾಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಪೂರ್ಣಗೊಳಿಸಿ ಜಿಲ್ಲೆಗೆ ನೀರು ಹರಿಸುವ ಜವಾಬ್ದಾರಿ ಹೊರಬೇಕೆಂದು ಮನವಿ ಮಾಡಿದರು.
ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಕಾಂ.ಜಿ.ಸಿ.ಸುರೇಶ್ಬಾಬು ಮಾತನಾಡಿ ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರು ಜು.25 ರಂದು ಚಿತ್ರದುರ್ಗಕ್ಕೆ ಆಗಮಿಸುವ ಮೊದಲು ಜಿಲ್ಲೆಗೆ ಯಾವಾಗ ನೀರು ಹರಿಸುತ್ತೇವೆನ್ನುವುದನ್ನು ಸ್ಪಷ್ಟಪಡಿಸಬೇಕು. ಜಿಲ್ಲೆ ಈಗಾಗಲೆ ಬರಗಾಲಕ್ಕೆ ತುತ್ತಾಗಿದ್ದು, ಜನ ಕೆಲಸ ಹುಡುಕಿಕೊಂಡು ಗುಳೆ ಹೋಗುತ್ತಿದ್ದಾರೆ. ಕೂಡಲೆ ವಿಶೇಷ ಪ್ಯಾಕೇಜ್ ನೀಡಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಆಗ್ರಹಿಸಿದರು.
ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಧನಂಜಯ ಹಂಪಯ್ಯನಮಾಳಿಗೆ ಮಾತನಾಡುತ್ತ ಕೇಂದ್ರ ರಾಜ್ಯ ಸರ್ಕಾರಗಳು ಒಬ್ಬರ ಮೇಲೊಬ್ಬರು ಹೇಳಿಕೊಂಡು ಕಾಲಹರಣ ಮಾಡಬಾರದು. ರೈತರ ತೋಟಗಳು ಒಣಗುತ್ತಿವೆ. ಜಾನುವಾರುಗಳಿಗೆ ಮೇವು, ನೀರಿಲ್ಲದಂತಾಗಿದೆ. ಬಡ ಜನರು ಗುಳೆ ಹೋಗುತ್ತಿದ್ದಾರೆ. ಬೆಳೆ ನಷ್ಟಕ್ಕೊಳಗಾಗಿರುವ ರೈತರಿಗೆ ಪರಿಹಾರ ಘೋಷಿಸಿ ಮೋಡ ಬಿತ್ತನೆ ಮಾಡಬೇಕೆಂದರು.
ಎಪಿಎಂಸಿ. ಹಮಾಲರ ಸಂಘದ ಅಧ್ಯಕ್ಷ ಬಸವರಾಜ್ ಮಾತನಾಡಿ ಭದ್ರಾ ಮೇಲ್ದಂಡೆ ಯೋಜನೆ ರಾಜಕಾರಣಿಗಳ ಪೊಳ್ಳು ಆಶ್ವಾಸನೆಯಿಂದ ಬರಿ ಕನಸಾಗಿ ಉಳಿದಿದೆ. ದಿನನಿತ್ಯದ ಆಹಾರ ಪದಾರ್ಥಗಳ ಬೆಲೆ ಏರಿಕೆಯಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ರವರು ಜು.25 ರಂದು ಚಿತ್ರದುರ್ಗದಲ್ಲಿ ವಿಭಾಗ ಮಟ್ಟದ ಸಭೆಗೆ ಆಗಮಿಸುತ್ತಿದ್ದು, ಜಿಲ್ಲೆಗೆ ನೀರು ಯಾವಾಗ ಹರಿಸುತ್ತೇವೆನ್ನುವುದನ್ನು ಹೇಳಬೇಕೆಂದು ಒತ್ತಾಯಿಸಿದರು.
ರೈತ ಮುಖಂಡ ಬಸ್ತಿಹಳ್ಳಿ ಜಿ.ಸುರೇಶ್ಬಾಬು ಮಾತನಾಡುತ್ತ ಚಿತ್ರದುರ್ಗ ಮತ್ತು ತುಮಕೂರು ಸಂಸದರುಗಳು ಆದಷ್ಟು ಬೇಗನೆ ಜಿಲ್ಲೆಗೆ ನೀರು ಹರಿಯಲಿದೆ ಎಂದು ಭರವಸೆ ನೀಡಿದರೆ ವಿನಃ ಕಾಮಗಾರಿ ಪೂರ್ಣಗೊಂಡು ನೀರು ಹರಿಯುವುದು ಯಾವಾಗ ಎನ್ನುವ ಅನುಮಾನ ಜಿಲ್ಲೆಯ ರೈತರನ್ನು ಕಾಡುತ್ತಿದೆ. ಸಂಕಷ್ಟದಲ್ಲಿರುವ ರೈತರಿಗೆ ಬೆಳೆ ವಿಮೆ ಪಾವತಿಸಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಜವಾಬ್ದಾರಿಯನ್ನರಿತು ಜಿಲ್ಲೆಯ ಅಭಿವೃದ್ದಿಗೆ ಕೈಜೋಡಿಸಬೇಕೆಂದು ವಿನಂತಿಸಿದರು.
ರೈತ ಮಲ್ಲಾಪುರದ ತಿಪ್ಪೇಸ್ವಾಮಿ ಮಾತನಾಡಿ ಸಕಲ ಜೀವರಾಶಿಗಳಿಗೂ ನೀರು ಸಿಗಬೇಕೆಂಬ ದೂರದೃಷ್ಟಿಯಿಂದ ಪಾಳೆಯಗಾರರು ಚಿತ್ರದುರ್ಗದಲ್ಲಿ ಅನೇಕ ಹೊಂಡ ಕೆರಗಳನ್ನು ನಿರ್ಮಿಸಿದ್ದಾರೆ. ಅದೇ ರೀತಿ ಮೈಸೂರು ಮಹಾರಾಜರು ಡ್ಯಾಂಗಳನ್ನು ಕಟ್ಟಿಸಿದ್ದಾರೆ. ಈಗಿನ ಆಳುವ ಪಕ್ಷಗಳಿಗೆ ಇಂತಹ ಕಾಳಜಿಯೇಕಿಲ್ಲ ಎಂದು ಪ್ರಶ್ನಿಸಿದರು? ಬರಗಾಲಕ್ಕೆ ತುತ್ತಾಗಿರುವ ಚಿತ್ರದುರ್ಗ ಜಿಲ್ಲೆಗೆ ಮೊದಲು ಭದ್ರಾ ಮೇಲ್ದಂಡೆ ಯೋಜನೆಯಿಂದ ನೀರು ಹರಿಸಬೇಕೆಂದರು.
ರೈತ ಮಹಿಳೆ ಲಕ್ಷ್ಮಿ, ಕಾಂ.ಈ.ಸತ್ಯಕೀರ್ತಿ ಇವರುಗಳು ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












