ಸುದ್ದಿಒನ್, ಚಿತ್ರದುರ್ಗ, ಜುಲೈ. 25 : ಜೋಗಿ ಸಮುದಾಯಕ್ಕೆ ಸರ್ಕಾರ ಮತ್ತು ಜಿಲ್ಲಾಡಳಿತದಿಂದ ಮಂಜೂರಾದ ಜಮೀನಿನಲ್ಲಿ ಸಮುದಾಯ ಭವನವನ್ನು ನಿರ್ಮಿಸಲು 02 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಬೇಕೆಂದು
ಚಿತ್ರದುರ್ಗ ಜಿಲ್ಲಾ ಜೋಗಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಕಾರ್ಯದರ್ಶಿ ಪ್ರತಾಪ್ ಜೋಗಿ ಮುಖ್ಯಮಂತ್ರಿ
ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದ್ದಾರೆ.

ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪ ಸಭಾಂಗಣದಲ್ಲಿ ಬೆಂಗಳೂರು ಪ್ರಾದೇಶಿಕ ವಿಭಾಗ ಮಟ್ಟದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಗೆ ಆಗಮಿಸಿದಾಗ ಜೋಗಿ ಸಮುದಾಯದ ಮುಖಂಡರು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಜೋಗಿ ಸಮುದಾಯವು ಅತ್ಯಂತ ಹಿಂದುಳಿದ ಸಮುದಾಯವಾಗಿದ್ದು, ಈ ಸಮುದಾಯದಲ್ಲಿ ಕೆಲವು ಭಾಗಗಳಲ್ಲಿ ವ್ಯವಸಾಯ, ಕೂಲಿ ಇನ್ನು ಕೆಲವು ಭಾಗಗಳಲ್ಲಿ ಭಿಕ್ಷಾಟನೆ ಮತ್ತು ಡಬ್ಬ, ಬೀಗ ರಿಪೇರಿ ಹಾಗೂ ಕಿನ್ನರಿಯನ್ನು ಭರಿಸುತ್ತಾ ಜೀವನ ಸಾಗಿಸುತ್ತಿದ್ದು, ಶೈಕ್ಷಣಿಕವಾಗಿ ಈ ಸಮುದಾಯವು ಬಹಳ ಹಿಂದುಳಿದಿದ್ದು, ಇಡೀ ರಾಜ್ಯದಲ್ಲಿ ನಮ್ಮ ಸಮುದಾಯಕ್ಕೆ ಎಲ್ಲಿಯೂ ಸಹ ಸಮುದಾಯ ಭವನಗಳು ಶಿಕ್ಷಣ ಕೇಂದ್ರಗಳು ಇಲ್ಲದೇ ಇರುವುದರಿಂದ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಸಾಮಾಜಿಕವಾಗಿ ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದ ಸಮುದಾಯವಾಗಿರುತ್ತದೆ.
ಆದ್ದರಿಂದ ಸರ್ಕಾರವು ಜೋಗಿ ಸಮುದಾಯವನ್ನು ಹಿಂದುಳಿದ ಸಮುದಾಯ, ಅಲೆಮಾರಿ & ಅರೆಅಲೆಮಾರಿ ಸಮುದಾಯ ಎಂಬುದಾಗಿ ಪರಿಗಣಿಸಿ ಪ್ರವರ್ಗ-1ಕ್ಕೆ ಸೇರಿಸಿರುತ್ತದೆ. ಜೋಗಿ ಸಮುದಾಯವು ಆರ್ಥಿಕವಾಗಿ ದುರ್ಬಲರಾಗಿರುವ ಕಾರಣ ಸರ್ಕಾರ ಮತ್ತು ಜಿಲ್ಲಾಡಳಿತವು ಈ ಮೇಲಿನ ಅಂಶಗಳನ್ನು ಪರಿಗಣಿಸಿ ಚಿತ್ರದುರ್ಗ ತಾಲ್ಲೂಕು, ಹಿರೇಗುಂಟನೂರು ಹೋಬಳಿ, ಚಿಕ್ಕಪುರ ಗ್ರಾಮದಲ್ಲಿ ರಿ.ಸ.ನಂ. 101 ರಲ್ಲಿ ಸಂಘಕ್ಕೆ ಷರತ್ತಿನ ಆಧಾರದ ಮೇಲೆ ಸರ್ಕಾರಕ್ಕೆ ಶುಲ್ಕವನ್ನು ಪಾವತಿಸಿಕೊಂಡು 4 ಎಕರೆ 12 ಗುಂಟೆ ಜಮೀನು ಮಂಜೂರಾತಿ ಮಾಡಿರುತ್ತದೆ. ಸರ್ಕಾರಕ್ಕೆ ಮತ್ತು ಜಿಲ್ಲಾಡಳಿತಕ್ಕೆ ಸ್ವಾಗತರ್ಹ. ಈ ಸಮುದಾಯದ ಶ್ರೇಯೋಭಿವೃದ್ಧಿಗಾಗಿ ಸಮುದಾಯ ಭವನ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸುಮಾರು 02 ಕೋಟಿ ಹಣವನ್ನು ಮಂಜೂರು ಮಾಡಬೇಕೆಂದು ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ರವರಲ್ಲಿ ಜೋಗಿ ಸಮಾಜದಿಂದ ಮನವಿ ಮಾಡಿಕೊಳ್ಳಲಾಗಿದೆ.
ಚಳ್ಳಕೆರೆ ತಾಲ್ಲೂಕು ನಾಯಕನಹಟ್ಟಿ ಹೋಬಳಿ, ಎನ್.ದೇವರಹಳ್ಳಿ ಗ್ರಾಮದ ರಿ.ಸ.ನಂ.79/2 ರಲ್ಲಿ ಸುಮಾರು 100 ವರ್ಷಗಳಿಂದ ಟೆಂಟ್ ಹಾಕಿಕೊಂಡು ಜೀವನ ಸಾಗಿಸುತ್ತಿದ್ದೇವೆ. 78 ವರ್ಷಗಳಿಂದ ಯಾವುದೇ ರೀತಿಯಾದ ಸೌಲಭ್ಯಗಳಿಂದ ವಂಚಿತರಾಗಿದ್ದೇವೆ. ಈ ಸದರಿ ಜಮೀನಿಗೆ ಭೂ ಸ್ವಾಧೀನಪಡಿಸಿಕೊಂಡು ಡಿ.ಕೆ.ಶಿವಕುಮಾರ್ ನಗರವೆಂದು ನಿಮ್ಮ ಹೆಸರನ್ನು ನಾಮಕರಣ ಮಾಡಿ ನಮಗೆ ಹಕ್ಕುಪತ್ರಗಳನ್ನು ನೀಡಬೇಕೆಂದು ಮಾನ್ಯರಲ್ಲಿ ಮನವಿ ಮಾಡಲಾಯಿತು. ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸುತ್ತೇನೆಂದು ಆಶ್ವಾಸನೆ ನೀಡಿದರು. ಈ ಸಂದರ್ಭದಲ್ಲಿ ಪ್ರತಾಪ್ಜೋಗಿ, ಗುರುಮೂರ್ತಿ, ಸಿದ್ದಪ್ಪ, ಸಿದ್ದೇಶ್, ಮಲ್ಲೇಶ್, ತಿಪ್ಪೇಸ್ವಾಮಿ ಇತರರು ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.












