ಸುದ್ದಿಒನ್, ಚಿತ್ರದುರ್ಗ, ಜುಲೈ. 31 : ತಾಲ್ಲೂಕಿನ ದೊಡ್ಡಿಗನಾಳ್ ಗ್ರಾಮದ ಸಮೀಪದ ಜಮೀನಿನಲ್ಲಿ ಎರಡು ಚಿರತೆ ಮರಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಪರಿಸರ ಪ್ರೇಮಿಗಳು ಹಾಗೂ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
ಮೆಕ್ಕೆಜೋಳದ ಜಮೀನಿನಲ್ಲಿ ಕೀಟನಾಶಕ ಮಿಶ್ರಿತ ನೀರು ಕುಡಿದ ಪರಿಣಾಮವೇ ಈ ಸಾವು ಸಂಭವಿಸಿರಬಹುದು ಎಂದು ಅರಣ್ಯ ಇಲಾಖೆ ಪ್ರಾಥಮಿಕ ಹಂತದಲ್ಲಿ ಶಂಕೆ ವ್ಯಕ್ತಪಡಿಸಿದೆ.
ಗುರುವಾರ ರಾತ್ರಿ ನಡೆದ ಈ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ದೊಡ್ಡಿಗನಾಳ್ ಗ್ರಾಮದಿಂದ ಸುಮಾರು 2 ಕಿ.ಮೀ. ದೂರದಲ್ಲಿರುವ ಅರಣ್ಯ ಪ್ರದೇಶದಿಂದ ಗ್ರಾಮ ಮತ್ತು ಅರಣ್ಯದ ನಡುವೆ ಹರಿಯುವ ಹಳ್ಳಕ್ಕೆ ಚಿರತೆಗಳು ಆಗಾಗ ನೀರು ಕುಡಿಯಲು ಬರುತ್ತಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ.

ಸುತ್ತಮುತ್ತಲಿನ ಜಮೀನುಗಳಲ್ಲಿ ಮೆಕ್ಕೆಜೋಳ ಬೆಳೆ ಬೆಳೆದಿದ್ದು, ಕೀಟನಾಶಕ ಬಳಕೆ ಹೆಚ್ಚಿರುವ ಹಿನ್ನೆಲೆ ವಿಷಮಿಶ್ರಿತ ನೀರು ಅಥವಾ ಆಹಾರ ಸೇವನೆಯಿಂದ ಚಿರತೆ ಮರಿಗಳು ಮೃತಪಟ್ಟಿರಬಹುದೆಂಬ ಅನುಮಾನ ವ್ಯಕ್ತವಾಗಿದೆ. ಒಂದು ಚಿರತೆ ಮರಿ ಜಮೀನಿನಲ್ಲಿ ಸತ್ತ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಮತ್ತೊಂದು ಸಮೀಪದ ಮರದ ಕೊಂಬೆಗಳ ನಡುವೆ ಮೃತಪಟ್ಟಿರುವುದು ಕಂಡುಬಂದಿದೆ. ಎರಡೂ ಮರಿಗಳು ಸುಮಾರು ಒಂದು ವರ್ಷದ ಪ್ರಾಯದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಚಿರತೆ ಮರಿಗಳ ಸಾವಿನ ಸಂಬಂಧ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗುವುದು. ಮರಣೋತ್ತರ ಪರೀಕ್ಷೆ ನಡೆಸಿ, ನ್ಯಾಯಾಲಯದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ವರದಿ ಬಂದ ಬಳಿಕವೇ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಗೋಪ್ಯಾನಾಯ್ಕ ತಿಳಿಸಿದ್ದಾರೆ.
ಅರಣ್ಯ ಇಲಾಖೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿಸಿದೆ. ಚಿರತೆಗಳ ಸಾವಿನ ಘಟನೆ ವನ್ಯಜೀವಿ ಸಂರಕ್ಷಣೆಯ ಕುರಿತು ಮತ್ತೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.









