ಚಿತ್ರದುರ್ಗ.ಆ.10: ಸ್ಥಳೀಯ ಶಾಸಕರು ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿ ಅವಲೋಕಿಸಿದ್ದೇನೆ. ಇದರೊಂದಿಗೆ ತಾಲ್ಲೂಕು ಮಟ್ಟದಲ್ಲಿ ಸಭೆ ನಡೆಸಿ ಮಾಹಿತಿ ಪಡೆದು, ಪರಿಹಾರ ಕಾರ್ಯಗಳಿಗೆ ಸೂಚನೆ ನೀಡಿದ್ದೇನೆ. ಜಿಲ್ಲೆಯ ಬರ ಪರಿಸ್ಥಿತಿಯ ಸಂಪೂರ್ಣ ಚಿತ್ರಣ ದೊರೆತಿದ್ದು, ಮಂಗಳವಾರ ಮತ್ತೊಮ್ಮೆ ಜಿಲ್ಲಾ ಮಟ್ಟದಲ್ಲಿ ಸಭೆ ನಡೆಸಿ, ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸುವುದಾಗಿ ಪ್ರಕೃತಿ ವಿಕೋಪ ಪರಿಹಾರಗಳ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ತಿಳಿಸಿದರು.
ಸೋಮವಾರ ಚಿತ್ರದುರ್ಗ ತಾಲ್ಲೂಕಿನ ಬೆಳಗಟ್ಟ ಪಂಚಾಯತಿ ವ್ಯಾಪ್ತಿಯ ವೀರ ಮದಕರಿಪುರ ಹಾಗೂ ಗೋನೂರು ಗ್ರಾಮಗಳ ರೈತರ ಹೊಲಗಳಿಗೆ ಭೇಟಿ ನೀಡಿ ಬೆಳೆ ಹಾನಿ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದ ಉಂಟಾಗಿರುವ ಬೆಳೆ ನಷ್ಟ ಹಾಗೂ ಬರ ಪರಿಸ್ಥಿತಿಯ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಸಮಗ್ರ ವರದಿ ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು. ಮಂತ್ರಿಯಾಗಿ ನೇಮಕವಾದ ಕೂಡಲೇಆಗಸ್ಟ್ 5 ರಿಂದ ಹಿರಿಯೂರು ತಾಲ್ಲೂಕಿನ ಜವಗಂಡನಹಳ್ಳಿ ಹೋಬಳಿಯ ಆನೆಸಿದ್ರಿಯಿಂದ ಆರಂಭಿಸಿ, ಹಿರಿಯೂರು, ಚಳ್ಳಕೆರೆ, ಹೊಸದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು ಹಾಗೂ ಚಿತ್ರದುರ್ಗ ತಾಲ್ಲೂಕುಗಳ ವಿವಿಧ ಭಾಗಗಳಲ್ಲಿ ಜಮೀನು ಪರಿಶೀಲನೆ ನಡೆಸಲಾಗಿದೆ.

ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ಭೀಕರ ಅಭಾವ ಪರಿಸ್ಥಿತಿ ಎದುರಾಗಿದ್ದು, ಶೇ. 25 ಕ್ಕಿಂತಲೂ ಕಡಿಮೆ ಬಿತ್ತನೆಯಾಗಿದೆ. ಜಿಲ್ಲೆಯ ಒಟ್ಟು 3 ಲಕ್ಷ ರೈತರ ಪೈಕಿ ಕಳೆದೆರಡು ವರ್ಷಗಳಲ್ಲಿ ಕೇವಲ 88 ಸಾವಿರ ರೈತರು ಮಾತ್ರ ಬೆಳೆ ವಿಮೆ ಮಾಡಿಸಿದ್ದರು. ಆದರೆ ಈ ಬಾರಿ ಜಿಲ್ಲೆಯ ರೈತರಲ್ಲಿ ಜಾಗೃತಿ ಮೂಡಿದ್ದು, 2.50 ಲಕ್ಷಕ್ಕೂ ಹೆಚ್ಚು (ಶೇ. 80ಕ್ಕೂ ಹೆಚ್ಚು) ರೈತರು ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ. ಆಗಸ್ಟ್ 14ರ ವರೆಗೆ ರಾಗಿ ಬೆಳೆಗೆ ವಿಮೆ ಮಾಡಿಸಲು ಅವಕಾಶವಿದ್ದು, ಈ ಸಂಖ್ಯೆ ಇನ್ನಷ್ಟು ಹೆಚ್ಚಲಿದೆ. ಬಿತ್ತನೆ ಕಡಿಮೆಯಾಗಿರುವ ಕಾರಣ ನಿಯಮಾವಳಿಗಳಂತೆ ರೈತರಿಗೆ ಗರಿಷ್ಠ ಪರಿಹಾರ ಸಿಗಲಿದೆ ಎಂದರು.

ಸದ್ಯ ಹಿರಿಯೂರು ತಾಲ್ಲೂಕಿನ 8 ಗ್ರಾಮಗಳಿಗೆ ಮಾತ್ರ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇನ್ನುಳಿದ ಭಾಗಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವ ಎದುರಾಗಿಲ್ಲ. ಆದಾಗ್ಯೂ, ಮುಂಜಾಗ್ರತಾ ಕ್ರಮವಾಗಿ ಶುದ್ಧ ಕುಡಿಯುವ ನೀರಿನ ಘಟಕಗಳ ನಿರ್ವಹಣೆ, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಪರ್ಯಾಯ ನೀರಿನ ವ್ಯವಸ್ಥೆ ಕಲ್ಪಿಸಲು ಜಿಲ್ಲಾಧಿಕಾರಿ, ಸಿಇಒ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
ಜಿಲ್ಲೆಯ ರಸ್ತೆಗಳ ಸ್ಥಿತಿಗತಿ, ಬೆಳೆ ನಷ್ಟ ಹಾಗೂ ಕುಡಿಯುವ ನೀರಿನ ಸೌಲಭ್ಯಗಳ ಕುರಿತು ಕ್ರೋಡೀಕೃತ ವರದಿ ಸಿದ್ಧಪಡಿಸಲು ಮಂಗಳವಾರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಸದರು, ಶಾಸಕರು ಹಾಗೂ ಎಂಎಲ್ಸಿಗಳು ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳೊಂದಿಗೆ ಮಹತ್ವದ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ವೀರೇಂದ್ರ ಪಪ್ಪಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಾಜ್ಪೀರ್, ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಕೃಷಿ ಜಂಟಿ ನಿರ್ದೇಶಕ ಮಂಜುನಾಥ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.









