ಬೆಂಗಳೂರು.ಆಗಸ್ಟ್ 6 : ಉದ್ಯೋಗ ಖಾತ್ರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಯಾವುದೇ ರೀತಿಯ ನಿರ್ಲಕ್ಷ್ಯ ಸಹಿಸುವುದಿಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
ಇಂದು ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿ, ವಿಬಿಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ ಅರ್ಹರಿಗೆ ಉದ್ಯೋಗ ಕಲ್ಪಿಸುವುದು ಹಾಗೂ ಮಾನವ ದಿನಗಳ ಸೃಜನೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಕಳೆದ ವರ್ಷ ಇದೇ ಅವಧಿಯಲ್ಲಿ ಉದ್ಯೋಗ ನೀಡಿದ್ದ ಪಂಚಾಯಿತಿಗಳಲ್ಲಿ ಈ ಬಾರಿ ಉದ್ಯೋಗ ನೀಡದೇ ನಿರ್ಲಕ್ಷ್ಯ ತೋರಿರುವ ಪಿಡಿಓಗಳಿಗೆ ನೋಟಿಸ್ ಜಾರಿ ಮಾಡಿ, ನಿರ್ಲಕ್ಷ್ಯ ಸಾಬೀತಾದಲ್ಲಿ ಅಮಾನತು ಸೇರಿದಂತೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.


ಪ್ರತಿ ದಿನ ಕನಿಷ್ಠ 5 ಲಕ್ಷ ಮಾನವ ದಿನಗಳ ಸೃಜನೆಯ ಗುರಿ ಸಾಧಿಸುವವರೆಗೆ ಇಲಾಖೆಯ ಕಾರ್ಯದರ್ಶಿಗಳು, ಆಯುಕ್ತರು ಹಾಗೂ ಜಿಲ್ಲಾ ಪಂಚಾಯತ್ ಸಿಇಓಗಳು ನಿತ್ಯ ಪ್ರಗತಿ ಪರಿಶೀಲನೆ ನಡೆಸಬೇಕು. ಸಿಇಓಗಳು ಸಹ ಇಒ ಹಾಗೂ ಪಿಡಿಓಗಳೊಂದಿಗೆ ಪ್ರತಿದಿನ ಸಭೆ ನಡೆಸಿ ಯೋಜನೆಯ ಅನುಷ್ಠಾನವನ್ನು ವೇಗಗೊಳಿಸಬೇಕು ಎಂದು ಹೇಳಿದ್ದಾರೆ.
ಗ್ರಾಮೀಣ ಬಡ ಕುಟುಂಬಗಳಿಗೆ ಉದ್ಯೋಗದ ಹಕ್ಕು ತಲುಪಿಸುವುದು ನಮ್ಮ ಸರ್ಕಾರದ ಬದ್ಧತೆ. ಪ್ರತಿಯೊಬ್ಬ ಅರ್ಹ ಫಲಾನುಭವಿಗೂ ಕೆಲಸ ದೊರೆಯುವಂತೆ ಇಲಾಖೆ ಸಮರ್ಪಕವಾಗಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದ್ದಾರೆ.









